ಭಾರತೀಯ ಕುಸ್ತಿ ಫೇಡರೇಶನ್ (ಡಬ್ಲ್ಯುಎಫ್ಐ)ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಭಾಗವಾಗಿ ಕುಸ್ತಿಪಟು ವಿನೇಶ್ ಫೋಗಟ್ ತಮ್ಮ ಅರ್ಜುನ ಮತ್ತು ಖೇಲ್ ರತ್ನ ಪ್ರಶಸ್ತಿ ಹಿಂದಿರುಗಿಸಿದ್ದಾರೆ.
ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ನ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಇಂದು (ಡಿ.30)ತಮ್ಮ ಅತ್ಯುನ್ನತ ಪ್ರಶಸ್ತಿಗಳನ್ನು ನವದೆಹಲಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿಟ್ಟು ತೆರಳಿದ್ದಾರೆ.
यह दिन किसी खिलाड़ी के जीवन में न आए। देश की महिला पहलवान सबसे बुरे दौर से गुज़र रही हैं। #vineshphogat pic.twitter.com/bT3pQngUuI
— Bajrang Punia 🇮🇳 (@BajrangPunia) December 30, 2023
ಕಳೆದ ವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾವನಾತ್ಮಕ ಪತ್ರ ಬರೆದಿದ್ದ ವಿನೇಶ್ ಫೋಗಟ್, ಪ್ರಶಸ್ತಿ ಹಿಂದಿರುಗಿಸುವುದಾಗಿ ಹೇಳಿದ್ದರು. ಅದರಂತೆ ಇಂದು ಪ್ರಶಸ್ತಿ ಮರಳಿಸಿದ್ದಾರೆ.
ವಿನೇಶ್ ಫೋಗಟ್ ತಮ್ಮ ಪ್ರಶಸ್ತಿಗಳನ್ನು ನವದೆಹಲಿಯ ಪ್ರಧಾನ ಮಂತ್ರಿ ಕಚೇರಿಯ ಹೊರಗೆ ಇಡಲು ಮುಂದಾಗಿದ್ದರು. ಆದರೆ, ಕರ್ತವ್ಯ ಪಥದಲ್ಲಿ ಪೊಲೀಸರು ಅವರನ್ನು ತಡೆದರು. ಹಾಗಾಗಿ, ವಿನೇಶ್ ತನ್ನ ಪ್ರಶಸ್ತಿಗಳನ್ನು ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲೇ ಬಿಟ್ಟು ತೆರಳಿದ್ದಾರೆ.
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಸಿಂಗ್ ವಿರುದ್ದ ಕ್ರಮಕೈಗೊಳ್ಳದ ಹಿನ್ನೆಲೆ ಮತ್ತು ಬ್ರಿಜ್ ಭೂಷಣ್ ಆಪ್ತ ಕುಸ್ತಿ ಫೆಡರೇಶನ್ನ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವುದಕ್ಕೆ ಬೇಸಗೊಂಡು ದೇಶದ ಖ್ಯಾತ ಕುಸ್ತಿಟುಗಳು ತಮ್ಮ ಉನ್ನತ ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದಾರೆ.
ಡಿಸೆಂಬರ್ 21ರಂದು ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್ಐ)ಗೆ ನಡೆದ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಒಲಿಂಪಿಕ್ ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲಿಕ್ ತಮ್ಮ ಬೂಟು ಕಳಚಿಟ್ಟು ಕುಸ್ತಿಗೆ ವಿದಾಯ ಹೇಳಿದ್ದರು.
ಸಾಕ್ಷಿ ಮಲಿಕ್ ಬೆಂಬಲಿಸಿದ್ದ ಮತ್ತೋರ್ವ ಕುಸ್ತಿಪಟು ಬಜರಂಗ್ ಪೂನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ದೆಹಲಿಯ ಕರ್ತವ್ಯ ಪಥದಲ್ಲಿ ಇಟ್ಟು ಪ್ರಧಾನಿಗೆ ತಲುಪಿಸುವಂತೆ ಹೇಳಿ ಹೊರಟು ಹೋಗಿದ್ದರು. ಇದರ ಬೆನ್ನಲ್ಲೇ ಕುಸ್ತಿಪಟು ವಿರೇಂದರ್ ಯಾದವ್ ತಮ್ಮ ಪದ್ಮಶ್ರೀ ಪ್ರಶಸ್ತಿ ಮರಳಿಸುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಘೋಷಿಡಸಿದ್ದರು. ಬಳಿಕ ವಿನೇಶ್ ಫೋಗಟ್ ಕೂಡ ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುವ ಘೋಷಣೆ ಮಾಡಿದ್ದರು.
ಇದನ್ನೂ ಓದಿ : ಎಸ್ಸಿ-ಎಸ್ಟಿ ವಿದ್ಯಾರ್ಥಿವೇತನ ಹಗರಣ: ಶೈಕ್ಷಣಿಕ ಸಂಸ್ಥೆಗೆ ಸೇರಿದ 2 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