Homeಕರ್ನಾಟಕ'ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಕುಟುಂಬದವರು ಎಲ್ಲಿದ್ದರು..?': ಡಿಕೆ ಶಿವಕುಮಾರ್ ವಾಗ್ದಾಳಿ

‘ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಕುಟುಂಬದವರು ಎಲ್ಲಿದ್ದರು..?’: ಡಿಕೆ ಶಿವಕುಮಾರ್ ವಾಗ್ದಾಳಿ

- Advertisement -
- Advertisement -

‘ಕೋವಿಡ್ ಸಮಯದಲ್ಲಿ ಜನರು ಕಷ್ಟಕ್ಕೆ ಸಿಲುಕಿದ್ದಾಗ ಅವರ ಪರವಾಗಿ ನಿಂತಿದ್ದು ಡಿ.ಕೆ. ಸುರೇಶ್, ಇದು ಮಾನವೀಯತೆ, ಹೃದಯವಂತಿಕೆಯಲ್ಲವೇ? ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಎಲ್ಲಿ ಹೋಗಿದ್ದರು’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಮರುಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಅವರು ಗುರುವಾರ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಲಕ್ಷಾಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, “ನನಗೆ ಕುಮಾರಸ್ವಾಮಿ ಅವರ ವಿಚಾರ ಮಾತನಾಡಲು ಇಷ್ಟವಿಲ್ಲ. ಆದರೂ ಅವರಿಗೆ ಒಂದು ವಿಚಾರ ಕೇಳಬಯಸುತ್ತೇನೆ. ನೀವು ಈ ಜಿಲ್ಲೆಯ ಕ್ಷೇತ್ರವೊಂದರ ಶಾಸಕರು. ಕೋವಿಡ್ ಬಂದಾಗ ಈ ಭಾಗದ ಬಡವರ ರಕ್ಷಣೆಗೆ ನೀವು ಯಾರಾದರೂ ಒಬ್ಬರು ಮುಂದೆ ಬಂದರಾ? ಇಲ್ಲ” ಎಂದು ಕಿಡಿಕಾರಿದರು.

“ಆದರೆ, ಡಿಕೆ ಸುರೇಶ್ ಅವರು ಪ್ರತಿ ಕುಟುಂಬಕ್ಕೆ ಆಹಾರ ಪದಾರ್ಥ, ಮೆಡಿಕಲ್ ಕಿಟ್ ವಿತರಿಸಿದರು. ರೈತರಿಗೆ ಮಾರುಕಟ್ಟೆ ಇಲ್ಲದಾಗ, ರೈತರು ಬೆಳೆದ ತರಕಾರಿಗಳನ್ನು ಅವರ ಜಮೀನಿನಿಂದ ಖರೀದಿ ಮಾಡಿದರು. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ತರಕಾರಿ ಖರೀದಿಸಿ ಅದನ್ನು ಜನಸಾಮಾನ್ಯರಿಗೆ ಉಚಿತವಾಗಿ ಹಂಚಿದ್ದಾರೆ. ಆ ಮೂಲಕ ರೈತರು ಹಾಗೂ ಬಡವರನ್ನು ರಕ್ಷಣೆ ಮಾಡಿದ್ದಾರೆ” ಎಂದರು.

“ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ ಸುರೇಶ್ ಪಿಪಿಇ ಕಿಟ್ ಧರಿಸಿ ಅನಾಥ ಶವಗಳ ಅಂತ್ಯ ಸಂಸ್ಕಾರ ಮಾಡಿದರು. ಇನ್ನು ಕೋವಿಡ್ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ಇದ್ದಾಗ, ಸುರೇಶ್ ಅವರು ತಾವೇ ಖುದ್ದಾಗಿ ಪಿಪಿಇ ಕಿಟ್ ಧರಿಸಿ ಕೋವಿಡ್ ವಾರ್ಡ್ ಒಳಗೆ ಹೋಗಿ, ಸೋಂಕಿತರ ಸಮಸ್ಯೆ ಆಲಿಸಿದರು. ಅವರಿಗೆ ಧೈರ್ಯ ತುಂಬಿದರು. ಇದು ಮಾನವೀಯತೆ ಅಲ್ಲವೇ? ಇದು ಹೃದಯವಂತಿಕೆಯಲ್ಲವೇ? ಕುಮಾರಣ್ಣ ಆಗ ಎಲ್ಲಿ ಹೋಗಿದ್ದರು? ಅವರ ಅಭ್ಯರ್ಥಿ ಎಲ್ಲಿ ಹೋಗಿದ್ದರು? ಅವರ ಕುಟುಂಬ ಎಲ್ಲಿ ಹೋಗಿತ್ತು” ಎಂದು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

