Homeಕರ್ನಾಟಕಉಸ್ತುವಾರಿ ಸಚಿವರುಗಳೇ ಎಲ್ಲಿದ್ದೀರಿ? ಇತ್ತ ಸ್ವಲ್ಪ ಗಮನಿಸಿ ಪ್ಲೀಸ್!

ಉಸ್ತುವಾರಿ ಸಚಿವರುಗಳೇ ಎಲ್ಲಿದ್ದೀರಿ? ಇತ್ತ ಸ್ವಲ್ಪ ಗಮನಿಸಿ ಪ್ಲೀಸ್!

ಆದರೆ, ಈ ಪೈಕಿ ವಿಜಯಪುರದ ಉಸ್ತುವಾರಿ ಶಶಿಕಲಾ ಜೊಲ್ಲೆ ಮಾತ್ರ ತಮ್ಮ ಜಿಲ್ಲೆಯಲ್ಲಿ ಓಡಾಡಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

- Advertisement -
- Advertisement -

ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಸುದ್ದಿ ಮಾಡಿದ್ದಕ್ಕಿಂತ ಹೆಚ್ಚು ಸುದ್ದಿ ಮಾಡಿದ ವಿಚಾರ ಏನೆಂದರೆ ಬೆಂಗಳೂರಿನ ಕೊರೊನಾ ಉಸ್ತುವಾರಿ ಸಚಿವರು ಯಾರು ಎಂಬುದು? ಆರಂಭದಿಂದಲೂ ಶ್ರೀರಾಮುಲು ಹಾಗೂ ಕೆ. ಸುಧಾಕರ್ ಈ ವಿಚಾರದಲ್ಲಿ ಪೈಪೋಟಿಗೆ ಬಿದ್ದಿದ್ದರು. ಕೊನೆಗೆ ಇಬ್ಬರನ್ನೂ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಈ ನಡುವೆ ಇದೀಗ ಆರ್. ಅಶೋಕ್ ಅವರನ್ನೂ ಬೆಂಗಳೂರಿನಲ್ಲಿ ಕೊರೊನಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಈ ನಡುವೆ ಬೆಂಗಳೂರನ್ನು 7 ವಿಭಾಗಗಳಾಗಿ ವಿಂಗಡಿಸಿ ಕೊರೊನಾ ನಿಯಂತ್ರಣಕ್ಕಾಗಿ 8 ಸಚಿವರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಪ್ರತಿ ವಿಭಾಗದ ಉಸ್ತುವಾರಿ ನೋಡಿಕೊಳ್ಳುವ ಸಲುವಾಗಿ ಓರ್ವ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಈ ಮಟ್ಟದ ಮುತುವರ್ಜಿ ವಹಿಸುತ್ತಿರುವುದು ನಿಜಕ್ಕೂ ಸ್ವಾಗತಾರ್ಹ ಬೆಳವಣಿಗೆ.

ಆದರೆ, ಇದೇ ಮುತುವರ್ಜಿ ಇತರೆ ಜಿಲ್ಲೆಗಳ ಮೇಲೆ ಏಕಿಲ್ಲ? ಬೆಂಗಳೂರಿನ ಕೊರೊನಾ ಉಸ್ತುವಾರಿಗೆ ಇರುವ ಪೈಪೋಟಿ ಇತರೆ ಜಿಲ್ಲೆಗಳಿಗೆ ಏಕಿಲ್ಲ? ಅಸಲಿಗೆ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಮಾಡುತ್ತಿರುವ ಕೆಲಸವಾದರೂ ಏನು? ಉಸ್ತುವಾರಿ ಸಚಿವರುಗಳಿಗೆ ಅನ್ಯ ಜಿಲ್ಲೆಗಳ ಮೇಲೆ ಏಕಿಷ್ಟು ಅಸಡ್ಡೆ? ಯಾವ ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ ಕೈಮೀರುತ್ತಿದೆ ಗೊತ್ತೇ?

