ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳ (ಸಂಯುಕ್ತ) ಜೊತೆಗಿನ ಮೈತ್ರಿಯಿಂದ ತಮ್ಮ ಪಕ್ಷ ಪಂಜಾಬ್ ಲೋಕ್ ಕಾಂಗ್ರೆಸ್ ಮುಂಬರುವ ಚುನಾವಣೆಯಲ್ಲಿ ಗೆದ್ದು ಪಂಜಾಬ್ನಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ.
ತಮ್ಮ ಪ್ರತಿಸ್ಪರ್ಧಿ ನವಜೋತ್ ಸಿಂಗ್ ಸಿಧು ಜೊತೆಗಿನ ಗುದ್ದಾಟದ ಕಾರಣಕ್ಕಾಗಿ ಸೆಪ್ಟಂಬರ್ 18 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅಮರಿಂದರ್ ಸಿಂಗ್ ಅಕ್ಟೋಬರ್ ತಿಂಗಳಿನಲ್ಲಿ ಪಂಜಾಬ್ ಲೋಕ್ ಕಾಂಗ್ರೆಸ್ ಎಂಬ ಪಕ್ಷ ಸ್ಥಾಪಿಸಿದ್ದಾರೆ. ಕೃಷಿ ಕಾನೂನುಗಳನ್ನು ಹಿಂತೆಗೆದುಕೊಂಡಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತೇನೆ ಎಂದಿದ್ದ ಅವರು ಅದನ್ನು ಪುನರುಚ್ಚರಿಸಿದ್ದಾರೆ.
ಅವರು ಶಿರೋಮಣಿ ಅಕಾಲಿ ದಳ (ಸಂಯುಕ್ತ) ದ ಜೊತೆಗೂ ಮೈತ್ರಿಗೆ ಮುಂದಾಗಿದ್ದಾರೆ. ಆ ಪಕ್ಷವು ಶಿರೋಮಣಿ ಅಕಾಲಿ ದಳದಿಂದ ಹೊರಬಂದ ಪಕ್ಷವಾಗಿದೆ. ಈ ಎರಡು ಪಕ್ಷದ ಜೊತೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಇಂದು ಚಂಡೀಘಡದಲ್ಲಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ರವರನ್ನು ಭೇಟಿಯಾದ ನಂತರ ಮಾತನಾಡಿದ ಅಮರಿಂದರ್ ಸಿಂಗ್, “ದೇವರ ಆರ್ಶಿವಾದದಿಂದ ನಮ್ಮ ಪಕ್ಷ ಬಿಜೆಪಿ ಮತ್ತು ಅಕಾಲಿ ದಳದೊಂದಿಗೆ ಸೇರಿ ಅಧಿಕಾರಕ್ಕೆ ಬರಲಿದೆ” ಎಂದಿದ್ದಾರೆ.
ಈಗ ಎಲ್ಲವೂ ಸರಿಯಾಗಿದೆ. ಕೃಷಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ವಾಪಸ್ ಪಡೆಯಲಾಗಿದೆ. ಹಾಗಾಗಿ ಬಿಜೆಪಿ ಜೊತೆಗೆ ಮೈತ್ರಿಗೆ ತೊಂದರೆಯಿಲ್ಲ. ನಾವು ಅಧಿಕಾರಕ್ಕೆ ಬಂದ ನಂತರ ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು ಎಂದಿದ್ದಾರೆ.
2022ರ ಫೆಬ್ರವರಿ – ಮಾರ್ಚ್ ತಿಂಗಳಿನಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆ ನಡೆಯಲಿವೆ. 117 ಸಂಖ್ಯಾಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನ ಗೆಲ್ಲುವ ಮೂಲಕ ಬಹುಮತ ಸಾಧಿಸಿ ಅಧಿಕಾರ ಹಿಡಿದಿತ್ತು. ಆದರೆ ಅಮರಿಂದರ್ ಸಿಂಗ್ ಸಿಎಂ ಸ್ಥಾನ ಕಳೆದುಕೊಂಡ ನಂತರ ಪಕ್ಷದಿಂದ ಹೊರಬಂದು ಹೊಸ ಪಕ್ಷ ಕಟ್ಟಿದ್ದಾರೆ.
ಇದನ್ನೂ ಓದಿ: ದೆಹಲಿಯಾನ 2: ದೆಹಲಿ ಗಡಿಗಳಿಗೆ ಹೊರಟ ಕರ್ನಾಟಕ ಜನಶಕ್ತಿ ತಂಡ