ಪಶ್ಚಿಮ ಬಂಗಾಳದ ಪೂರ್ವ ಬರ್ಧಮಾನ್ ಜಿಲ್ಲೆಯಲ್ಲಿ ನಡೆದ 74 ವರ್ಷದ ವೃದ್ಧನ ಕೊಲೆ ಪ್ರಕರಣದಲ್ಲಿ ಸ್ಥಳೀಯ ಬಿಜೆಪಿ ಮುಖಂಡ ಸೇರಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೋಸ್ಟ್ ಆಫೀಸ್ ಪಾರಾ ರೈನಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಾರ್ಚ್ 09 ರಂದು ಹಿರಿಯ ವ್ಯಕ್ತಿಯೊಬ್ಬರನ್ನು ಅವರ ಮನೆಯಲ್ಲಿಯೇ ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು. ಈ ಪ್ರಕರಣದಲ್ಲಿ ಬಂಧಿತರನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಘಟನೆ ನಡೆದ ದಿನ ಹಿರಿಯ ವ್ಯಕ್ತಿಯೊಬ್ಬರು ಬ್ಯಾಂಕ್ನಿಂದ ದೊಡ್ಡ ಪ್ರಮಾಣದ ಹಣ ತೆಗೆದುಕೊಂಡಿದ್ದರು, ಹಾಗಾಗಿ ಹಣಕ್ಕಾಗಿ ಅವರನ್ನು ಕೊಲ್ಲಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಆದರೆ ಬಂಧಿತರು ಆಕಸ್ಮಿಕವಾಗಿ ಗುಂಡು ಹಾರಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಅನಿರೀಕ್ಷಿತ ಘಟನೆಯಿಂದಾಗಿ ಬೆದರಿದ ಅವರು ಹಣ ತೆಗೆದುಕೊಳ್ಳದೆ ಅಲ್ಲಿಂದ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಅವರ ಮೊಬೈಲ್ ಫೋನ್ ಲೊಕೇಶನ್ ಟ್ರ್ಯಾಕ್ ಮಾಡುವು ಮೂಲಕ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಜೆಪಿ ಮುಖಂಡ ಉತ್ತರ ಬರ್ಧಮಾನ್ ವಿಧಾನಸಭಾ ಕ್ಷೇತ್ರದ ‘ಶಕ್ತಿ ಕೇಂದ್ರ ಪ್ರಮುಖ್’ ಆಗಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ತನ್ನನ್ನು ಅನಗತ್ಯವಾಗಿ ಸಿಲುಕಿಸಲಾಗಿದೆ ಎಂದು ಆತ ದೂರಿದ್ದಾನೆ.
ಇದನ್ನೂ ಓದಿ: ಕೇರಳದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ, ಮೂವರು ಎನ್ಡಿಎ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ


