Homeಮುಖಪುಟಮತ್ತೆ ಮುನ್ನೆಲೆಗೆ ಬಂಡೀಪುರ ಸಂಚಾರ..ರಾತ್ರಿ ನಿಷೇಧ ತೆಗೆದು ಹಾಕುತ್ತಾ ಸರ್ಕಾರ?

ಮತ್ತೆ ಮುನ್ನೆಲೆಗೆ ಬಂಡೀಪುರ ಸಂಚಾರ..ರಾತ್ರಿ ನಿಷೇಧ ತೆಗೆದು ಹಾಕುತ್ತಾ ಸರ್ಕಾರ?

- Advertisement -
- Advertisement -

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ (NH 766) ರಾತ್ರಿ ಹೊತ್ತು ವಾಹನಗಳ ಸಂಚಾರ ನಿಷೇಧಿಸಿರುವುದನ್ನು ಕರ್ನಾಟಕ ರಾಜ್ಯ ಸರ್ಕಾರ ತೆಗೆದು ಹಾಕಲು ಮುಂದಾಗಿದೆ ಎಂಬ ವಿಚಾರ ಕಳೆದ ಕೆಲ ದಿನಗಳಿಂದ ಭಾರೀ ಚರ್ಚೆಯಾಗುತ್ತಿದೆ.

ರಾತ್ರಿ ಸಂಚಾರ ನಿಷೇಧ ತೆಗೆದು ಹಾಕಿದರೆ ಹೋರಾಟ ರೂಪಿಸಲು ಪರಿಸರವಾದಿಗಳು, ವನ್ಯಜೀವಿಗಳ ಪರ ಕೆಲಸ ಮಾಡುವವರು ರೈತರು ಮತ್ತು ಬಂಡೀಪುರ ಅರಣ್ಯ ವ್ಯಾಪ್ತಿಯ ಗ್ರಾಮಗಳ ಜನರು ಮುಂದಾಗಿದ್ದಾರೆ.

ಕಳೆದ ಭಾನುವಾರ (ಮಾ.30) ಬಂಡೀಪುರದ ಮೂಲೆಹೊಳೆಯಲ್ಲಿ ನಡೆದ ಸಭೆಯಲ್ಲಿ ವನ್ಯಜೀವಿಗಳಿಗೆ ತೊಂದರೆ-ಮುಕ್ತ ಆವಾಸಸ್ಥಾನದ ಅವಶ್ಯಕತೆ ಮತ್ತು ರಾತ್ರಿ ಸಂಚಾರ ನಿಷೇಧ ಮುಂದುವರಿಸುವ ಅವಶ್ಯಕತೆಗಳನ್ನು ಒತ್ತಿ ಹೇಳಲಾಗಿದೆ.

“ಬಂಡೀಪುರದಲ್ಲಿ ರಾತ್ತಿ ಹೊತ್ತು ವಾಹನ ಸಂಚಾರ ನಿಷೇಧ ಆದ ಬಳಿಕ, ರಸ್ತೆ ಅಪಘಾತಗಳಲ್ಲಿ ವನ್ಯ ಜೀವಿಗಳು ಸಾಯುವ ಸಂಖ್ಯೆ ಕಡಿಮೆಯಾಗಿದೆ. ಅವುಗಳ ಸಂಖ್ಯೆ ವೃದ್ಧಿಯಾಗಲು ಸಹಾಯವಾಗಿದೆ. ಪ್ರಾಣಿಗಳ ಸಂಖ್ಯೆಯಲ್ಲಿನ ಹೆಚ್ಚಳ ಇದಕ್ಕೆ ಸಾಕ್ಷಿ” ಎಂದು ಬಂಡೀಪುರ ಬಫರ್ ವಲಯದ ಜಕ್ಕಹಳ್ಳಿ ಗ್ರಾಮದ ರೈತ ಶ್ರೀಕಾಂತ ಅವರು ಹೇಳಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

“ಕಳೆದ 15 ವರ್ಷಗಳಲ್ಲಿ ವಾಹನಗಳ ಸಂಖ್ಯೆ ಭಾರೀ ಹೆಚ್ಚಾಗಿದೆ. ಬಂಡೀಪುರ ಮಾರ್ಗವಾಗಿ ಹಗಲೊತ್ತು ಸಂಚರಿಸುವ ವಾಹನಗಳನ್ನು ನೋಡಿದರೆ ನಮಗದು ಗೊತ್ತಾಗುತ್ತದೆ. ರಾತ್ರಿ ಸಂಚಾರ ನಿಷೇಧ ಆಗುವ ಮೊದಲೇ ಅನೇಕ ವನ್ಯ ಪ್ರಾಣಿಗಳು ವಾಹನಗಳಿಗೆ ಸಿಲುಕಿ ಸಾಯುತ್ತಿತ್ತು”.

“ಈಗ ಏನಾದರು ರಾತ್ರಿ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ ವನ್ಯ ಜೀವಿಗಳ ಮೇಲಾಗುವ ಹಾನಿ ಊಹಿಸಲಾಗದು. ರಾತ್ರಿ ವಾಹನ ಸಂಚಾರದಿಂದ ವನ್ಯ ಜೀವಿಗಳಿಗೆ ಕಿರಿಕಿರಿ ಉಂಟಾಗಿ ಅವುಗಳು ಅರಣ್ಯದ ಅಂಚಿನ ಗ್ರಾಮಗಳತ್ತ ಬರುವ ಸಾಧ್ಯತೆ ಇದೆ. ಇದರಿಂದ ಮನುಷ್ಯ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ಹೆಚ್ಚಾಗುತ್ತದೆ” ಎಂಬುವುದು ಬಂಡೀಪುರದ ಸುತ್ತಮುತ್ತಲಿನ ಗ್ರಾಮಸ್ಥರ ಆತಂಕವಾಗಿದೆ.

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಆಗಿದ್ದು ಯಾವಾಗ?

ಕರ್ನಾಟಕದ ಮೈಸೂರು ಮತ್ತು ಕೇರಳದ ವಯನಾಡ್‌ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 (ಹಿಂದೆ 212) ದೇಶದ ಎರಡು ಪ್ರಮುಖ ವನ್ಯಜೀವಿ ಆವಾಸಸ್ತಾನಗಳಾದ ಬಂಡೀಪುರ ಮತ್ತು ವಯನಾಡ್ ರಾಷ್ಟ್ರೀಯ ಉದ್ಯಾನವನಗಳ ಮೂಲಕ ಹಾದು ಹೋಗುತ್ತದೆ.

ವನ್ಯಜೀವಿಗಳಿಗೆ ತೊಂದರೆಯಾಗದಂತೆ ತಡೆಯಲು ಮತ್ತು ವೇಗವಾಗಿ ಚಲಿಸುವ ವಾಹನಗಳಿಗೆ ಸಿಲುಕಿ ವನ್ಯ ಜೀವಿಗಳು ಸಾಯುವುದನ್ನು ತಡೆಯಲು ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ವಾಹನಗಳು ಸಂಚರಿಸುವುದನ್ನು 2009ರಲ್ಲಿ ನಿಷೇಧಿಸಲಾಗಿದೆ.

ರಾತ್ರಿ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಕೂಡ ಅಭಿವೃದ್ಧಿಪಡಿಸಲಾಗಿದೆ. ಬಂಡೀಪುರದ ಬದಲಾಗಿ ಮೈಸೂರಿನಿಂದ ಹುಣಸೂರು, ಗೋಣಿಕೊಪ್ಪಲ್, ಕುಟ್ಟ, ತೋಲ್ಪೆಟ್ಟಿ, ಮಾನಂತವಾಡಿ ಮಾರ್ಗವಾಗಿ ವಯನಾಡ್ ತಲುಪಬಹುದು. ಆದರೆ, ಈ ಮಾರ್ಗದಲ್ಲಿ ಎನ್‌ಹೆಚ್‌ 766ರಕ್ಕಿಂತ 35–40ಕಿ.ಮೀ ಹೆಚ್ಚು ದೂರ ಸಂಚರಿಸಬೇಕಿದೆ.

ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಅನುಸರಿಸಿ, ಈ ಮಾರ್ಗವನ್ನು ನವೀಕರಿಸಲು ಕರ್ನಾಟಕ ಸರ್ಕಾರ ಈಗಾಗಲೇ ಸುಮಾರು 75–80 ಕೋಟಿ ರೂಪಾಯಿಗಳನ್ನು ವ್ಯಯಿಸಿದೆ. ಇದರ ಕಾರ್ಯಸಾಧ್ಯತೆಯನ್ನು ನಿರ್ಣಯಿಸಲು ಸುಪ್ರೀಂ ಕೋರ್ಟ್ ನಿರ್ದೇಶನದ ಭಾಗವಾಗಿ 2019ರಲ್ಲಿ ಅರಣ್ಯ ಅಧಿಕಾರಿಗಳು ಈ ಮಾರ್ಗವನ್ನು ಪರಿಶೀಲಿಸಿದ್ದರು. ಈ ಮಾರ್ಗ ಪ್ರಾಥಮಿಕವಾಗಿ ರಾಜ್ಯ ಹೆದ್ದಾರಿಗಳು 90, 89 ಮತ್ತು 275 ಅನ್ನು ಒಳಗೊಂಡಿದೆ. ಇದು ಬಂಡೀಪುರದ ಉದ್ಯಾನವನದೊಳಗೆ ಸಂಚರಿಸುವುದನ್ನು ಸಂಪೂರ್ಣ ತಪ್ಪಿಸುತ್ತದೆ. ಆದರೆ, ಇದರ ಒಂದು ಸಣ್ಣ ಭಾಗ (ಸುಮಾರು 8.7 ಕಿ.ಮೀ) ವಯನಾಡ್ ವನ್ಯಜೀವಿ ಅಭಯಾರಣ್ಯದ ಅಂಚಿನಲ್ಲಿದೆ.

ಪರ್ಯಾಯ ಮಾರ್ಗ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ, ವಯನಾಡ್ ವನ್ಯಜೀವಿ ಅಭಯಾರಣ್ಯದ ಅಂಚಿನಲ್ಲಿ ಹೋದರೂ ಪರವಾಗಿಲ್ಲ, ಬಂಡೀಪುರದ ಮಧ್ಯದಲ್ಲಿ ಹೋಗುವುದನ್ನು ತಪ್ಪಿಸುತ್ತದಲ್ಲ ಎಂಬುವುದು ಕರ್ನಾಟಕ ಸರ್ಕಾರದ ವಾದ.

ಕರ್ನಾಟಕ ಸರ್ಕಾರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ವಿವಿಧ ಸಂದರ್ಭಗಳಲ್ಲಿ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮಾಡಿರುವುದನ್ನು ಸಮರ್ಥಿಸಿದೆ. ಸುರಂಗ ಮಾರ್ಗ, ರೈಲು ಮಾರ್ಗ ಸೇರಿದಂತೆ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಕೇರಳ ಸರ್ಕಾರ ಪ್ರಸ್ತಾಪಗಳನ್ನು ತಿರಸ್ಕರಿಸಿದೆ.

ಸೆಪ್ಟೆಂಬರ್ 2022ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸುರಂಗ ಮಾರ್ಗ ಮಾಡಿ ಕೇರಳ ಕರ್ನಾಟಕ ನಡುವೆ ರೈಲು ಓಡಿಸುವ ಪ್ರಸ್ತಾವನ್ನು ಮುಂದಿಟ್ಟಿದ್ದರು. ಅದನ್ನು ಬೊಮ್ಮಾಯಿ ತಿರಸ್ಕರಿಸಿದ್ದರು.

ಕರ್ನಾಟಕ ಸರ್ಕಾರ ರಾತ್ರಿ ಸಂಚಾರ ನಿಷೇಧ ತೆಗೆದು ಹಾಕಲು ಮುಂದಾಗಿದೆಯಾ? 

