Homeಮುಖಪುಟಮತ್ತೆ ಮುನ್ನೆಲೆಗೆ ಬಂಡೀಪುರ ಸಂಚಾರ..ರಾತ್ರಿ ನಿಷೇಧ ತೆಗೆದು ಹಾಕುತ್ತಾ ಸರ್ಕಾರ?

ಮತ್ತೆ ಮುನ್ನೆಲೆಗೆ ಬಂಡೀಪುರ ಸಂಚಾರ..ರಾತ್ರಿ ನಿಷೇಧ ತೆಗೆದು ಹಾಕುತ್ತಾ ಸರ್ಕಾರ?

- Advertisement -
- Advertisement -

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ (NH 766) ರಾತ್ರಿ ಹೊತ್ತು ವಾಹನಗಳ ಸಂಚಾರ ನಿಷೇಧಿಸಿರುವುದನ್ನು ಕರ್ನಾಟಕ ರಾಜ್ಯ ಸರ್ಕಾರ ತೆಗೆದು ಹಾಕಲು ಮುಂದಾಗಿದೆ ಎಂಬ ವಿಚಾರ ಕಳೆದ ಕೆಲ ದಿನಗಳಿಂದ ಭಾರೀ ಚರ್ಚೆಯಾಗುತ್ತಿದೆ.

ರಾತ್ರಿ ಸಂಚಾರ ನಿಷೇಧ ತೆಗೆದು ಹಾಕಿದರೆ ಹೋರಾಟ ರೂಪಿಸಲು ಪರಿಸರವಾದಿಗಳು, ವನ್ಯಜೀವಿಗಳ ಪರ ಕೆಲಸ ಮಾಡುವವರು ರೈತರು ಮತ್ತು ಬಂಡೀಪುರ ಅರಣ್ಯ ವ್ಯಾಪ್ತಿಯ ಗ್ರಾಮಗಳ ಜನರು ಮುಂದಾಗಿದ್ದಾರೆ.

ಕಳೆದ ಭಾನುವಾರ (ಮಾ.30) ಬಂಡೀಪುರದ ಮೂಲೆಹೊಳೆಯಲ್ಲಿ ನಡೆದ ಸಭೆಯಲ್ಲಿ ವನ್ಯಜೀವಿಗಳಿಗೆ ತೊಂದರೆ-ಮುಕ್ತ ಆವಾಸಸ್ಥಾನದ ಅವಶ್ಯಕತೆ ಮತ್ತು ರಾತ್ರಿ ಸಂಚಾರ ನಿಷೇಧ ಮುಂದುವರಿಸುವ ಅವಶ್ಯಕತೆಗಳನ್ನು ಒತ್ತಿ ಹೇಳಲಾಗಿದೆ.

“ಬಂಡೀಪುರದಲ್ಲಿ ರಾತ್ತಿ ಹೊತ್ತು ವಾಹನ ಸಂಚಾರ ನಿಷೇಧ ಆದ ಬಳಿಕ, ರಸ್ತೆ ಅಪಘಾತಗಳಲ್ಲಿ ವನ್ಯ ಜೀವಿಗಳು ಸಾಯುವ ಸಂಖ್ಯೆ ಕಡಿಮೆಯಾಗಿದೆ. ಅವುಗಳ ಸಂಖ್ಯೆ ವೃದ್ಧಿಯಾಗಲು ಸಹಾಯವಾಗಿದೆ. ಪ್ರಾಣಿಗಳ ಸಂಖ್ಯೆಯಲ್ಲಿನ ಹೆಚ್ಚಳ ಇದಕ್ಕೆ ಸಾಕ್ಷಿ” ಎಂದು ಬಂಡೀಪುರ ಬಫರ್ ವಲಯದ ಜಕ್ಕಹಳ್ಳಿ ಗ್ರಾಮದ ರೈತ ಶ್ರೀಕಾಂತ ಅವರು ಹೇಳಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