“ಕಷ್ಟಕಾಲದಲ್ಲಿ ಜನರಿಗೆ ಸಹಾಯ ಮಾಡಲು ಕುಮಾರಸ್ವಾಮಿ ಅವರಿಂದ ಆಗಲಿಲ್ಲ. ರಾಮನಗರದಲ್ಲಿರುವ ಆಸ್ಪತ್ರೆ ಕಟ್ಟಿಸಿದವರು ಯಾರು? ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಈ ಡಿ.ಕೆ. ಶಿವಕುಮಾರ್ ಕಟ್ಟಿಸಿದ್ದು. ಅಲ್ಲಮಪ್ರಭುಗಳು ಒಂದು ಮಾತು ಹೇಳುತ್ತಾರೆ. ಕೊಟ್ಟ ಕುದುರೆಯನು ಏರಲರಿಯದೇ ಮತ್ತೊಂದು ಕುದುರೆ ಏರಲು ಬಯಸುವವನು ವೀರನೂ ಅಲ್ಲ, ಶೂರನೂ ಅಲ್ಲ. ಅದೇ ರೀತಿ ಕುಮಾರಣ್ಣ ಅಧಿಕಾರ ಇಲ್ಲದಾಗ ಏನೂ ಮಾಡಲಿಲ್ಲ, ಅಧಿಕಾರ ಹೋದಾಗ ಏನು ಮಾಡುತ್ತೀರಿ” ಎಂದು ಲೇವಡಿ ಮಾಡಿದರು.

ಕ್ಷೇತ್ರದ ಅಭಿವೃದ್ಧಿಗೆ ಬದ್ಧ:

“ಸುರೇಶ್ ಅವರನ್ನು ಆಯ್ಕೆ ಮಾಡಿದರೆ ಏನು ಲಾಭ ಎಂಬ ಪ್ರಶ್ನೆ ನಿಮ್ಮಲ್ಲಿರಬಹುದು. ನರೇಗಾ ಯೋಜನೆಯಲ್ಲೇ ₹2,000 ಕೋಟಿ ಅನುದಾನ ತಂದು ದೇಶದಲ್ಲೇ ಮಾದರಿ ತಾಲೂಕಾಗಿ ಮಾಡಿರುವುದು ಸಂಸದ ಡಿಕೆ ಸುರೇಶ್; ಈ ಜಿಲ್ಲೆಯ ಎಲ್ಲಾ ಕೆರೆಗಳನ್ನು ತುಂಬಿಸಿ ಈ ಭಾಗದ ಅಂತರ್ಜಲ ಮಟ್ಟ ಏರಿಸಿದ್ದರೆ ಅದು ಸುರೇಶ್ ಮತ್ತು ಶಿವಕುಮಾರ್ ಮಾತ್ರ. ಇಡೀ ರಾಷ್ಟ್ರದಲ್ಲಿ ಯಾವುದಾದರೂ ಲೋಕಸಭಾ ಕ್ಷೇತ್ರದಲ್ಲಿ ಪ್ರತಿ ಎರಡು ಮೂರು ರೈತರಿಗೆ ಒಂದೊಂದು ಟ್ರಾನ್ಸ್ಫಾರ್ಮರ್ ಗಳನ್ನು ಕೊಟ್ಟಿದ್ದೇವೆ. ಇಂತಹ ವ್ಯವಸ್ಥೆ ಈ ಕ್ಷೇತ್ರದ ಹೊರತಾಗಿ ರಾಜ್ಯ ಹಾಗೂ ರಾಷ್ಟ್ರದಲ್ಲಿ ಬೇರೆ ಯಾವುದೇ ಕ್ಷೇತ್ರದಲ್ಲಿಲ್ಲ” ಎಂದರು.

