ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರ ಇತ್ತೀಚಿನ ಹೇಳಿಕೆಗಳಿಂದ ತಮಗೆ ನೋವಾಗಿದೆ ಹಾಗಾಗಿ ಅವರ ಮೇಲೆ ದಾಳಿ ನಡೆಸಿದ್ದೇವೆ ಎಂದು ಬಂಧಿತ ನಾಲ್ವರು ಆರೋಪಿಗಳು ಹೇಳಿದ್ದಾರೆಂದು ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಆದರೆ, ಅವರು ಯಾವ ಟೀಕೆಗಳನ್ನು ಉಲ್ಲೇಖಿಸಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.
ಜೂನ್ 28ರಂದು ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಚಂದ್ರಶೇಖರ್ ಆಜಾದ್ ಅವರ ಮೇಲೆ ಗುಂಡು ಹಾರಿಸಲಾಯಿತು. ಈ ವೇಳೆ ಸಣ್ಣ ಗುಂಡು ತಾಗಿ ಅವರು ಗಾಯಗೊಂಡಿದ್ದರು. ದಾಳಿಕೋರರು, ಎಲ್ಲರೂ ಸವರ್ಣಿಯರು ಎಂದು ತಿಳಿದುಬಂದಿದ್ದು ಅವರನ್ನು ಶನಿವಾರ ಬಂಧಿಸಲಾಗಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಬಂಧಿತರನ್ನು ಉತ್ತರ ಪ್ರದೇಶದ ದಿಯೋಬಂದ್ ನಿವಾಸಿಗಳಾದ ವಿಕ್ಕಿ, ಪ್ರಶಾಂತ್ ಮತ್ತು ಲವಿಶ್ ಮತ್ತು ಹರಿಯಾಣದ ಕರ್ನಾಲ್ ಜಿಲ್ಲೆಯ ವಿಕಾಸ್ ಎಂದು ಗುರುತಿಸಲಾಗಿದೆ ಎಂದು ವಿಶೇಷ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
”ದೆಹಲಿ ಮತ್ತು ಇತರ ಸ್ಥಳಗಳಲ್ಲಿ ಆಜಾದ್ ಅವರು ನೀಡಿದ ಇತ್ತೀಚಿನ ಹೇಳಿಕೆಗಳ ಬಗ್ಗೆ ಅಸಮಾಧಾನಗೊಂಡು ಆರೋಪಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಗಳು ಪೊಲೀಸರಿಗೆ ತಿಳಿಸಿರುವುದಾಗಿ ಕುಮಾರ್ ಹೇಳಿದ್ದಾರೆ” ಎಂದು ಪಿಟಿಐ ವರದಿ ಮಾಡಿದೆ.
ವಿಕ್ಕಿ ಎರಡು ಸುತ್ತು ಗುಂಡು ಹಾರಿಸಿದ್ದು, ಪ್ರಶಾಂತ್ ಒಂದು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ವಲ್ಪ ದೂರ ಕ್ರಮಿಸಿದ ನಂತರ ವಾಹನದಲ್ಲಿ ಇಂಧನ ಖಾಲಿಯಾಗಿ ವಾಹನವನ್ನು ಬಿಟ್ಟು ಹೋಗಿದ್ದಾರೆ. ಎರಡು ದೇಶಿ ಪಿಸ್ತೂಲ್ಗಳು, ಕಾರ್ಟ್ರಿಡ್ಜ್ಗಳು ಮತ್ತು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಾದ ವಿಕ್ಕಿ, ಪ್ರಶಾಂತ್ ಮತ್ತು ಲವಿಶ್ ಈಗಾಗಲೇ ಹತ್ಯೆಯ ಯತ್ನ ಮತ್ತು ಬೆದರಿಕೆ ಸೇರಿದಂತೆ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದವರು ಮತ್ತು ಅವರು ಸಧ್ಯ ಜಾಮೀನಿನ ಮೇಲೆ ಹೊರಬಂದಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಪ್ರಸ್ತುತ ಪ್ರಕರಣದಲ್ಲಿ, ಅವರ ವಿರುದ್ಧ ಕೊಲೆ ಯತ್ನ, ಕ್ರಿಮಿನಲ್ ಪಿತೂರಿ, ಬೆದರಿಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ, 1989 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಮೇಲೆ ಗುಂಡಿನ ದಾಳಿ: ಆಸ್ಪತ್ರೆಗೆ ದಾಖಲು