“ಕಳೆದ 15 ವರ್ಷಗಳಲ್ಲಿ ವಾಹನಗಳ ಸಂಖ್ಯೆ ಭಾರೀ ಹೆಚ್ಚಾಗಿದೆ. ಬಂಡೀಪುರ ಮಾರ್ಗವಾಗಿ ಹಗಲೊತ್ತು ಸಂಚರಿಸುವ ವಾಹನಗಳನ್ನು ನೋಡಿದರೆ ನಮಗದು ಗೊತ್ತಾಗುತ್ತದೆ. ರಾತ್ರಿ ಸಂಚಾರ ನಿಷೇಧ ಆಗುವ ಮೊದಲೇ ಅನೇಕ ವನ್ಯ ಪ್ರಾಣಿಗಳು ವಾಹನಗಳಿಗೆ ಸಿಲುಕಿ ಸಾಯುತ್ತಿತ್ತು”.

“ಈಗ ಏನಾದರು ರಾತ್ರಿ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ ವನ್ಯ ಜೀವಿಗಳ ಮೇಲಾಗುವ ಹಾನಿ ಊಹಿಸಲಾಗದು. ರಾತ್ರಿ ವಾಹನ ಸಂಚಾರದಿಂದ ವನ್ಯ ಜೀವಿಗಳಿಗೆ ಕಿರಿಕಿರಿ ಉಂಟಾಗಿ ಅವುಗಳು ಅರಣ್ಯದ ಅಂಚಿನ ಗ್ರಾಮಗಳತ್ತ ಬರುವ ಸಾಧ್ಯತೆ ಇದೆ. ಇದರಿಂದ ಮನುಷ್ಯ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ಹೆಚ್ಚಾಗುತ್ತದೆ” ಎಂಬುವುದು ಬಂಡೀಪುರದ ಸುತ್ತಮುತ್ತಲಿನ ಗ್ರಾಮಸ್ಥರ ಆತಂಕವಾಗಿದೆ.

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಆಗಿದ್ದು ಯಾವಾಗ?

ಕರ್ನಾಟಕದ ಮೈಸೂರು ಮತ್ತು ಕೇರಳದ ವಯನಾಡ್‌ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 (ಹಿಂದೆ 212) ದೇಶದ ಎರಡು ಪ್ರಮುಖ ವನ್ಯಜೀವಿ ಆವಾಸಸ್ತಾನಗಳಾದ ಬಂಡೀಪುರ ಮತ್ತು ವಯನಾಡ್ ರಾಷ್ಟ್ರೀಯ ಉದ್ಯಾನವನಗಳ ಮೂಲಕ ಹಾದು ಹೋಗುತ್ತದೆ.

ವನ್ಯಜೀವಿಗಳಿಗೆ ತೊಂದರೆಯಾಗದಂತೆ ತಡೆಯಲು ಮತ್ತು ವೇಗವಾಗಿ ಚಲಿಸುವ ವಾಹನಗಳಿಗೆ ಸಿಲುಕಿ ವನ್ಯ ಜೀವಿಗಳು ಸಾಯುವುದನ್ನು ತಡೆಯಲು ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ವಾಹನಗಳು ಸಂಚರಿಸುವುದನ್ನು 2009ರಲ್ಲಿ ನಿಷೇಧಿಸಲಾಗಿದೆ.

ರಾತ್ರಿ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಕೂಡ ಅಭಿವೃದ್ಧಿಪಡಿಸಲಾಗಿದೆ. ಬಂಡೀಪುರದ ಬದಲಾಗಿ ಮೈಸೂರಿನಿಂದ ಹುಣಸೂರು, ಗೋಣಿಕೊಪ್ಪಲ್, ಕುಟ್ಟ, ತೋಲ್ಪೆಟ್ಟಿ, ಮಾನಂತವಾಡಿ ಮಾರ್ಗವಾಗಿ ವಯನಾಡ್ ತಲುಪಬಹುದು. ಆದರೆ, ಈ ಮಾರ್ಗದಲ್ಲಿ ಎನ್‌ಹೆಚ್‌ 766ರಕ್ಕಿಂತ 35–40ಕಿ.ಮೀ ಹೆಚ್ಚು ದೂರ ಸಂಚರಿಸಬೇಕಿದೆ.

ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಅನುಸರಿಸಿ, ಈ ಮಾರ್ಗವನ್ನು ನವೀಕರಿಸಲು ಕರ್ನಾಟಕ ಸರ್ಕಾರ ಈಗಾಗಲೇ ಸುಮಾರು 75–80 ಕೋಟಿ ರೂಪಾಯಿಗಳನ್ನು ವ್ಯಯಿಸಿದೆ. ಇದರ ಕಾರ್ಯಸಾಧ್ಯತೆಯನ್ನು ನಿರ್ಣಯಿಸಲು ಸುಪ್ರೀಂ ಕೋರ್ಟ್ ನಿರ್ದೇಶನದ ಭಾಗವಾಗಿ 2019ರಲ್ಲಿ ಅರಣ್ಯ ಅಧಿಕಾರಿಗಳು ಈ ಮಾರ್ಗವನ್ನು ಪರಿಶೀಲಿಸಿದ್ದರು. ಈ ಮಾರ್ಗ ಪ್ರಾಥಮಿಕವಾಗಿ ರಾಜ್ಯ ಹೆದ್ದಾರಿಗಳು 90, 89 ಮತ್ತು 275 ಅನ್ನು ಒಳಗೊಂಡಿದೆ. ಇದು ಬಂಡೀಪುರದ ಉದ್ಯಾನವನದೊಳಗೆ ಸಂಚರಿಸುವುದನ್ನು ಸಂಪೂರ್ಣ ತಪ್ಪಿಸುತ್ತದೆ. ಆದರೆ, ಇದರ ಒಂದು ಸಣ್ಣ ಭಾಗ (ಸುಮಾರು 8.7 ಕಿ.ಮೀ) ವಯನಾಡ್ ವನ್ಯಜೀವಿ ಅಭಯಾರಣ್ಯದ ಅಂಚಿನಲ್ಲಿದೆ.

ಪರ್ಯಾಯ ಮಾರ್ಗ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ, ವಯನಾಡ್ ವನ್ಯಜೀವಿ ಅಭಯಾರಣ್ಯದ ಅಂಚಿನಲ್ಲಿ ಹೋದರೂ ಪರವಾಗಿಲ್ಲ, ಬಂಡೀಪುರದ ಮಧ್ಯದಲ್ಲಿ ಹೋಗುವುದನ್ನು ತಪ್ಪಿಸುತ್ತದಲ್ಲ ಎಂಬುವುದು ಕರ್ನಾಟಕ ಸರ್ಕಾರದ ವಾದ.

ಕರ್ನಾಟಕ ಸರ್ಕಾರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ವಿವಿಧ ಸಂದರ್ಭಗಳಲ್ಲಿ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮಾಡಿರುವುದನ್ನು ಸಮರ್ಥಿಸಿದೆ. ಸುರಂಗ ಮಾರ್ಗ, ರೈಲು ಮಾರ್ಗ ಸೇರಿದಂತೆ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಕೇರಳ ಸರ್ಕಾರ ಪ್ರಸ್ತಾಪಗಳನ್ನು ತಿರಸ್ಕರಿಸಿದೆ.

ಸೆಪ್ಟೆಂಬರ್ 2022ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸುರಂಗ ಮಾರ್ಗ ಮಾಡಿ ಕೇರಳ ಕರ್ನಾಟಕ ನಡುವೆ ರೈಲು ಓಡಿಸುವ ಪ್ರಸ್ತಾವನ್ನು ಮುಂದಿಟ್ಟಿದ್ದರು. ಅದನ್ನು ಬೊಮ್ಮಾಯಿ ತಿರಸ್ಕರಿಸಿದ್ದರು.

ಕರ್ನಾಟಕ ಸರ್ಕಾರ ರಾತ್ರಿ ಸಂಚಾರ ನಿಷೇಧ ತೆಗೆದು ಹಾಕಲು ಮುಂದಾಗಿದೆಯಾ? 