ಜಿಲ್ಲಾ ಉಸ್ತುವಾರಿಗಳೇ ಎಲ್ಲಿದ್ದೀರಿ?

ಕರ್ನಾಟಕದಲ್ಲಿ ಈವರೆಗೆ 51,422 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಮಾರಕ ಸೋಂಕಿಗೆ 1032 ಜನ ಮೃತಪಟ್ಟಿದ್ದಾರೆ. ಕಳೆದ ಎರಡು ವಾರದಿಂದ ಪ್ರತಿದಿನ ಸರಾಸರಿಯಾಗಿ 2,500 ಜನ ರಾಜ್ಯದಲ್ಲಿ ಈ ಮಾರಣಾಂತಿಕ ಸೋಂಕಿಗೆ ತುತ್ತಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ ನಿಜ. ಆದರೆ, ಬೆಂಗಳೂರನ್ನು ಹೊರತುಪಡಿಸಿಯೂ ಧಾರವಾಡ, ದಕ್ಷಿಣ ಕನ್ನಡ, ಗದಗ, ರಾಯಚೂರು, ಬೀದರ್, ಕಲ್ಬುರ್ಗಿ, ಮೈಸೂರು, ಚಿತ್ರದುರ್ಗ, ಮೈಸೂರು, ರಾಮನಗರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಈ ಜಿಲ್ಲೆಗಳಲ್ಲಿ ಒಂದು ದಿನಕ್ಕೆ ಸರಾಸರಿಯಾಗಿ ಕನಿಷ್ಟ 100 ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ. ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಈ ಸಂಖ್ಯೆ ಎರಡು ಪಟ್ಟು ಹೆಚ್ಚಾಗಲಿದೆ ಎನ್ನಲಾಗುತ್ತಿದೆ.

ಆದರೆ, ಈ ಯಾವ ಜಿಲ್ಲೆಗಳಲ್ಲೂ ಕೊರೊನಾ ರೋಗಿಗಳನ್ನು ಆರೈಕೆ ಮಾಡಲು ಸೂಕ್ತ ಆಸ್ಪತ್ರೆಗಳಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಆಂಬ್ಯುಲೆನ್ಸ್ ಹಾಗೂ ನುರಿತ ವೈದ್ಯರ ಸಂಖ್ಯೆ ಕೂಡ ಜನರ ಅನುಪಾತಕ್ಕೆ ಪೂರಕವಾಗಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಗೆ ಶೇ.50ರಷ್ಟು ಹಾಸಿಗೆಯನ್ನು ಮೀಸಲಿಡಬೇಕು ಎಂದು ಸರ್ಕಾರ ಆದೇಶಿಸಿದೆಯಾದರೂ ಈ ಕುರಿತು ಸ್ಪಷ್ಟ ಮಾರ್ಗಸೂಚಿ ಇಲ್ಲ. ಇನ್ನೂ ಖಾಸಗಿ ಆಸ್ಪತ್ರೆಗಳಲ್ಲಂತೂ ಮಾನವೀಯತೆಯೇ ಇಲ್ಲವೇನೋ ಎಂಬಂತಾಗಿದೆ ಪರಿಸ್ಥಿತಿ.

ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲಾಡಳಿತವೂ ಪ್ರತಿದಿನ ಹೀಗೆ ಇಲ್ಲಗಳ ನಡುವೆಯೇ ದಿನ ಕಳೆಯುತ್ತಿವೆ. ಒಂದೆಡೆ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ, ಮತ್ತೊಂದೆಡೆ ಅವರ ಚಿಕಿತ್ಸೆಗೆ ಸೂಕ್ತ ಸೌಲಭ್ಯ ಒದಗಿಸುವಲ್ಲಿ ಜಿಲ್ಲಾಡಳಿತ ವಿಫಲವಾಗುತ್ತಿದೆ. ಆಸ್ಪತ್ರೆ ಕಡೆ ಬರಲು ಜನ ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣಕ್ಕೆ ಈಗ ಸೋಂಕು ಸಾಮುದಾಯಿಕವಾಗಿ ಹರಡುತ್ತಿದೆ ಎಂದು ಕೂಡ ಹೇಳಲಾಗುತ್ತಿದೆ.

