Homeಕರ್ನಾಟಕವಿ. ಶ್ರೀನಿವಾಸ್ ಪ್ರಸಾದ್ ನಿಧನ: ಸಿದ್ದರಾಮಯ್ಯ, ಖರ್ಗೆ, ಮಹದೇವಪ್ಪ ಸೇರಿದಂತೆ ಹಲವರಿಂದ ಸಂತಾಪ

ವಿ. ಶ್ರೀನಿವಾಸ್ ಪ್ರಸಾದ್ ನಿಧನ: ಸಿದ್ದರಾಮಯ್ಯ, ಖರ್ಗೆ, ಮಹದೇವಪ್ಪ ಸೇರಿದಂತೆ ಹಲವರಿಂದ ಸಂತಾಪ

- Advertisement -
- Advertisement -

ದಲಿತ ಚಳವಳಿಯ ಹಿರಿಯ ನಾಯಕ, ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಅವರ ಬಹುಕಾಲದ ಒಡನಾಡಿಯಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಎಚ್‌.ಸಿ. ಮಹದೇವಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಪ್ರಮುಖ ರಾಜಕಾರಣಿಗಳು, ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

ಶ್ರೀನಿವಾಸ್ ಪ್ರಸಾದ್ ನಿಧನರಾದ ನಂತರ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ದಲಿತ ದಮನಿತರ ಪರವಾದ ದಿಟ್ಟ ದನಿ, ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ’ ಎಂದು ಹೇಳಿದ್ದಾರೆ.

“ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ. ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಿಎಂ ನೋವು ತೋಡಿಕೊಂಡಿದ್ದಾರೆ.

‘ಸ್ನೇಹಿತ, ಸಂಸದರು, ಕರ್ನಾಟಕ ಕಂಡಂತಹ ಶ್ರೇಷ್ಠ ಮುತ್ಸದ್ದಿ ನಾಯಕರಲ್ಲಿ ಒಬ್ಬರಾದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆಯು ಅಪಾರ ನೋವನ್ನುಂಟುಮಾಡಿದೆ. ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನು ಅಳವಡಿಸಿಕೊಂಡು ಶೋಷಿತರ ಏಳಿಗೆಗಾಗಿ ಹಾಗೂ ಅನ್ಯಾಯ, ಅಸಮಾನತೆಯ ವಿರುದ್ಧದ ಹೋರಾಟಕ್ಕೆ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಶ್ರೀನಿವಾಸ್ ಪ್ರಸಾದ್ ಅವರು ಆದರ್ಶವಾಗಿ ಇದ್ದಂತಹ ನಾಯಕರು. ಅವರ ಹೋರಾಟದ ಹಾಗೂ ಸಚ್ಚಾರಿತ್ರ್ಯದ ಬದುಕು ಯುವಕರಿಗೆ ಸದಾ ಸ್ಫೂರ್ತಿ ನೀಡುವಂತಹದ್ದು, ಸಾಮಾಜಿಕ ನ್ಯಾಯದ ಪರವಾದ ರಾಜಕಾರಣಕ್ಕೆ ಅವರ ಸೇವೆ ಇನ್ನಷ್ಟು ಅಗತ್ಯವಿತ್ತು, ಕೇಂದ್ರ ಸಚಿವರಾಗಿ, ರಾಜ್ಯದ ಸಚಿವರಾಗಿ ಸಂಸದರಾಗಿ ಅವರ ಸೇವೆ ಅನನ್ಯವಾದುದು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶ್ರೀನಿವಾಸ್ ಪ್ರಸಾಧ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇತ್ತೀಚೆಗೆ ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ಮೈಸೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ.

‘ಅವರ ನೇರ, ನಿಷ್ಠುರ ಹಾಗೂ ಪ್ರಾಮಾಣಿಕ ವ್ಯಕ್ತಿತ್ವ ಹಾಗೂ ಬಾಬಾ ಸಾಹೇಬರ ಸಮಸಮಾಜದ ನಿರ್ಮಾಣದ ಬಗೆಗಿನ ಅವರ ಬದ್ಧತೆ ಹಾಗೂ ಹೋರಾಟ ಸದಾ ಸ್ಪೂರ್ತಿದಾಯಕ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಖರ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದಲಿತ ಚಳವಳಿಯಲ್ಲಿ ಶ್ರೀನಿವಾಸ್ ಪರಸಾದ್ ಅವರ ಬಹುಕಾಲದ ಒಡನಾಡಿಯಾಗಿದ್ದ ಸಚಿವ ಮಹದೇವಪ್ಪ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, “ಸಾಕಷ್ಟು ಮನುಷ್ಯ ಪ್ರೀತಿಯನ್ನು ಇಟ್ಟುಕೊಂಡು, ಸೈದ್ಧಾಂತಿಕ ವಿಷಯದಲ್ಲಿ ಎಂದೂ ರಾಜಿ‌ಮಾಡಿಕೊಳ್ಳದೇ, ಶೋಷಿತ ಸಮುದಾಯಗಳ ಹಿತಾಸಕ್ತಿಯ ಪರವಾಗಿದ್ದ ಧೀಮಂತ ನಾಯಕ, ದಲಿತರ ಸ್ವಾಭಿಮಾನದ ದನಿಯಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರು ನಮ್ಮನ್ನು ಅಗಲಿದ್ದು ಅವರಿಗೆ ನನ್ನ ಭಾವಪೂರ್ಣ ನಮನಗಳು. ಇತ್ತೀಚೆಗಷ್ಟೇ ರಾಜಕೀಯ ನಿವೃತ್ತಿ ಘೋಷಿಸಿದ್ದ ಅವರಿಗೆ ಶುಭಕೋರಿ ಅವರ ಯೋಗಕ್ಷೇಮ ವಿಚಾರಿಸುವ ಸಲುವಾಗಿ ತೆರಳಿದ್ದ ವೇಳೆ ಸುಮಾರು ಹೊತ್ತು ಅವರೊಂದಿಗೆ ಚರ್ಚಿಸಿದ್ದೆನು. ಸಮಾನ ಮನಸ್ಕರಾದ ನೀವೆಲ್ಲರೂ ಬಂದಿದ್ದು ನನಗೆ ತೀವ್ರ ಸಂತೋಷ ತಂದಿದೆ ಎಂದು ಪ್ರಸಾದ್ ಅವರು ನನ್ನೆಡೆ ಆಪ್ತ ಭಾವನೆಯಿಂದ ನೋಡಿದ್ದನ್ನು ನಾನು ಎಂದಿಗೂ ಮರೆಯಲಾರೆ” ಎಂದು ಬರೆದುಕೊಂಡಿದ್ದಾರೆ.

“ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ನನಗೆ ನೋವುಂಟು ಮಾಡಿದೆ. ತಮ್ಮ ಜೀವಿತಾವಧಿಯಲ್ಲಿ 14 ಚುನಾವಣೆಗಳನ್ನು ಎದುರಿಸಿದ್ದ ಅವರ ರಾಜಕೀಯ ಜೀವನ ಮಾದರಿಯ ಹಾದಿ. ಆರು ಅವಧಿಗೆ ಸಂಸದರಾಗಿ, ಎರಡು ಅವಧಿಗೆ ಶಾಸಕರಾಗಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಪ್ರಸಾದ್ ಅವರು; 27 ವರ್ಷಗಳ ಸುದೀರ್ಘ ಸಂಸತ್ ಸದಸ್ಯರಾಗಿ 7 ಪ್ರಧಾನಿಗಳನ್ನು ಕಂಡಿದ್ದರು. ಅವರು ಅಪರೂಪದಲ್ಲಿ ಅಪರೂಪದ ಜನನಾಯಕರಾಗಿದ್ದರು. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

“ಸಮಸಮಾಜದ ಗಟ್ಟಿ ಪ್ರತಿಪಾದಕರು, ರಾಜ್ಯ ಕಂಡ ಮೇರು ನಾಯಕರಲ್ಲಿ ಒಬ್ಬರಾದ ಶ್ರೀನಿವಾಸ ಪ್ರಸಾದ್ ಅವರ ಅಕಾಲಿಕ ನಿಧನ ನಾಡಿಗೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದಿಂದ ರಾಜ್ಯದಲ್ಲಿ ಪ್ರಗತಿಪರ ರಾಜಕಾರಣದ ಕೊಂಡಿ ಕಳಚಿದಂತಾಗಿದೆ. ಬುದ್ದ ಬಸವ ಅಂಬೇಡ್ಕರ್ ತತ್ವಗಳ ಆಧಾರದಲ್ಲಿ ಅನ್ಯಾಯದ ವಿರುದ್ಧದ ಹೋರಾಟದ ಹಾದಿಯನ್ನೇ ಬದುಕಾಗಿಸಿದ್ದ, ವಯಕ್ತಿಕವಾಗಿ ಮಾರ್ಗದರ್ಶಕರಾಗಿದ್ದ ಅವರ ಜೀವನ ನಾಡಿನ ಮುಂದಿನ ಪೀಳಿಗೆಗೆ ಸದಾ ನಂದಾದೀಪದಂತೆ ಉಳಿಯಲಿದೆ. ಇವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನ ವರ್ಗಕ್ಕೆ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಚಾಮರಾಜನಗರ ಸಂಸದ, ಹಿರಿಯ ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ನಿಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...