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆಗೆದು ಹಾಕಲು ಮುಂದಾಗಿದೆ ಎಂದು ಎಲ್ಲೆಡೆ ಚರ್ಚೆಯಾಗುತ್ತಿದೆ. ಆದರೆ, ಅದು ಶುದ್ದ ಸುಳ್ಳು. ರಾತ್ರಿ ಸಂಚಾರ ನಿಷೇಧ ಮಾಡಿರುವುದು ಕರ್ನಾಟಕ ಹೈಕೋರ್ಟ್. ಅದನ್ನು ಕೇರಳದ ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಹಾಗಾಗಿ, ಪ್ರಕರಣ ಈಗ ಸುಪ್ರೀಂ ಕೋರ್ಟ್‌ನಲ್ಲಿದೆ. ಸುಪ್ರೀಂ ಕೋರ್ಟ್ ಈ ಸಂಬಂಧ ಇದುವರೆಗೆ ಯಾವುದೇ ಆದೇಶ ನೀಡಿಲ್ಲ. ಕರ್ನಾಟಕ ಹೈಕೋರ್ಟ್‌ ಆದೇಶವೇ ಜಾರಿಯಲ್ಲಿದೆ. ಹೈಕೋರ್ಟ್ ಆದೇಶದಂತೆ ಜಾರಿಯಾದ ರಾತ್ರಿ ಸಂಚಾರ ನಿಷೇಧವನ್ನು ಸುಪ್ರೀಂ ಕೋರ್ಟ್ ತೆಗೆದು ಹಾಕಬೇಕೇ ಹೊರತು, ಸರ್ಕಾರ ತೆಗೆದು ಹಾಕಲು ಸಾಧ್ಯವಿಲ್ಲ ಎಂದು ವನ್ಯಜೀವಿ ಸಂರಕ್ಷಣಾವಾದಿ ಸಂಜಯ್ ಗುಬ್ಬಿ ಹೇಳುತ್ತಾರೆ.

ರಾತ್ರಿ ಸಂಚಾರ ನಿಷೇಧ ಮತ್ತೆ ಮುನ್ನೆಲೆಗೆ ಬಂದಿದ್ದೇಕೆ?

ವರದಿಗಳ ಪ್ರಕಾರ, ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ಆಗಿದ್ದರೂ, ಕರ್ನಾಟಕ ಮತ್ತು ಕೇರಳ ಎರಡೂ ರಾಜ್ಯ ಸರ್ಕಾರಗಳ ಒಪ್ಪಂದದ ಪ್ರಕಾರ ತಲಾ ಎರಡರಂತೆ ನಾಲ್ಕು ಸರ್ಕಾರಿ ಬಸ್‌ಗಳು ರಾತ್ರಿ ಹೊತ್ತು ಸಂಚರಿಸಲು ಅನುವು ಮಾಡಿಕೊಡಲಾಗಿದೆ.

ಇತ್ತೀಚೆಗೆ ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿಯೊಂದನ್ನು ಸಲ್ಲಿಸಿದ್ದ ಕೇರಳದ ಬೈಜು ಪಾಲ್ ಮ್ಯಾಥ್ಯೂಸ್ ಎಂಬವರು, ವಿಶೇಷ ದಿನಗಳು ಮತ್ತು ಹಬ್ಬಗಳ ಸಂದರ್ಭಗಳಲ್ಲಿ ಬಂಡೀಪುರದಲ್ಲಿ ರಾತ್ರಿ ಹೆಚ್ಚುವರಿ ಬಸ್‌ಗಳು ಸಂಚರಿಸಲು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದರು. ಈ ಅರ್ಜಿಗೆ ಬಂಡೀಪುರ ಹುಲಿ ಮೀಸಲು ಪ್ರದೇಶದ ನಿರ್ದೇಶಕ ಪ್ರಭಾಕರನ್ ಎಸ್ ಅವರು ಪ್ರತಿ-ಅಫಿಡವಿಟ್ ಸಲ್ಲಿಸಿದ್ದರು.

ಪ್ರಸ್ತಾವಿತ ಪರ್ಯಾಯ ರಾಜ್ಯ ಹೆದ್ದಾರಿ-88 ಪೂರ್ಣಗೊಂಡ ನಂತರ ಎನ್‌ ಹೆಚ್‌ 766 ಅನ್ನು ಶಾಶ್ವತವಾಗಿ ಮುಚ್ಚಬಹುದು ಎಂದು ಪ್ರಭಾಕರನ್ ಅಫಿಡವಿಟ್‌ನಲ್ಲಿ ತಿಳಿಸಿದ್ದರು. ರಸ್ತೆ ದುರಸ್ತಿಗಾಗಿ ಕರ್ನಾಟಕ ಇದುವರೆಗೆ 75 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಉಲ್ಲೇಖಿಸಿದ್ದರು.