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆಗೆದು ಹಾಕಲು ಮುಂದಾಗಿದೆ ಎಂದು ಎಲ್ಲೆಡೆ ಚರ್ಚೆಯಾಗುತ್ತಿದೆ. ಆದರೆ, ಅದು ಶುದ್ದ ಸುಳ್ಳು. ರಾತ್ರಿ ಸಂಚಾರ ನಿಷೇಧ ಮಾಡಿರುವುದು ಕರ್ನಾಟಕ ಹೈಕೋರ್ಟ್. ಅದನ್ನು ಕೇರಳದ ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಹಾಗಾಗಿ, ಪ್ರಕರಣ ಈಗ ಸುಪ್ರೀಂ ಕೋರ್ಟ್‌ನಲ್ಲಿದೆ. ಸುಪ್ರೀಂ ಕೋರ್ಟ್ ಈ ಸಂಬಂಧ ಇದುವರೆಗೆ ಯಾವುದೇ ಆದೇಶ ನೀಡಿಲ್ಲ. ಕರ್ನಾಟಕ ಹೈಕೋರ್ಟ್‌ ಆದೇಶವೇ ಜಾರಿಯಲ್ಲಿದೆ. ಹೈಕೋರ್ಟ್ ಆದೇಶದಂತೆ ಜಾರಿಯಾದ ರಾತ್ರಿ ಸಂಚಾರ ನಿಷೇಧವನ್ನು ಸುಪ್ರೀಂ ಕೋರ್ಟ್ ತೆಗೆದು ಹಾಕಬೇಕೇ ಹೊರತು, ಸರ್ಕಾರ ತೆಗೆದು ಹಾಕಲು ಸಾಧ್ಯವಿಲ್ಲ ಎಂದು ವನ್ಯಜೀವಿ ಸಂರಕ್ಷಣಾವಾದಿ ಸಂಜಯ್ ಗುಬ್ಬಿ ಹೇಳುತ್ತಾರೆ.

ರಾತ್ರಿ ಸಂಚಾರ ನಿಷೇಧ ಮತ್ತೆ ಮುನ್ನೆಲೆಗೆ ಬಂದಿದ್ದೇಕೆ?

ವರದಿಗಳ ಪ್ರಕಾರ, ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ಆಗಿದ್ದರೂ, ಕರ್ನಾಟಕ ಮತ್ತು ಕೇರಳ ಎರಡೂ ರಾಜ್ಯ ಸರ್ಕಾರಗಳ ಒಪ್ಪಂದದ ಪ್ರಕಾರ ತಲಾ ಎರಡರಂತೆ ನಾಲ್ಕು ಸರ್ಕಾರಿ ಬಸ್‌ಗಳು ರಾತ್ರಿ ಹೊತ್ತು ಸಂಚರಿಸಲು ಅನುವು ಮಾಡಿಕೊಡಲಾಗಿದೆ.

ಇತ್ತೀಚೆಗೆ ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿಯೊಂದನ್ನು ಸಲ್ಲಿಸಿದ್ದ ಕೇರಳದ ಬೈಜು ಪಾಲ್ ಮ್ಯಾಥ್ಯೂಸ್ ಎಂಬವರು, ವಿಶೇಷ ದಿನಗಳು ಮತ್ತು ಹಬ್ಬಗಳ ಸಂದರ್ಭಗಳಲ್ಲಿ ಬಂಡೀಪುರದಲ್ಲಿ ರಾತ್ರಿ ಹೆಚ್ಚುವರಿ ಬಸ್‌ಗಳು ಸಂಚರಿಸಲು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದರು. ಈ ಅರ್ಜಿಗೆ ಬಂಡೀಪುರ ಹುಲಿ ಮೀಸಲು ಪ್ರದೇಶದ ನಿರ್ದೇಶಕ ಪ್ರಭಾಕರನ್ ಎಸ್ ಅವರು ಪ್ರತಿ-ಅಫಿಡವಿಟ್ ಸಲ್ಲಿಸಿದ್ದರು.

ಪ್ರಸ್ತಾವಿತ ಪರ್ಯಾಯ ರಾಜ್ಯ ಹೆದ್ದಾರಿ-88 ಪೂರ್ಣಗೊಂಡ ನಂತರ ಎನ್‌ ಹೆಚ್‌ 766 ಅನ್ನು ಶಾಶ್ವತವಾಗಿ ಮುಚ್ಚಬಹುದು ಎಂದು ಪ್ರಭಾಕರನ್ ಅಫಿಡವಿಟ್‌ನಲ್ಲಿ ತಿಳಿಸಿದ್ದರು. ರಸ್ತೆ ದುರಸ್ತಿಗಾಗಿ ಕರ್ನಾಟಕ ಇದುವರೆಗೆ 75 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಉಲ್ಲೇಖಿಸಿದ್ದರು.