ಹಾಗಾದರೆ, ಜಿಲ್ಲಾ ಭಾಗಗಳಲ್ಲಿ ಜನರಲ್ಲಿ ಆವರಿಸಿರುವ ಈ ಭಯವನ್ನು ಹೋಗಲಾಡಿಸಿ ಎಲ್ಲರಿಗೂ ಸೂಕ್ತ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ಒದಗಿಸುವ ಕರ್ತವ್ಯ ಯಾರದ್ದು? ಎಂಬ ಪ್ರಶ್ನೆ ಸಾಮಾನ್ಯವಾಗಿ ಮೂಡುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರುಗಳುಗಳಿಗೆ ಈ ಕೂಗು ಕೇಳುತ್ತಿದೆಯೇ?

ಅಸಲಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕಳೆದ ಏಪ್ರಿಲ್ 09 ರಂದು ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದರು. ಯಾವುದೇ ಜಿಲ್ಲೆಯ ಮೂಲಭೂತ ಸಮಸ್ಯೆಯನ್ನು ಆಲಿಸುವುದು ಮತ್ತು ಆ ಸಮಸ್ಯೆಯ ಪರಿಹಾರಕ್ಕಾಗಿ ಶ್ರಮಿಸುವುದು ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ. ಆದರೆ, ಕೊರೊನಾ ರಾಜ್ಯಾದ್ಯಂತ ವ್ಯಾಪಿಸುತ್ತಿರುವ ಸಮಯದಲ್ಲಿ ಜಿಲ್ಲಾ ಉಸ್ತುವಾರಿಗಳು ಸಚಿವರ ಕೆಲಸ ಹೆಚ್ಚಾಗಿತ್ತು. ಇವರ ತಮ್ಮ ಕರ್ತವ್ಯ ನಿಭಾಯಿಸಿದರೇ?

ಶೂನ್ಯ ದಾಖಲೆ ಬರೆದ ಉಸ್ತುವಾರಿ ಸಚಿವರುಗಳು

ಕೊರೊನಾ ಸೋಂಕು ವ್ಯಾಪಿಸುತ್ತಿರುವ ಭೀಕರ ದಿನಗಳಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಕೈಜೋಡಿಸಿ ಸೋಂಕು ನಿವಾರಣೆಗಾಗಿ ಉಸ್ತುವಾರಿ ಸಚಿವರು ಹೋರಾಡಬೇಕಿತ್ತು. ತಮ್ಮ ಜಿಲ್ಲೆಗಳಿಗೆ ಅಗತ್ಯವಾದ ವೆಂಟಿಲೇಟರ್, ವೈದ್ಯರಿಗೆ ಪಿಪಿಇ ಕಿಟ್, ಶೀಘ್ರದಲ್ಲಿ ವರದಿ ನೀಡುವ ಸಲುವಾಗಿ ಕೋವಿಡ್ ಲ್ಯಾಬ್, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‍ಗಳನ್ನು ಒದಗಿಸುವುದು, ಇದಕ್ಕಾಗಿ ಸರ್ಕಾರದ ಜೊತೆಗೆ ಸಮನ್ವಯ ಸಾಧಿಸುವುದು ಅವರ ಬದ್ಧತೆಯಾಗಬೇಕಿತ್ತು.

ಆದರೆ, ಯಾವ ಜಿಲ್ಲಾ ಉಸ್ತುವಾರಿ ಸಚಿವರೂ ಕನಿಷ್ಟ ತಮ್ಮ ಕ್ಷೇತ್ರಕ್ಕೆ ಹೋಗಿ ಜನರ ಸಮಸ್ಯೆ ಆಲಿಸಿದ, ಕೊರೋನಾ ಪರಿಸ್ಥಿತಿಯ ಮೇಲುಸ್ತುವಾರಿ ಮಾಡಿದ ಉದಾಹರಣೆ ನಮ್ಮ ಮುಂದೆ ಇಲ್ಲ ಎಂಬುದೇ ನಿಜ.

