ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ ದುರಂತವೇ ಸಾಕ್ಷಿ. ಮುರ್ಷಿದಾಬಾದ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಇಬ್ಬರು ಮುಗ್ಧ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೈಲ್ವೆ ಇಲಾಖೆಯ ಸಿಬ್ಬಂದಿಯ ಕರ್ತವ್ಯ ಲೋಪವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದ್ದು, ಐವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.
ಪೂರ್ವ ರೈಲ್ವೆಯ ಹೌರಾ ವಿಭಾಗದ ಅಜೀಮ್ಗಂಜ್-ಕಟ್ವಾ ರೈಲು ಮಾರ್ಗದಲ್ಲಿ ಈ ಘಟನೆ ಸಂಭವಿಸಿದೆ. ಮುಂಜಾನೆ ಸುಮಾರು 7 ಗಂಟೆಯ ಸುಮಾರಿಗೆ ಶಾಲಾ ವ್ಯಾನ್ ಒಂದರಲ್ಲಿ ಮಕ್ಕಳು ಎಂದಿನಂತೆ ಶಾಲೆಗೆ ಹೊರಟಿದ್ದರು. ವ್ಯಾನ್ ರೈಲ್ವೆ ಲೆವೆಲ್ ಕ್ರಾಸಿಂಗ್ ದಾಟುತ್ತಿದ್ದಾಗ, ವೇಗವಾಗಿ ಬಂದ ಪ್ಯಾಸೆಂಜರ್ ರೈಲೊಂದು ಭೀಕರವಾಗಿ ಡಿಕ್ಕಿ ಹೊಡೆದಿದೆ. ರೈಲು ಬರುವ ಮುನ್ಸೂಚನೆ ಇದ್ದರೂ ರೈಲ್ವೆ ಗೇಟ್ ಮುಚ್ಚದೇ ಮುಕ್ತವಾಗಿಟ್ಟಿದ್ದೇ ಈ ಅಪಘಾತಕ್ಕೆ ನೇರ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಡಿಕ್ಕಿಯ ರಭಸಕ್ಕೆ ಶಾಲಾ ವ್ಯಾನ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಹಳಿಗಳ ಮೇಲೆ ಬಿದ್ದಿದ್ದ ಅದರ ಅವಶೇಷಗಳು ಸ್ಥಳೀಯರ ಕರುಳು ಹಿಂಡುವಂತಿತ್ತು. ಅಪಘಾತದ ಬೆನ್ನಲ್ಲೇ ಸ್ಥಳೀಯ ನಿವಾಸಿಗಳು ತಕ್ಷಣ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಐವರು ವಿದ್ಯಾರ್ಥಿಗಳನ್ನು ತಕ್ಷಣವೇ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ಅಪಘಾತದ ಹಿನ್ನೆಲೆಯಲ್ಲಿ ಅಜೀಮ್ಗಂಜ್-ಕಟ್ವಾ ಮಾರ್ಗದಲ್ಲಿ ರೈಲು ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ರೈಲ್ವೆ ಸುರಕ್ಷತಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಗೇಟ್ಮ್ಯಾನ್ನ ಗಂಭೀರ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.
“ಯಾವುದೇ ಜೀವಹಾನಿ ದುರಂತವೇ, ಆದರೆ ಮುಗ್ಧ ಮಕ್ಕಳ ಸಾವು ಇನ್ನೂ ಹೆಚ್ಚು ಹೃದಯವಿದ್ರಾವಕವಾಗಿದೆ. ಈ ಘಟನೆಯ ಕುರಿತು ಸಮಗ್ರ ತನಿಖೆಯ ಅಗತ್ಯವಿದ್ದು, ರೈಲ್ವೆ ಇಲಾಖೆಯು ಉನ್ನತ ಮಟ್ಟದ ತನಿಖೆ ನಡೆಸಲಿದೆ ಎಂಬ ನಂಬಿಕೆ ನನಗಿದೆ.” ಎಂದು ಕೇಂದ್ರ ಸಚಿವ ಸುಕಾಂತ ಮಜುಂದಾರ್ ಪ್ರತಿಕ್ರಿಯಿಸಿದ್ದಾರೆ.
ದೇಶದಲ್ಲಿ ಬುಲೆಟ್ ರೈಲು, ವಂದೇ ಭಾರತ್ಗಳಂತಹ ಕಾರ್ಪೊರೇಟ್ ಮಾದರಿಯ ಆಧುನಿಕ ರೈಲುಗಳ ಪ್ರಚಾರ ಮತ್ತು ಹೂಡಿಕೆಗಳು ಜೋರಾಗಿ ನಡೆಯುತ್ತಿದ್ದರೂ, ಗ್ರಾಮೀಣ ಭಾಗದ ಸಾಮಾನ್ಯ ಪ್ಯಾಸೆಂಜರ್ ರೈಲುಗಳು ಚಲಿಸುವ ಮಾರ್ಗಗಳಲ್ಲಿನ ಕನಿಷ್ಠ ಸುರಕ್ಷತಾ ಕ್ರಮಗಳ ಕೊರತೆ ಎದ್ದುಕಾಣುತ್ತಿದೆ. ಸಿಬ್ಬಂದಿಗಳ ಬೇಜವಾಬ್ದಾರಿತನ ಮುಗ್ಧ ಬಡ ಮಕ್ಕಳ ಜೀವಗಳನ್ನು ಬಲಿಪಡೆಯುತ್ತಲೇ ಇರುವುದು ಆತಂಕಕಾರಿ ಸಂಗತಿಯಾಗಿದೆ. ಅಧಿಕಾರಿಗಳ ಮತ್ತು ಸರ್ಕಾರದ ಈ ವ್ಯವಸ್ಥಿತ ನಿರ್ಲಕ್ಷ್ಯದ ವಿರುದ್ಧ ತಳಮಟ್ಟದ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.


