ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿದ್ಯಾಗಮ ಯೋಜನೆಗೆ ತೆರಳಿದ್ದ ಹಲವು ಶಿಕ್ಷಕರು ಕೋವಿಡ್ ತಗುಲಿ ಮೃತಪಟ್ಟಿದ್ದಾರೆ ಎಂಬ ಸುದ್ದಿ ಬಂದ ನಂತರ ಹಲವರು ಈ ಕಾರ್ಯಕ್ರಮ ಮತ್ತು ಶಾಲೆ ತೆರೆಯುವ ಸರ್ಕಾರದ ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದರು.
“ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ. ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ. ಆದರೆ ಕೋವಿಡ್ ಕಾರಣದಿಂದ ತಾತ್ಕಾಲಿಕವಾಗಿ ನಿಲ್ಲಿಸುತ್ತಿದ್ದೇವೆ” ಎಂದು ಸಚಿವರ ತಿಳಿಸಿದ್ದಾರೆ.
ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಹಾಗೂ ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ.
ಈ ಹಿಂದೆ ಸರ್ಕಾರ ವಿವಿಧ ತರಗತಿಗಳಿಗೆ ಪರೀಕ್ಷೆ ನಡೆಸುವ ಇರಾದೆ ವ್ಯಕ್ತಪಡಿಸಿದಾಗ ಸರ್ಕಾರದ ನಿಲುವಿಗೆ ನಾನು ಬೆಂಬಲಿಸಿದ್ದೆ. ಆದರೆ ಈಗಿನ ಪರಿಸ್ಥಿತಿಯೇ ಬೇರೆಯಿದೆ. ಕೊರೊನಾ ಮಿತಿಮೀರಿ ಹರಡುತ್ತಿರುವ ಇಂಥಾ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವುದು ದೊಡ್ಡ ಅವಘಡಕ್ಕೆ ಎಡೆಮಾಡಿಕೊಡಲಿದೆ. 1/5#schoolreopening pic.twitter.com/HVpt84lVZk
— Siddaramaiah (@siddaramaiah) October 9, 2020
ಈ ಹಿಂದೆ ಸರ್ಕಾರ ವಿವಿಧ ತರಗತಿಗಳಿಗೆ ಪರೀಕ್ಷೆ ನಡೆಸುವ ಇರಾದೆ ವ್ಯಕ್ತಪಡಿಸಿದಾಗ ಸರ್ಕಾರದ ನಿಲುವಿಗೆ ನಾನು ಬೆಂಬಲಿಸಿದ್ದೆ. ಆದರೆ ಈಗಿನ ಪರಿಸ್ಥಿತಿಯೇ ಬೇರೆಯಿದೆ. ಕೊರೊನಾ ಮಿತಿಮೀರಿ ಹರಡುತ್ತಿರುವ ಇಂಥಾ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವುದು ದೊಡ್ಡ ಅವಘಡಕ್ಕೆ ಎಡೆಮಾಡಿಕೊಡಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದರು.
ಇದನ್ನೂ ಓದಿ; ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