ಅಸಲಿಗೆ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ. ಆದರೆ, ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಅವರು ತಮ್ಮ ಉಸ್ತುವಾರಿ ಜಿಲ್ಲೆಗೆ ತೆರಳಿ ಕೊರೊನಾ ಮೇಲುಸ್ತುವಾರಿ ನೋಡಿದ್ದು ಕೇವಲ ಒಂದು ಬಾರಿ ಮಾತ್ರ. ಈ ವೇಳೆಯೂ ಚನ್ನಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರು ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇನ್ನೂ ಚಿತ್ರದುರ್ಗದ ಉಸ್ತುವಾರಿಯನ್ನಾಗಿ ಶ್ರೀರಾಮುಲು ಹಾಗೂ ಚಿಕ್ಕಬಳ್ಳಾಪುರದ ಉಸ್ತುವಾರಿಯಾಗಿ ಕೆ. ಸುಧಾಕರ್ ಅವರನ್ನು ನೇಮಿಸಲಾಗಿದೆ. ಆದರೆ, ಬೆಂಗಳೂರು ಉಸ್ತುವಾರಿಗಾಗಿ ಪೈಪೋಟಿಗೆ ಬಿದ್ದು ಹೋರಾಡಿದ ಇವರು ತಮ್ಮ ಜಿಲ್ಲೆಯ ಬಗ್ಗೆ ಎಷ್ಟರ ಮಟ್ಟಿಗೆ ಆಸಕ್ತಿ ತೋರಿದರು ಎಂಬುದು ದೇವರಿಗೆ ಪ್ರೀತಿ.

ಅಶ್ವತ್ಥ್ ನಾರಾಯಣ್, ಶ್ರೀರಾಮುಲು, ಸುಧಾಕರ್, ಆರ್. ಅಶೋಕ್ ಹೊರತಾಗಿಯೂ ಸಹ ಯಾವ ಸಚಿವರೂಗಳು ತಮ್ಮ ಜಿಲ್ಲೆಗಳಿಗೆ ತೆರಳಿ ಕೆಲಸ ಮಾಡಿಲ್ಲ. ಇದೇ ಕಾರಣಕ್ಕೆ ಬೆಂಗಳೂರು ಹೊರತು ಬೇರೆ ಯಾವ ಜಿಲ್ಲೆಯೂ ಗಮನ ಸೆಳೆದಿಲ್ಲ ಎಂಬುದೇ ಸತ್ಯ. ಆದರೆ, ಈ ಪೈಕಿ ವಿಜಯಪುರದ ಉಸ್ತುವಾರಿ ಶಶಿಕಲಾ ಜೊಲ್ಲೆ ಮಾತ್ರ ತಮ್ಮ ಜಿಲ್ಲೆಯಲ್ಲಿ ಓಡಾಡಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಸಚಿವರುಗಳಿಗೆ ಬೆಂಗಳೂರಿನ ಮೇಲೆ ಏಕಿಷ್ಟು ಮೋಹ?

ಬೆಂಗಳೂರಿನ ಮೇಲೆ ಮಾತ್ರ ಸಚಿವರಿಗೆ ಏಕಿಷ್ಟು ಮೋಹ? ನಗರದ ಉಸ್ತುವಾರಿಗೆ ಮಾತ್ರ ಏಕೆ ಇಷ್ಟು ಹೋರಾಟ, ಮೇಲಾಟ? ಎಂಬುದು ಪ್ರಶ್ನೆ.