“ಈ ಜಿಲ್ಲೆಯ ಬಡ ಜನರಿಗೆ ನಿವೇಶನ ನೀಡಬೇಕು ಎಂಬುದು ಡಿ.ಕೆ. ಸುರೇಶ್ ಅವರ ಕನಸು. ಈ ಬಗ್ಗೆ ಕುಮಾರಸ್ವಾಮಿ ಅವರಿಗೆ ನಾವು ಮನವಿ ಮಾಡಿದೆವು. ಆದರೂ ಅವರು ಒಂದು ಸಭೆಗೂ ಬರಲಿಲ್ಲ. ಆಶ್ರಯ ಸಮಿತಿ ಸಭೆಗೂ ಬರಲಿಲ್ಲ. ನಾವು ಚರ್ಚೆ ಮಾಡಿ 60 ಎಕರೆ ಜಾಗ ಮೀಸಲಿಡಲು ತೀರ್ಮಾನ ಮಾಡಿದೆವು. ಕಳೆದ ಬಾರಿ ಚುನಾವಣೆಯಲ್ಲಿ ನನ್ನ ಮನವಿಗೆ ಸ್ಪಂದಿಸಿ ನೀವು ಇಕ್ಬಾಲ್ ಅಹ್ಮದ್ ಅವರನ್ನು ಆರಿಸಿ ಕಳುಹಿಸಿದ್ದೀರಿ. ಈಗ ಡಿ.ಕೆ. ಸುರೇಶ್ ಹಾಗೂ ಇಕ್ಬಾಲ್ ಅವರು ಸೇರಿ ಬಡವರಿಗೆ ನಿವೇಶನ ನೀಡಲು 100 ಎಕರೆ ಜಾಗವನ್ನು ಮೀಸಲಿಡಲು ತೀರ್ಮಾನಿಸಿದ್ದಾರೆ. ಚನ್ನಪಟ್ಟಣ ಹಾಗೂ ರಾಮನಗರಕ್ಕೆ ಕುಡಿಯುವ ನೀರು ಪೂರೈಸಲು 540 ಕೋಟಿ ಯೋಜನೆ ರೂಪಿಸಲಾಗಿದೆ. ನಾವು ಮೇಕೆದಾಟು ಯೋಜನೆ ಆಗ್ರಹಿಸಿ ಇದೇ ರಸ್ತೆಯಲ್ಲಿ ಪಾದಯಾತ್ರೆ ಮಾಡಿದೆವು. ಈಗ ದೇವೇಗೌಡರು ಮೇಕೆದಾಟು ಯೋಜನೆಗೆ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಹೇಳುತ್ತಿದ್ದಾರೆ. ಈಗ ಅವರ ಕುಟುಂಬದಿಂದ ಕಾವೇರಿ ಜಲಾನಯನ ಪ್ರದೇಶದ ಮೂರು ಕ್ಷೇತ್ರಗಳಲ್ಲಿ ಅವರ ಕುಟುಂಬದ ಸದಸ್ಯರು ಸ್ಪರ್ಧೆ ಮಾಡಿದ್ದು, ಜನ ಎಲ್ಲಿ ಅವರನ್ನು ತಿರಸ್ಕರಿಸುತ್ತಾರೋ ಎಂಬ ಭಯದಿಂದ ಈಗ ಮೇಕೆದಾಟು ಯೋಜನೆಗೆ ಪಕ್ಷಾತೀತ ಹೋರಾಟ ಮಾಡಬೇಕು ಎಂದು ಹೇಳುತ್ತಿದ್ದಾರೆ” ಎಂದು ಹೇಳಿದರು.

“ದೇವೇಗೌಡರೇ, ಈ ಜನರು ದಡ್ಡರಲ್ಲ. ಈ ಜನ ನಿಮ್ಮನ್ನು, ಕುಮಾರಣ್ಣನವರನ್ನು ನೋಡಿದ್ದಾರೆ. ಇಂದು ನಮ್ಮ ಸರ್ಕಾರ ಅಧಿಕಾರದಲ್ಲಿದ್ದು, ನಾನು ನೀರಾವರಿ ಹಾಗೂ ಬೆಂಗಳೂರು ಇಲಾಖೆ ಜವಾಬ್ದಾರಿ ತೆಗೆದುಕೊಂಡಿರುವುದೇ ಈ ಯೋಜನೆ ಮಾಡಿ ಇತಿಹಾಸ ಸೃಷ್ಟಿಸಲು. ಈ ಯೋಜನೆಗೆ ಪೂರ್ವಭಾವಿ ಸಿದ್ಧತೆ ಮಾಡಿಕೊಂಡಿದ್ದೇವೆ. ಈ ಯೋಜನೆಯ ಅರಣ್ಯ ಪ್ರದೇಶಕ್ಕೆ ಪರ್ಯಾಯ ಭೂಮಿಯನ್ನು ಗುರುತಿಸಿ ಸರ್ವೇ ಮಾಡಲಾಗುತ್ತಿದೆ. ಈ ಯೋಜನೆ ಜಾರಿಯಾದರೆ ಕಾವೇರಿ ಜಲಾನಯನ ಪ್ರದೇಶದ ಎಲ್ಲಾ ಜನರಿಗೂ ಪ್ರಯೋಜನವಾಗಲಿದೆ” ಎಂದರು.