ನಾಗರಹೊಳೆ ಹುಲಿ ಮೀಸಲು ಪ್ರದೇಶದ ಅಂಚಿನಲ್ಲಿ ಹಾದುಹೋಗುವುದರಿಂದ ನಾವು ಈ ಪರ್ಯಾಯ ರಸ್ತೆಯನ್ನು ಎಲಿವೇಟೆಡ್ ರಸ್ತೆಯಾಗಿ ಅಭಿವೃದ್ಧಿಪಡಿಸುತ್ತಿದ್ದೇವೆ ಎಂದಿದ್ದರು.

ಎಲಿವೇಟೆಡ್ ರಸ್ತೆ ನಿರ್ಮಾಣ ಪೂರ್ಣಗೊಂಡ ನಂತರ, ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮಧ್ಯಭಾಗದ ಮೂಲಕ ಹಾದುಹೋಗುವ ಅಸ್ತಿತ್ವದಲ್ಲಿರುವ ಎನ್‌ ಹೆಚ್‌-766 ಅನ್ನು ನಾವು ಶಾಶ್ವತವಾಗಿ ಮುಚ್ಚಬಹುದು, ತುರ್ತು ವಾಹನಗಳು ಮತ್ತು ಸ್ಥಳೀಯ ಸಂಚಾರಕ್ಕೆ ಮಾತ್ರ ಅವಕಾಶ ನೀಡಬಹುದು ಎಂದು ತಿಳಿಸಿದ್ದರು.

ಪ್ರತಿ-ಅಫಿಡವಿಟ್‌ನಲ್ಲಿ ಬಂಡೀಪುರದ ವನ್ಯಜೀವಿಗಳ ಮೇಲೆ ರಾತ್ರಿ ಪ್ರಯಾಣ ನಿಷೇಧದ ಸಕಾರಾತ್ಮಕ ಪರಿಣಾಮದ ದತ್ತಾಂಶವನ್ನು ನೀಡಲಾಗಿತ್ತು.

ಕೇರಳ, ವಿಶೇಷವಾಗಿ ಆಡಳಿತಾರೂಢ ಸಿಪಿಐ(ಎಂ) ಈ ಪ್ರತಿ-ಅಫಿಡವಿಟ್‌ ಅನ್ನು ಟೀಕಿಸಿತ್ತು. ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ದ್ವಿಮುಖ ನೀತಿಯನ್ನು ಹೊಂದಿದೆ ಎಂದು ಕಿಡಿಕಾರಿತ್ತು.

ಪ್ರತಿ-ಅಫಿಡವಿಟ್ ಸಲ್ಲಿಸಿದ ನಂತರ, ಮಾರ್ಚ್ 23 ರಂದು ಕರ್ನಾಟಕದ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿತ್ತು.

ಗುಂಡ್ಲುಪೇಟೆ ಶಾಸಕ ಎಚ್‌.ಎಂ ಗಣೇಶ್ ಪ್ರಸಾದ್ ಅವರ ಪ್ರಕಾರ, ಪ್ರತಿ-ಅಫಿಡವಿಟ್ ಸಲ್ಲಿಸಿದ್ದ ಬಂಡೀಪುರ ಉದ್ಯಾನವನದ ನಿರ್ದೇಶಕ ಪ್ರಭಾಕರನ್. ಎಸ್ ಅವರನ್ನು ಈ ಪ್ರಕರಣದಲ್ಲಿ ಕಾನೂನು ನಿರ್ವಹಣಾ ಅಧಿಕಾರಿಯಾಗಿ ನೇಮಿಸಲಾಗಿಲ್ಲ. ಹಾಗಾಗಿ, ಅಫಿಡವಿಟ್ ಹಿಂತೆಗೆದುಕೊಳ್ಳಲು ಮತ್ತು ಹೊಸದಾಗಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಕರ್ನಾಟಕ ಸರ್ಕಾರ ಇತ್ತೀಚಿನ ದತ್ತಾಂಶವನ್ನು ಒಳಗೊಂಡ ಹೊಸ ಅಫಿಡವಿಟ್ ಸಲ್ಲಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ಆಕ್ರೋಶಕ್ಕೆ ಕಾರಣವಾದ ಡಿಕೆಶಿ ವಾಗ್ದಾನ

ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿ-ಅಫಿಡವಿಟ್ ಸಲ್ಲಿಸುವ ಮೊದಲೇ, ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ತೆಗೆದುಹಾಕುವ ಬಗ್ಗೆ ಹೇಳಿಕೆಗಳನ್ನು ನೀಡಿದ್ದರು.

ನವೆಂಬರ್ 2024 ರಲ್ಲಿ ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ವಯನಾಡಿನಲ್ಲಿ ನಡೆದ ಉಪಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಡಿ.ಕೆ ಶಿವಕುಮಾರ್, ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ತೆಗೆದುಹಾಕಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.

ರಾತ್ರಿ ಸಂಚಾರ ನಿಷೇಧದಿಂದ ಅಂತಾರಾಜ್ಯ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದಿದ್ದರು.

ಕರ್ನಾಟಕ ಸರ್ಕಾರ ಪ್ರತಿ-ಅಫಿಡವಿಟ್ ಹಿಂತೆಗೆದುಕೊಂಡ ನಂತರ, ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ತೆಗೆದುಹಾಕುವಂತೆ ಕೋರಿ ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆಯೇ? ಎಂದು ಮಾಧ್ಯಮ ವರದಿಗಾರರು ಡಿ.ಕೆ ಶಿವಕುಮಾರ್ ಅವರನ್ನು ಕೇಳಿದ್ದರು. ಆದಕ್ಕೆ ಪ್ರತಿಕ್ರಿಯಿಸಿದ್ದ ಡಿಕೆಶಿ “ನಾವು ಈ ಪತ್ರ ನೋಡುತ್ತೇವೆ, ಪರಿಶೀಲನೆ ಮಾಡಿ, ಚರ್ಚಿಸುತ್ತೇವೆ. ಆನಂತರ ತೀರ್ಮಾನ ಮಾಡುತ್ತೇವೆ” ಎಂದಿದ್ದರು.

ಅರಣ್ಯ ಸಚಿವರು ಹೇಳಿದ್ದೇನು?

“ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ ವಾಹನ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾದುದು. ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಮಾರ್ಚ್‌ 28ರ ಶುಕ್ರವಾರ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

“ಪ್ರಸ್ತುತ ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಈಗ ರಾತ್ರಿ 9ರಿಂದ ಬೆಳಿಗ್ಗೆ 6ಗಂಟೆಯವರೆಗೆ ನಿರ್ಬಂಧ ಜಾರಿಯಲ್ಲಿದೆ. ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಬಾಂಧವ್ಯ ಗಮನದಲ್ಲಿಟ್ಟುಕೊಂಡು, ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಮಾಡಲು ಕ್ರಮ ವಹಿಸಲಾಗುವುದು” ಎಂದಿದ್ದಾರೆ.

ಕರ್ನಾಟಕ ಸರ್ಕಾರ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ವಾಪಸ್ ಪಡೆಯುತ್ತೇವೆ ಎಂದು ಸುಪ್ರೀಂ ಕೋರ್ಟ್‌ಗೆ ಇನ್ನೂ ಅಫಿಡವಿಟ್ ಸಲ್ಲಿಸಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಆ ವಿಚಾರದಲ್ಲಿ ಯಾವುದೇ ಆದೇಶ ಆಗಿಲ್ಲ. ಸುಮ್ಮನೆ ರಾಜಕೀಯ ಕಾರಣಕ್ಕೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ” ಎಂದು ವನ್ಯಜೀವಿ ಸಂರಕ್ಷಣಾವಾದಿ ಸಂಜಯ್ ಗುಬ್ಬಿ ಹೇಳಿದ್ದಾರೆ.