ಅಸಲಿಗೆ ಕೊರೋನಾ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಾವಿರಾರು ಕೋಟಿ ಹಣ ಓಡಾಡುತ್ತಿದೆ. ವೆಂಟಿಲೇಟರ್‍ನಿಂದ ಹಿಡಿದು ಪಿಪಿಇ ಕಿಟ್ ಖರೀದಿವರೆಗೆ ಎಲ್ಲ ವ್ಯವಹಾರಗಳೂ ಬೆಂಗಳೂರಿನಿಂದಲೇ, ಸಚಿವರ ಕಣ್ಣಳತೆಯಲ್ಲೇ ನಡೆಯುತ್ತಿದೆ. 250ರೂ ಬೆಲೆಯ ಸ್ಯಾನಿಟೈಸರ್‍ಗೆ 600ರೂ, 2500 ರೂ ಬೆಲೆಯ ಧರ್ಮಲ್ ಸ್ಕ್ರೀನಿಂಗ್ ಮೆಷಿನ್‍ಗೆ 12,000 ರೂ, 200 ರೂ ಗ್ಲೌಸ್‍ಗೆ 500 ರೂ ಸೇರಿದಂತೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಎಲ್ಲಾ ವಸ್ತುಗಳ ಖರೀದಿಯಲ್ಲೂ ದುಪ್ಪಟ್ಟು ಹಣ ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಖರೀದಿಯ ಹೆಸರಿನಲ್ಲಿ ಸುಮಾರು 25,000 ಕೋಟಿ ಭ್ರಷ್ಟಾಚಾರ ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ.

ಇದೇ ಕಾರಣಕ್ಕೆ ಬೆಂಗಳೂರಿನ ಉಸ್ತುವಾರಿಗಾಗಿ ಆರ್. ಅಶೋಕ್, ಶ್ರೀರಾಮುಲು ಹಾಗೂ ಕೆ. ಸುಧಾಕರ್ ನಡುವೆ ಸಾಕಷ್ಟು ಪೈಪೋಟಿ ನಡೆಯುತ್ತಿದೆಯೇ ಎಂಬ ಪ್ರಶ್ನೆ ಕೂಡ ಎತ್ತಲಾಗಿದೆ. ಆದರೆ, ವಿಪರ್ಯಾಸ ನೋಡಿ ಬೆಂಗಳೂರಿನ ಮೇಲೆ ನಮ್ಮ ಸಚಿವರುಗಳು ಇಷ್ಟು ಕಾಳಜಿ ವಹಿಸಿಯೂ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ತಮಗೆ ಕಳಪೆ ಚಿಕಿತ್ಸೆ ಸಿಗುತ್ತಿದೆ ಎಂದು ವಿಡಿಯೋ ಮಾಡಿ ಸಾಮಾನ್ಯ ಜನ ಗೋಳಾಡುವಂತಾಗಿದೆ. ತುರ್ತು ಚಿಕಿತ್ಸೆ ಇಲ್ಲದೆ ಬೀದಿಯಲ್ಲೇ ಹೆಣವಾಗುತ್ತಿರುವ ವರದಿಗಳು ಬಂದಿವೆ. ಭಯಭೀತರಾಗಿ ಜನ ತಮ್ಮ ಊರುಗಳಿಗೆ ಹಿಂತಿರುಗುತ್ತಿದ್ದಾರೆ.

ಆದರೆ, ಜಿಲ್ಲಾ ಉಸ್ತುವಾರಿ ಸಚಿವರುಗಳ ಅಸಡ್ಡೆಯಿಂದಾಗಿ ಬೆಂಗಳೂರಿನ ಕೊರೊನಾ ಪರಿಸ್ಥಿತಿ ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಆವರಿಸಬಾರದು. ಅದಕ್ಕೂ ಮುನ್ನ ಸರ್ಕಾರ ಮತ್ತು ಸಚಿವರುಗಳು ಎಚ್ಚೆತ್ತುಕೊಳ್ಳಲಿ ಎಂಬುದೇ ಜನಸಾಮಾನ್ಯರ ಆಶಯ.


ಇದನ್ನು ಓದಿ: ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ…!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...