“ಯಾರು ಬೆಂಬಲ ನೀಡುತ್ತಾರೋ ಇಲ್ಲವೋ ನಾವಂತೂ ಈ ಯೋಜನೆ ಮಾಡೇ ಮಾಡುತ್ತೇವೆ. ನಾವು ತಮಿಳುನಾಡು ಪಾಲಿನ 177 ಟಿಎಂಸಿ ನೀರನ್ನು ನಾವು ಕೊಟ್ಟೆ ಕೊಡುತ್ತೇವೆ. ಅದರಲ್ಲಿ ಯಾವುದೇ ಮೋಸವಾಗುವುದಿಲ್ಲ. ಈ ವಿಚಾರವಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡುತ್ತೇವೆ. ಈ ಹಿಂದೆ 450 ಟಿಎಂಸಿ ನೀರು ಸಮುದ್ರ ಸೇರಿದೆ. ಅದರಲ್ಲಿ 64 ಟಿಎಂಸಿ ನೀರನ್ನು ಹಿಡಿದಿಟ್ಟು ಈ ಭಾಗದ ಜನರ ಬದುಕು ಹಸನ ಮಾಡಲು, ಪ್ರತಿ ಕುಟುಂಬಕ್ಕೆ ಕುಡಿಯಲು ಕಾವೇರಿ ನೀರು ನೀಡಲು ನಾವು ತೀರ್ಮಾನಿಸಿದ್ದೇವೆ” ಎಂದು ಹೇಳಿದರು.

ಕುಮಾರಸ್ವಾಮಿಗೆ ಟಾಟಾ ಬೈ ಬೈ ಹೇಳಿ:

“ದಳದ ಅಭ್ಯರ್ಥಿಯನ್ನು ಬಿಜೆಪಿ ಚಿಹ್ನೆಯಲ್ಲಿ ನಿಲ್ಲಿಸಿದ್ದು, ಅದರ ಬಗ್ಗೆ ನಾನು ಈಗ ಚರ್ಚೆ ಮಾಡುವುದಿಲ್ಲ. ದಳ ಈಗ ಎಲ್ಲಿದೆ? ಕುಮಾರಣ್ಣ ಇದೇ ಜಿಲ್ಲೆಯಿಂದ 2 ಬಾರಿ ಮುಖ್ಯಮಂತ್ರಿಯಾಗಿ ಈಗ ಈ ಜಿಲ್ಲೆ ಬಿಟ್ಟು ಮಂಡ್ಯಕ್ಕೆ ಹೋಗುತ್ತಿದ್ದಾರೆ. ನೀವು ಅವರಿಗೆ ಟಾಟಾ ಗುಡ್ ಬೈ ಹೇಳಬೇಕು. ನೀವು ಯಾರಿಗೆ ಅಧಿಕಾರ ಕೊಟ್ಟಿದ್ದೀರಿ ಅವರು ನಿಮ್ಮನ್ನು ನಂಬದೇ ಪಕ್ಕದ ಕ್ಷೇತ್ರಕ್ಕೆ ಹೋಗಿದ್ದಾರೆ” ಎಂದು ಲೇವಡಿ ಮಾಡಿದರು.

“ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮೇಲೆ ಆ ಪಕ್ಷದ ನಾಯಕರಿಗೆ ನಂಬಿಕೆ ಇಲ್ಲ. ನಿಮ್ಮ ಪರವಾಗಿ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಅಧಿಕಾರ ನಮ್ಮ ಕೈಯಲ್ಲಿದೆ, ನಿಮ್ಮ ರಕ್ಷಣೆ ನಾವು ಮಾಡುತ್ತೇವೆ. ನೀವು ನಮ್ಮ ಜತೆ ಕೈಜೋಡಿಸಿ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದನ್ನು ನೋಡಿದ ಕಮಲ ಉದುರಿಹೋಯಿತು, ತೆನೆಯೊತ್ತ ಮಹಿಳೆ ತೆನೆ ಎಸೆದು ಬಿಜೆಪಿ ಸೇರಿಕೊಂಡಳು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು” ಎಂದರು.

“ಡಿ.ಕೆ. ಸುರೇಶ್ ಅವರು ನಾಲ್ಕನೇ ಬಾರಿ ಸಂಸದರಾಗಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅವರನ್ನು ಅಭ್ಯರ್ಥಿಯಾಗಿ ನಾನಾಗಲಿ, ಶಾಸಕರಾಗಲಿ ಆಯ್ಕೆ ಮಾಡಲಿಲ್ಲ. ಅಂದು ಕುಮಾರಸ್ವಾಮಿ ಅವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಾಗ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರು ಸುರೇಶ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದರು. ಆಗಲೂ ಇದೇ ರೀತಿ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರದಲ್ಲಿತ್ತು. ಬಿಜೆಪಿ ಹಾಗೂ ಜೆಡಿಎಸ್ ಇಬ್ಬರೂ ಸೇರಿ ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದರು. ಅಂದಿನ ಕಾಲದಲ್ಲಿ ಕೇವಲ ಮೂವರು ಶಾಸಕರಿದ್ದರು. ಆಗ ಚುನಾವಣೆ ನಡೆದಾಗ ಈ ಕ್ಷೇತ್ರದ ಮಹಾಜನತೆ ಕಾರ್ಯಕರ್ತನಿಗೆ ಹಾಗೂ ಡಿ.ಕೆ. ಶಿವಕುಮಾರ್ ಅವರಿಗೆ ಶಕ್ತಿ ತುಂಬಲು 1.31 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿದಿರಿ. ಇದು ಡಿ.ಕೆ. ಸುರೇಶ್ ಅವರ ಚುನಾವಣೆಯಲ್ಲ. ಈ ಕ್ಷೇತ್ರದ ಪ್ರತಿಯೊಬ್ಬ ಕಾರ್ಯಕರ್ತ ತಾನೇ ಅಭ್ಯರ್ಥಿ ಎಂದು ಹೋರಾಟ ಮಾಡುತ್ತಿರುವ ಚುನಾವಣೆ” ಎಂದು ಹೇಳಿದರು.

“ಕೇಂದ್ರ ಸರ್ಕಾರ ನಮ್ಮ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿತು. ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಮಾಡಿದಾಗ ರಾಜ್ಯದ ಪರವಾಗಿ ಧ್ವನಿ ಎತ್ತಿದ್ದೇ ಡಿಕೆ ಸುರೇಶ್. ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮಾಡಿದರು. ರಾಜ್ಯದಲ್ಲಿ ಮೋದಿ ಅಲೆ ಇಲ್ಲ, ಗ್ಯಾರಂಟಿ ಅಲೆಯಿದೆ. ಕಾಂಗ್ರೆಸ್ ಅಲೆ, ಸುರೇಶ್ ಅಲೆ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಅವರ ಅಲೆ ಇದೆ. ನೀವು ನನ್ನನ್ನು 1.21 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿದಿರಿ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಮೂವರು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿದ್ದೀರಿ. ರಾಜರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ ಹಾಗೂ ಚನ್ನಪಟ್ಟಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಿಂದ ಅನೇಕ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಹೀಗಾಗಿ ನೀವು ಸುರೇಶ್ ಅವರನ್ನು 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಬೇಕು” ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದರು.

ಇದನ್ನೂ ಓದಿ; ಕಷ್ಟಗಳಿಗೆ ಸ್ಪಂದಿಸುವ ಸುರೇಶ್ ಬೇಕೋ, ವೈಟ್ ಕಾಲರ್ ಮಂಜುನಾಥ್ ಬೇಕೋ ಎನ್ನುವುದನ್ನು ಮತದಾರರು ನಿರ್ಧರಿಸಿದ್ದಾರೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...