ಸರ್ಕಾರ ರಾತ್ರಿ ಸಂಚಾರ ನಿಷೇಧ ತೆಗೆದು ಹಾಕಲು ಮುಂದಾದರೆ ಮಾತನಾಡಬಹುದಿತ್ತು. ಈಗ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನಿಷೇಧ ತೆಗೆದು ಹಾಕುವ ಅಧಿಕಾರ ಈಗ ಸುಪ್ರೀಂ ಕೋರ್ಟ್‌ ಕೈಯ್ಯಲ್ಲಿದೆ. ಸರ್ಕಾರ ತನ್ನ ಅಭಿಪ್ರಾಯ ತಿಳಿಸಬಹುದು ಅಷ್ಟೆ ಎಂದು ತಿಳಿಸಿದ್ದಾರೆ.

“ವನ್ಯ ಜೀವಿಗಳಿಗೂ ಬದುಕುವ ಹಕ್ಕಿದೆ. ಅವುಗಳ ಆವಾಸಸ್ತಾನಗಳನ್ನು ಹಾಳುಗೆಡವದೆ ಉಳಿಸಬೇಕಿದೆ. ಜನರು ಸ್ವಲ್ಪ ಹೊಂದಿಕೊಂಡು ಹೋಗಬೇಕು. ನಾವು ಧರ್ಮ, ಸಂಸ್ಕೃತಿ ಎಂದು ಹಲವು ವಿಷಯಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ. ಅದೇ ರೀತಿ ಪರಿಸರ ವನ್ಯ ಜೀವಿಗಳ ವಿಚಾರದಲ್ಲೂ ಸ್ವಲ್ಪ ಹೊಂದಾಣಿಕೆ ಮಾಡಿಕೊಳ್ಳಬೇಕು. ಉದಾ : ಬೇಲೂರು-ಹಳೆಬೇಡು ದೇವಸ್ಥಾನಗಳನ್ನು ಕೆಡವಿ ರಸ್ತೆ ನಿರ್ಮಿಸಲು ಸಾಧ್ಯವೇ? ಅದೇ ರೀತಿ ಬಂಡೀಪುರದಲ್ಲೂ ಕೆಲವೊಂದು ಸಾಧ್ಯವಿಲ್ಲ. ಹಾಗಾಗಿ, ಜನರು ಹೊಂದಾಣಿಕೆ ಮಾಡಿಕೊಳ್ಳಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಸರ್ಕಾರ ಬಂಡೀಪುರದ ಬದಲಾಗಿ ರಾತ್ರಿ ಸಂಚಾರಕ್ಕೆ ಪರ್ಯಾಯ ಮಾರ್ಗ ನಿರ್ಮಾಣ ಮಾಡಿದೆ. ಅದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅಂಚಿನಲ್ಲಿ ಹೋಗುತ್ತದೆ. ಅಲ್ಲಿ ಎಲಿವೇಟೆಡ್ ರಸ್ತೆ ನಿರ್ಮಾಣ ಮಾಡಿದರೆ, ಬಂಡೀಪುರದ ಮಧ್ಯೆ ಹೋಗುವ ಎನ್‌ಎಚ್‌ 766 ಅನ್ನು ಸಂಪೂರ್ಣವಾಗಿ ಮುಚ್ಚಬಹುದು” ಎಂದಿದ್ದಾರೆ.

ಮರಳು ದಂಧೆ, ಖಾಸಗಿ ಬಸ್‌ಗಳ ಲಾಬಿ   

ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎನ್ನುವುದು ಅಕ್ರಮ ಮರಳು ದಂಧೆ ಮತ್ತು ಕೇರಳದ ಖಾಸಗಿ ಬಸ್‌ಗಳ ಲಾಬಿ ಎಂದು ಹಲವು ವರದಿಗಳು ಹೇಳಿವೆ. ಸಂಜಯ್‌ ಗುಬ್ಬಿ ಕೂಡ ಈ ಆರೋಪವನ್ನು ಹೌದು ಎಂದಿದ್ದಾರೆ. ಕೇರಳದ ಖಾಸಗಿ ಬಸ್‌ಗಳ ಲಾಬಿ ಈ ವಿಚಾರದಲ್ಲಿ ಹೆಚ್ಚಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...