ನಾಗರಹೊಳೆ ಹುಲಿ ಮೀಸಲು ಪ್ರದೇಶದ ಅಂಚಿನಲ್ಲಿ ಹಾದುಹೋಗುವುದರಿಂದ ನಾವು ಈ ಪರ್ಯಾಯ ರಸ್ತೆಯನ್ನು ಎಲಿವೇಟೆಡ್ ರಸ್ತೆಯಾಗಿ ಅಭಿವೃದ್ಧಿಪಡಿಸುತ್ತಿದ್ದೇವೆ ಎಂದಿದ್ದರು.

ಎಲಿವೇಟೆಡ್ ರಸ್ತೆ ನಿರ್ಮಾಣ ಪೂರ್ಣಗೊಂಡ ನಂತರ, ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮಧ್ಯಭಾಗದ ಮೂಲಕ ಹಾದುಹೋಗುವ ಅಸ್ತಿತ್ವದಲ್ಲಿರುವ ಎನ್‌ ಹೆಚ್‌-766 ಅನ್ನು ನಾವು ಶಾಶ್ವತವಾಗಿ ಮುಚ್ಚಬಹುದು, ತುರ್ತು ವಾಹನಗಳು ಮತ್ತು ಸ್ಥಳೀಯ ಸಂಚಾರಕ್ಕೆ ಮಾತ್ರ ಅವಕಾಶ ನೀಡಬಹುದು ಎಂದು ತಿಳಿಸಿದ್ದರು.

ಪ್ರತಿ-ಅಫಿಡವಿಟ್‌ನಲ್ಲಿ ಬಂಡೀಪುರದ ವನ್ಯಜೀವಿಗಳ ಮೇಲೆ ರಾತ್ರಿ ಪ್ರಯಾಣ ನಿಷೇಧದ ಸಕಾರಾತ್ಮಕ ಪರಿಣಾಮದ ದತ್ತಾಂಶವನ್ನು ನೀಡಲಾಗಿತ್ತು.

ಕೇರಳ, ವಿಶೇಷವಾಗಿ ಆಡಳಿತಾರೂಢ ಸಿಪಿಐ(ಎಂ) ಈ ಪ್ರತಿ-ಅಫಿಡವಿಟ್‌ ಅನ್ನು ಟೀಕಿಸಿತ್ತು. ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ದ್ವಿಮುಖ ನೀತಿಯನ್ನು ಹೊಂದಿದೆ ಎಂದು ಕಿಡಿಕಾರಿತ್ತು.

ಪ್ರತಿ-ಅಫಿಡವಿಟ್ ಸಲ್ಲಿಸಿದ ನಂತರ, ಮಾರ್ಚ್ 23 ರಂದು ಕರ್ನಾಟಕದ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿತ್ತು.

ಗುಂಡ್ಲುಪೇಟೆ ಶಾಸಕ ಎಚ್‌.ಎಂ ಗಣೇಶ್ ಪ್ರಸಾದ್ ಅವರ ಪ್ರಕಾರ, ಪ್ರತಿ-ಅಫಿಡವಿಟ್ ಸಲ್ಲಿಸಿದ್ದ ಬಂಡೀಪುರ ಉದ್ಯಾನವನದ ನಿರ್ದೇಶಕ ಪ್ರಭಾಕರನ್. ಎಸ್ ಅವರನ್ನು ಈ ಪ್ರಕರಣದಲ್ಲಿ ಕಾನೂನು ನಿರ್ವಹಣಾ ಅಧಿಕಾರಿಯಾಗಿ ನೇಮಿಸಲಾಗಿಲ್ಲ. ಹಾಗಾಗಿ, ಅಫಿಡವಿಟ್ ಹಿಂತೆಗೆದುಕೊಳ್ಳಲು ಮತ್ತು ಹೊಸದಾಗಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಕರ್ನಾಟಕ ಸರ್ಕಾರ ಇತ್ತೀಚಿನ ದತ್ತಾಂಶವನ್ನು ಒಳಗೊಂಡ ಹೊಸ ಅಫಿಡವಿಟ್ ಸಲ್ಲಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ಆಕ್ರೋಶಕ್ಕೆ ಕಾರಣವಾದ ಡಿಕೆಶಿ ವಾಗ್ದಾನ

ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿ-ಅಫಿಡವಿಟ್ ಸಲ್ಲಿಸುವ ಮೊದಲೇ, ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ತೆಗೆದುಹಾಕುವ ಬಗ್ಗೆ ಹೇಳಿಕೆಗಳನ್ನು ನೀಡಿದ್ದರು.

ನವೆಂಬರ್ 2024 ರಲ್ಲಿ ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ವಯನಾಡಿನಲ್ಲಿ ನಡೆದ ಉಪಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಡಿ.ಕೆ ಶಿವಕುಮಾರ್, ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ತೆಗೆದುಹಾಕಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.

ರಾತ್ರಿ ಸಂಚಾರ ನಿಷೇಧದಿಂದ ಅಂತಾರಾಜ್ಯ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದಿದ್ದರು.

ಕರ್ನಾಟಕ ಸರ್ಕಾರ ಪ್ರತಿ-ಅಫಿಡವಿಟ್ ಹಿಂತೆಗೆದುಕೊಂಡ ನಂತರ, ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ತೆಗೆದುಹಾಕುವಂತೆ ಕೋರಿ ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆಯೇ? ಎಂದು ಮಾಧ್ಯಮ ವರದಿಗಾರರು ಡಿ.ಕೆ ಶಿವಕುಮಾರ್ ಅವರನ್ನು ಕೇಳಿದ್ದರು. ಆದಕ್ಕೆ ಪ್ರತಿಕ್ರಿಯಿಸಿದ್ದ ಡಿಕೆಶಿ “ನಾವು ಈ ಪತ್ರ ನೋಡುತ್ತೇವೆ, ಪರಿಶೀಲನೆ ಮಾಡಿ, ಚರ್ಚಿಸುತ್ತೇವೆ. ಆನಂತರ ತೀರ್ಮಾನ ಮಾಡುತ್ತೇವೆ” ಎಂದಿದ್ದರು.

ಅರಣ್ಯ ಸಚಿವರು ಹೇಳಿದ್ದೇನು?

“ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ ವಾಹನ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾದುದು. ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಮಾರ್ಚ್‌ 28ರ ಶುಕ್ರವಾರ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

“ಪ್ರಸ್ತುತ ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಈಗ ರಾತ್ರಿ 9ರಿಂದ ಬೆಳಿಗ್ಗೆ 6ಗಂಟೆಯವರೆಗೆ ನಿರ್ಬಂಧ ಜಾರಿಯಲ್ಲಿದೆ. ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಬಾಂಧವ್ಯ ಗಮನದಲ್ಲಿಟ್ಟುಕೊಂಡು, ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಮಾಡಲು ಕ್ರಮ ವಹಿಸಲಾಗುವುದು” ಎಂದಿದ್ದಾರೆ.

ಕರ್ನಾಟಕ ಸರ್ಕಾರ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ವಾಪಸ್ ಪಡೆಯುತ್ತೇವೆ ಎಂದು ಸುಪ್ರೀಂ ಕೋರ್ಟ್‌ಗೆ ಇನ್ನೂ ಅಫಿಡವಿಟ್ ಸಲ್ಲಿಸಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಆ ವಿಚಾರದಲ್ಲಿ ಯಾವುದೇ ಆದೇಶ ಆಗಿಲ್ಲ. ಸುಮ್ಮನೆ ರಾಜಕೀಯ ಕಾರಣಕ್ಕೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ” ಎಂದು ವನ್ಯಜೀವಿ ಸಂರಕ್ಷಣಾವಾದಿ ಸಂಜಯ್ ಗುಬ್ಬಿ ಹೇಳಿದ್ದಾರೆ.

