ಬೆಂಗಳೂರು: ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್.ಆರ್.ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ನವೆಂಬರ್ 7, ಶುಕ್ರವಾರ ವಿಧಾನಸೌಧ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲಿಕರ ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ದಿನಾಂಕ 2025 ಮೇ 6ರಂದು ಎಫ್ಆರ್.ಪಿ ನಿಗದಿಪಡಿಸಿದೆ. ಈ ಎಫ್.ಆರ್.ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂ.ಎಸ್.ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ ಎಂದು ಹೇಳಿದರು.
ಇದೇ ವೇಳೆ ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಗುವುದು ಎಂದರು.
ಸಭೆಯಲ್ಲಿ ತಮ್ಮ ಸಮಸ್ಯೆ ಹೇಳಿಕೊಂಡ ಕಾರ್ಖಾನೆ ಮಾಲೀಕರು ಸಕ್ಕರೆ ಉತ್ಪಾದನೆ ಮತ್ತು ಮಾರಾಟ, ಎಥಿನಾಲ್ ಉತ್ಪಾದನೆ ಮತ್ತು ಬೆಲೆ ನಿಗಧಿ, ಸಕ್ಕರೆ ರಫ್ತು ಮತ್ತು ಬೆಲೆ ನಿಗಧಿ ಎಲ್ಲವೂ ಕೇಂದ್ರ ಸರ್ಕಾರದ ಕೈಯಲ್ಲಿದೆ. ಕೇಂದ್ರದ ನೀತಿಯಿಂದ ದಕ್ಷಿಣ ಭಾರತದ ಕಾರ್ಖಾನೆಗಳು ಸಮಸ್ಯೆಯಲ್ಲಿವೆ, ಉತ್ತರ ಭಾರತದ ಕಾರ್ಖಾನೆಗಳು ಅನುಕೂಲಕರವಾಗಿವೆ ಎಂದು ಆರೋಪಿಸಿದರು.
ಈ ವೇಳೆ ರೈತರ ಬೇಡಿಕೆ ಈಡೇರಿಸುವುದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಪ್ರಮುಖವಾಗಿವೆ ಮತ್ತು ಕಾರ್ಖಾನೆಗಳ ಜವಾಬ್ದಾರಿಯು ಇದೆ ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಹಾಗೆ ಕಾರ್ಖಾನೆ ಮಾಲೀಕರ ಸಮಸ್ಯೆಗಳಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆಯೂ ಪರಿಶೀಲಿಸೋಣ ಎಂದು ಭರವಸೆ ನೀಡಿದರು.
ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲಿಕರ ಪರವಾಗಿ ಮಾತನಾಡಿದ ಮುರುಗೇಶ್ ನಿರಾಣಿ, ಎಲ್ಲಾ ಸರ್ಕಾರಗಳಲ್ಲೂ ಕಬ್ಬು ಬೆಳೆಗಾರರ ಸಮಸ್ಯೆ ಮುಂದುವರೆಯುತ್ತಾ ಬಂದಿದೆ. ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದವನ್ನು ರಾಜ್ಯ ಸರ್ಕಾರ ನವೀಕರಣ ಮಾಡಿರುವುದಿಲ್ಲ. ಮಹಾರಾಷ್ಟ್ರದಲ್ಲಿ ಸಕ್ಕರೆ ಕಾರ್ಖಾನೆಯವರಿಂದ ಖರೀದಿಸುವ ವಿದ್ಯುತ್ ಪ್ರತಿ ಯುನಿಟ್ಗೆ ರೂ. 6 ಪಾವತಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಒಪ್ಪಂದ ಮಾಡಬೇಕಿದೆ. ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸಿರುವುದನ್ನು ಕೈಬಿಡಬೇಕು. ಸಕ್ಕರೆ ಕಾರ್ಖಾನೆಗಳ ನಡುವಿನ ಅಂತರ ಕನಿಷ್ಠ 25 ಕಿಮೀ ನಿಗದಿಪಡಿಸಬೇಕು. ಏವಿಯೇಷನ್ ಇಂಧನಕ್ಕೆ ಎಥೆನಾಲ್ ಮಿಶ್ರಣ ಅನುಮತಿಯನ್ನು ಆದಷ್ಟು ಬೇಗನೆ ನೀಡುವಂತೆ ಪ್ರಧಾನಿ ಅವರಿಗೆ ಮನವಿ ಮಾಡಬೇಕು. ಪ್ರಸ್ತುತ ರೈತರಿಗೆ ಎಫ್ಆರ್.ಪಿ ಪ್ರಕಾರ ದರ ನೀಡಲಾಗುವುದು. ಹೆಚ್ಚುವರಿ ಆದಾಯ ಸಾಧ್ಯವಾದರೆ ಸೀಸನ್ ಮುಗಿದ ಬಳಿಕ ಅದನ್ನು ರೈತರಿಗೆ ಹಂಚಿಕೆ ಮಾಡಲು ಸಿದ್ಧರಿದ್ದೇವೆ ಎಂದರು.
ಎಥೆನಾಲ್ ಎಂಎಸ್.ಪಿ ಹೆಚ್ಚಳ ಕುರಿತು ಕೇಂದ್ರಕ್ಕೆ ಮನವಿ ಮಾಡಿದರೂ ಇದುವರೆಗೆ ಹೆಚ್ಚಳ ಮಾಡಿಲ್ಲ. ಇದರಿಂದ ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗಿದೆ. ಇದೇ ರೀತಿ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ ಹೇರಿರುವುದರಿಂದ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕವಾಗಿ ನಷ್ಟ ಉಂಟಾಗಿದೆ. ಇಡೀ ದೇಶಕ್ಕೆ ಕೇವಲ 10ಲಕ್ಷ ಮೆಟ್ರಿಕ್ ಟನ್ ಮಾತ್ರ ರಫ್ತಿಗೆ ಅನುಮತಿ ನೀಡಲಾಗಿದೆ. ಕಳೆದ ಆರು ವರ್ಷಗಳಿಂದ ಸಕ್ಕರೆ ದರವನ್ನು ಸಹ ಪರಿಷ್ಕರಿಸಿಲ್ಲ. ಆದರೆ ಕಬ್ಬಿನ ದರ ಪ್ರತಿ ವರ್ಷ ಹೆಚ್ಚುತ್ತಾ ಹೋಗುತ್ತಿದೆ. ಈ ಎಲ್ಲಾ ಕಾರಣಗಳಿಂದ ಸಕ್ಕರೆ ಕಾರ್ಖಾನೆಗಳಿಗೆ ಈಗ ಎಫ್ಆರ್.ಪಿ ಪ್ರಕಾರ ರೈತರಿಗೆ ಪಾವತಿ ಮಾಡಲು ಕಷ್ಟ ಪಡಬೇಕಾದ ಪರಿಸ್ಥಿತಿಯಿದೆ. ಆದರೆ ಈ ದರ ಕಾನೂನಾತ್ಮಕವಾಗಿ ನೀಡಬೇಕಾಗಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಪಾವತಿಸುತ್ತಿವೆ ಎಂದು ಸಕ್ಕರೆ ಕಾರ್ಖಾನೆ ಮಾಲಿಕರ ಸಂಘದ ಅಧ್ಯಕ್ಷರು ತಿಳಿಸಿದರು.


