ಮಣಿಪುರದಲ್ಲಿ ಹಿಂಸಾಚಾರ ನಿಲ್ಲುತ್ತಿಲ್ಲ, ಉಖ್ರುಲ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಕುಕಿ ಸಮುದಾಯಕ್ಕೆ ಸೇರಿದ ಮೂವರು ಸಾವನ್ನಪ್ಪಿದ್ದಾರೆ. ಥಾವೈ ಕುಕಿ ಗ್ರಾಮದಲ್ಲಿ ಮುಂಜಾನೆ 4.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಉಖ್ರುಲ್ ಪೊಲೀಸ್ ವರಿಷ್ಠಾಧಿಕಾರಿ ನಿಂಗ್ಶೆಮ್ ವಶುಮ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ವಶುಮ್, ”ಇದು ಅಪ್ರಚೋದಿತ ಮತ್ತು ಉದ್ದೇಶಪೂರ್ವಕ ದಾಳಿಯಾಗಿದೆ. ಮೂರು ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಕಣಿವೆಯ ಕಡೆಯಿಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಬೆಟ್ಟಗಳಿಗೆ [ಒಳಗೆ] ಒಳನುಗ್ಗಿ ದಾಳಿ ನಡೆಸಿದ್ದಾರೆ ಎಂದು ನಾವು ಅನುಮಾನಿಸುತ್ತೇವೆ. ಸತ್ತವರು ಗ್ರಾಮವನ್ನು ಕಾವಲು ಕಾಯುತ್ತಿದ್ದ ಸ್ವಯಂಸೇವಕರಾಗಿದ್ದಾರೆ ಎಂದು ಹೇಳಿದ್ದಾರೆ.
ಅಧಿಕಾರಿಗಳು ಮೃತಪಟ್ಟವರ ಹೆಸರನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷದಲ್ಲಿ ಇತ್ತೀಚಿನ ಹಿಂಸಾಚಾರದ ಘಟನೆಯೊಂದಿಗೆ 190 ಜನರು ಸಾವನ್ನಪ್ಪಿದ್ದಾರೆ. ಮೇ 3 ರಿಂದ ರಾಜ್ಯದಲ್ಲಿ ಕುಕಿ ಮತ್ತು ಮೈತಿ ಸಮುದಾಯಗಳ ನಡುವೆ ಸಂಘರ್ಷ ಆರಂಭವಾಗಿದೆ.
ಹಿಂಸಾಚಾರ ಭುಗಿಲೆದ್ದ ನಂತರ ಸುಮಾರು 60,000 ಜನರು ನಿರಾಶ್ರಿತರಾಗಿದ್ದಾರೆ. ಸಾಕಷ್ಟು ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ವರದಿಯಾಗಿವೆ. ಪೊಲೀಸ್ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದು, ಹಲವು ಮನೆಗಳಿಗೆ ಬೆಂಕಿ ಹಚ್ಚಿದ ಘಟನೆಗಳೂ ನಡೆದಿವೆ.
ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
ಇದನ್ನೂ ಓದಿ: ಮಣಿಪುರ ಹೊತ್ತಿ ಉರಿಯುತ್ತಿದ್ದರೆ, ಬಿಜೆಪಿ ಮಾತ್ರ ಚುನಾವಣಾ ಪ್ರಚಾರ ಮಾಡುತ್ತಿದೆ: ಖರ್ಗೆ ವಾಗ್ದಾಳಿ