ಸರ್ಕಾರ ರಾತ್ರಿ ಸಂಚಾರ ನಿಷೇಧ ತೆಗೆದು ಹಾಕಲು ಮುಂದಾದರೆ ಮಾತನಾಡಬಹುದಿತ್ತು. ಈಗ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನಿಷೇಧ ತೆಗೆದು ಹಾಕುವ ಅಧಿಕಾರ ಈಗ ಸುಪ್ರೀಂ ಕೋರ್ಟ್‌ ಕೈಯ್ಯಲ್ಲಿದೆ. ಸರ್ಕಾರ ತನ್ನ ಅಭಿಪ್ರಾಯ ತಿಳಿಸಬಹುದು ಅಷ್ಟೆ ಎಂದು ತಿಳಿಸಿದ್ದಾರೆ.

“ವನ್ಯ ಜೀವಿಗಳಿಗೂ ಬದುಕುವ ಹಕ್ಕಿದೆ. ಅವುಗಳ ಆವಾಸಸ್ತಾನಗಳನ್ನು ಹಾಳುಗೆಡವದೆ ಉಳಿಸಬೇಕಿದೆ. ಜನರು ಸ್ವಲ್ಪ ಹೊಂದಿಕೊಂಡು ಹೋಗಬೇಕು. ನಾವು ಧರ್ಮ, ಸಂಸ್ಕೃತಿ ಎಂದು ಹಲವು ವಿಷಯಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ. ಅದೇ ರೀತಿ ಪರಿಸರ ವನ್ಯ ಜೀವಿಗಳ ವಿಚಾರದಲ್ಲೂ ಸ್ವಲ್ಪ ಹೊಂದಾಣಿಕೆ ಮಾಡಿಕೊಳ್ಳಬೇಕು. ಉದಾ : ಬೇಲೂರು-ಹಳೆಬೇಡು ದೇವಸ್ಥಾನಗಳನ್ನು ಕೆಡವಿ ರಸ್ತೆ ನಿರ್ಮಿಸಲು ಸಾಧ್ಯವೇ? ಅದೇ ರೀತಿ ಬಂಡೀಪುರದಲ್ಲೂ ಕೆಲವೊಂದು ಸಾಧ್ಯವಿಲ್ಲ. ಹಾಗಾಗಿ, ಜನರು ಹೊಂದಾಣಿಕೆ ಮಾಡಿಕೊಳ್ಳಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಸರ್ಕಾರ ಬಂಡೀಪುರದ ಬದಲಾಗಿ ರಾತ್ರಿ ಸಂಚಾರಕ್ಕೆ ಪರ್ಯಾಯ ಮಾರ್ಗ ನಿರ್ಮಾಣ ಮಾಡಿದೆ. ಅದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅಂಚಿನಲ್ಲಿ ಹೋಗುತ್ತದೆ. ಅಲ್ಲಿ ಎಲಿವೇಟೆಡ್ ರಸ್ತೆ ನಿರ್ಮಾಣ ಮಾಡಿದರೆ, ಬಂಡೀಪುರದ ಮಧ್ಯೆ ಹೋಗುವ ಎನ್‌ಎಚ್‌ 766 ಅನ್ನು ಸಂಪೂರ್ಣವಾಗಿ ಮುಚ್ಚಬಹುದು” ಎಂದಿದ್ದಾರೆ.

ಮರಳು ದಂಧೆ, ಖಾಸಗಿ ಬಸ್‌ಗಳ ಲಾಬಿ   

ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎನ್ನುವುದು ಅಕ್ರಮ ಮರಳು ದಂಧೆ ಮತ್ತು ಕೇರಳದ ಖಾಸಗಿ ಬಸ್‌ಗಳ ಲಾಬಿ ಎಂದು ಹಲವು ವರದಿಗಳು ಹೇಳಿವೆ. ಸಂಜಯ್‌ ಗುಬ್ಬಿ ಕೂಡ ಈ ಆರೋಪವನ್ನು ಹೌದು ಎಂದಿದ್ದಾರೆ. ಕೇರಳದ ಖಾಸಗಿ ಬಸ್‌ಗಳ ಲಾಬಿ ಈ ವಿಚಾರದಲ್ಲಿ ಹೆಚ್ಚಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...