“ನಾವು ಗಾಂಧಿಯನ್ನೇ ಬಿಟ್ಟಿಲ್ಲ, ನೀವು ಯಾವ ಲೆಕ್ಕ ಸ್ವಾಮಿ?” ಎಂದು ಹೇಳಿಕೆ ನೀಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ಕೊಲೆ ಬೆದರಿಕೆ ಹಾಕಿದ್ದ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರನನ್ನು ಬಂಧಿಸಲಾಗಿದೆ ಎಂದು ವಾರ್ತಾಭಾರತಿ ವರದಿ ಮಾಡಿದೆ.
ಧರ್ಮೇಂದ್ರ ವಿರುದ್ಧ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿ ಡಾ.ಲೋಹಿತ್ ಕುಮಾರ್ ಸುವರ್ಣ ಎಂಬವರು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿತ್ತು. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪ್ರತಿಕ್ರಿಯಿಸಿರುವ ಧರ್ಮೇಂದ್ರ, “ನಾನು ಕೊಲೆ ಬೆದರಿಕೆ ಹಾಕಿಲ್ಲ; ಮಾಧ್ಯಮಗಳಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದು ಯೂಟರ್ನ್ ಹೊಡೆದಿದ್ದರು.
ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ ಸ್ವಾಮಿ, ನೀವು ಯಾವ ಲೆಕ್ಕ ನಮಗೆ? ಗಾಂಧೀಜಿಯನ್ನೇ ಹತ್ಯೆ ಮಾಡಿದವರಿಗೆ ನಿಮ್ಮ ವಿಚಾರದಲ್ಲಿ ಆಲೋಚನೆ ಮಾಡಲ್ಲಿಕ್ಕೆ ಸಾಧ್ಯವಿಲ್ಲ ಎನ್ನುತ್ತೀರಾ? ಮಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಪ್ರಚೋದನಕಾರಿ ಹೇಳಿಕೆ pic.twitter.com/K0mZLbDtLX
— Naanu Gauri (@naanugauri) September 18, 2021
ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ ಸ್ವಾಮಿ, ಇನ್ನು ನೀವು ಯಾವ ಲೆಕ್ಕ ನಮಗೆ? ಹಿಂದೂಗಳ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದವರಿಗೆ ನಿಮ್ಮ ವಿಚಾರದಲ್ಲಿ ಆಲೋಚನೆ ಮಾಡಲ್ಲಿಕ್ಕೆ ಸಾಧ್ಯವಿಲ್ಲ ಎನ್ನುತ್ತೀರಾ? ಎಂದು ಮಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಅವರನ್ನು ಬಂಧಿಸಿರುವುದಾಗಿ ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿಯವರೆ, ಯಡಿಯೂರಪ್ಪನವರೆ, ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರೆ ನೆನಪಿಟ್ಟುಕೊಳ್ಳಿ ಬಹಳ ಕಠಿಣ ಆದೀತು ನಿಮಗೆ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಮುಂದುವರಿದು ಮೊಟ್ಟೆ ಕದ್ದಾಯಿತು. ಮೊಟ್ಟೆಯಲ್ಲಿ ದುಡ್ಡು ಮಾಡಿದವರು ಈಗ ದೇವಸ್ಥಾನಗಳಲ್ಲಿ ದುಡ್ಡು ಮಾಡಲು ಯಾಕೆ ಹೋಗುತ್ತಿದ್ದೀರಿ? ನಿಮ್ಮ ಮೇಲೆ ಕೇಸು ದಾಖಲೆ ಮಾಡಿದ್ದೇವೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕಳೆದ ಸಲ ಚಿತ್ರದುರ್ಗದಲ್ಲಿ ಬಿಜೆಪಿ ಸರ್ಕಾರದಿಂದ ದೇವಸ್ಥಾನದ ಮೇಲಿನ ದಾಳಿ ಖಂಡಿಸಿ ಹೋರಾಟ ಮಾಡಿದ್ದೆವು. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಒಂದು ದೇವಸ್ಥಾನ ನೆಲಸಮ ಆಯ್ತು. ಈಗ ಮೈಸೂರಿನಲ್ಲಿ ಪುರಾತನ ದೇವಸ್ಥಾನ ನೆಲಸಮ ಆಯ್ತು. ಅಲ್ಲದೆ ಇನ್ನೂ ಅನೇಕ ಧಾರ್ಮಿಕ ಕೇಂದ್ರಗಳ ಪಟ್ಟಿ ಕೊಟ್ಟಿದೆ. ಆದರೆ ಎಲ್ಲಾದರೂ ಇತಿಹಾಸದಲ್ಲಿ ಒಂದೇ ಒಂದು ಮಸೀದಿ, ಚರ್ಚ್ ಒಡೆದದ್ದನ್ನು ತೋರಿಸಲಿ. ಅದ್ಯಾಕೆ ದೇವಸ್ಥಾನಗಳೇ ಮಾತ್ರ ಟಾರ್ಗೆಟ್ ಆಗುತ್ತಿವೆ? ಎಂದು ಧರ್ಮೇಂದ್ರ ಹೇಳಿದ್ದು ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ: ಗಾಂಧೀಜಿಯನ್ನೆ ಹತ್ಯೆ ಮಾಡಿದವರು ನಾವು, ಇನ್ನು ನೀವು ಯಾವ ಲೆಕ್ಕ?: ಹಿಂದೂ ಮಹಾಸಭಾ ಮುಖಂಡನ ಪ್ರಚೋದನಾಕಾರಿ ಹೇಳಿಕೆ!