Homeಮುಖಪುಟಉತ್ತರ ಪ್ರದೇಶ: ಪೊಲೀಸ್ ಭದ್ರತೆಯಲ್ಲೇ ದುಷ್ಕರ್ಮಿಗಳ ಗುಂಡೇಟಿಗೆ ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಬಲಿ

ಉತ್ತರ ಪ್ರದೇಶ: ಪೊಲೀಸ್ ಭದ್ರತೆಯಲ್ಲೇ ದುಷ್ಕರ್ಮಿಗಳ ಗುಂಡೇಟಿಗೆ ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಬಲಿ

- Advertisement -
- Advertisement -

ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳು ಗುಂಡಿ ದಾಳಿ ನಡೆಸಿದ್ದಾರೆ.

ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಮೇಲೆ ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕೃತ್ಯ ಎಸಗಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೂವರು ಆರೋಪಿಗಳನ್ನು ಅರುಣ್ ಮೌರ್ಯ, ಲವಲೇಶ್ ತಿವಾರಿ ಮತ್ತು ಸನ್ನಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಪತ್ರಿಕಾ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಅತಿಕ್ ಅಹಮದ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಶೂಟರ್ ಲವಲೇಶ್ ತಿವಾರಿ ತಂದೆ ಯಜ್ಞ ತಿವಾರಿ ಮಾತನಾಡಿ, ”ನಮಗೂ ಅವನಿಗೂ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಪೊಲೀಸರು ಮತ್ತು ಮಾಧ್ಯಮದವರ ಎದುರೇ ಪತ್ರಕರ್ತರ ಸೋಗಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅತೀಕ್‌ ಮತ್ತು ಅಶ್ರಫ್‌ ಮೇಲೆ ಏಕಾಏಕಿ ದಾಳಿ ನಡೆಸಿದರು. ತೀರಾ ಹತ್ತಿರದಲ್ಲಿಯೇ ದಾಳಿ ನಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಡರಾತ್ರಿ ನಡೆದ ಸಭೆ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ಹೆಚ್ಚಿನ ಜಾಗರೂಕರಾಗಿರಲು ಮತ್ತು ರಾಜ್ಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಸೂಚನೆ ನೀಡಿದ್ದಾರೆ. ಘಟನೆಯ ನಂತರ, ಎಲ್ಲಾ 75 ಯುಪಿ ಜಿಲ್ಲೆಗಳಲ್ಲಿ ಸಿಆರ್‌ಪಿಸಿ ಸೆಕ್ಷನ್ 144ಅನ್ನು ವಿಧಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ರಂಜಾನ್ ಪ್ರಾರ್ಥನಾ ಸಭೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ

ಘಟನೆಯ ಬಗ್ಗೆ ವದಂತಿಗಳಿಗೆ ಗಮನ ಕೊಡಬೇಡಿ ಎಂದು ಯೋಗಿ ಆದಿತ್ಯನಾಥ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಯವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಯುಪಿ ಗೃಹ ಕಾರ್ಯದರ್ಶಿ ಸಂಜಯ್ ಪ್ರಸಾದ್, ಯುಪಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್ ಕೆ ವಿಶ್ವಕರ್ಮ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಯಾಗ್‌ರಾಜ್ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕಲಾಗುತ್ತಿದ್ದು ಈ ಬಗ್ಗೆ ಮೇಲ್ವಿಚಾರಣೆ ಮಾಡಲು ಮತ್ತು ಈ ನಿಟ್ಟಿನಲ್ಲಿ ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡುವ ಜನರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ರಾಜ್ಯ ಪೊಲೀಸ್ ಸಾಮಾಜಿಕ ಮಾಧ್ಯಮ ತಂಡಕ್ಕೆ ಆದೇಶಿಸಿದ್ದಾರೆ.

ಈ ಘಟನೆ ಕುರಿತು ಮಹುವಾ ಮೊಯಿತ್ರಾ ಟ್ವೀಟ್ ಮಾಡಿದ್ದು, ”ಬಿಜೆಪಿ ಭಾರತವನ್ನು ಮಾಫಿಯಾ ಗಣರಾಜ್ಯವನ್ನಾಗಿ ಮಾಡಿದೆ ಎಂದು ಇಲ್ಲಿಯೂ ಹೇಳುತ್ತೇನೆ, ವಿದೇಶದಲ್ಲೂ ಹೇಳುತ್ತೇನೆ, ಎಲ್ಲೆಲ್ಲೂ ಹೇಳುತ್ತೇನೆ ಏಕೆಂದರೆ ಇದು ಸತ್ಯ. ಬಂಧನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಮತ್ತು ಕ್ಯಾಮೆರಾಗಳ ಮುಂದೆಯೇ ಗುಂಡಿಕ್ಕಿ ಕೊಂದರು- ಇದು ಕಾನೂನು ನಿಯಮಗಳ ಸಾವು” ಎಂದಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, “ಉತ್ತರ ಪ್ರದೇಶದಲ್ಲಿ ಅಪರಾಧ ಉತ್ತುಂಗಕ್ಕೇರಿದೆ ಮತ್ತು ಅಪರಾಧಿಗಳು ಬೆಚ್ಚಿಬೀಳುತ್ತಿಲ್ಲ. ಪೊಲೀಸ್ ಸರ್ಪಗಾವಲಿನ ನಡುವೆ ಯಾರನ್ನಾದರೂ ಗುಂಡಿಕ್ಕಿ ಕೊಲ್ಲಬಹುದು, ಆಗ ಸಾಮಾನ್ಯರ ಪಾಡೇನು? ಇದರಿಂದ ಸಾರ್ವಜನಿಕರ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದ್ದು, ಕೆಲವರು ಉದ್ದೇಶಪೂರ್ವಕವಾಗಿ ಇಂತಹ ವಾತಾವರಣ ಸೃಷ್ಟಿಸುತ್ತಿರುವಂತೆ ಕಾಣುತ್ತಿದೆ”

ಅತೀಕ್-ಅಶ್ರಫ್ ಹತ್ಯೆ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಾತನಾಡಿದ್ದು, ”ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಮತ್ತು ಈ ಬಗ್ಗೆ ತಂಡವನ್ನು ರಚಿಸಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ಗೆ ನಾನು ಒತ್ತಾಯಿಸುತ್ತೇನೆ. ಅಲ್ಲಿರುವ ಎಲ್ಲಾ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ತೆಗೆದುಹಾಕಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿದ್ದಾರೆ.

ಬಿಎಸ್‌ಪಿಯ ಮಾಜಿ ಶಾಸಕ ರಾಜು ಪಾಲ್‌ ಅವರ ಹತ್ಯೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಕೊಲೆ ಪ್ರಕರಣದಲ್ಲಿ ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಆರೋಪಿಗಳಾಗಿದ್ದರು.

ಗುರುವಾರ ಉತ್ತರ ಪ್ರದೇಶದ ಪೊಲೀಸರು ಝಾನ್ಸಿಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಉಮೇಶ್‌ ಪಾಲ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಅತೀಕ್‌ ಅಹ್ಮದ್‌ನ ಪುತ್ರ ಅಸಾದ್‌ ಹಾಗೂ ಆತನ ಸಹಚರ ಗುಲಾಮ್‌  ಹತ್ಯೆಯಾಗಿದ್ದರು. ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಮೇಲೆ ಉಮೇಶ್‌ ಪಾಲ್‌ ಕೊಲೆ ಸೇರಿದಂತೆ ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...