ಪಂಜಾಬ್ ಸಿಎಂ ಆಗಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ರವರು ಇಂದು ಪಂಜಾಬ್ ರಾಜ್ಯಪಾಲರಿಗೆ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಮೂರು ಬಾರಿ ಅವಮಾನಿತನಾಗಿದ್ದೆ ಎಂದು ಅವರು ಈ ವೇಳೆ ಪ್ರತಿಕ್ರಿಯಿಸಿದ್ದಾರೆ. ಅವರ ವಿರೋಧದ ನಡುವೆಯೂ ನವಜ್ಯೋತ್ ಸಿಂಗ್ ಸಿಧುವನ್ನು ರಾಜ್ಯ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಮಾಡಿದ್ದು ಅವರಿಗೆ ಇರಿಸು ಮುರಿಸು ತಂದಿತ್ತು. ಅಸಮರ್ಥನಾದ ನವಜ್ಯೋತ್ ಸಿಂಗ್ ಸಿಧುವನ್ನು ಮುಖ್ಯಮಂತ್ರಿ ಮಾಡುವುದನ್ನು ಒಪ್ಪುವುದಿಲ್ಲ ಎಂದು ರಾಜೀನಾಮೆ ಬಳಿಕ ಅಮರಿಂದರ್ ಸಿಂಗ್ ತಿಳಿಸಿದ್ದಾರೆ.
ಪಂಜಾಬ್ನ ಸುಮಾರು 50 ಶಾಸಕರು ಮುಖ್ಯಮಂತ್ರಿ ಬದಲಾವಣೆ ಮಾಡಬೇಕೆಂದು ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷರಾದ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ. ಹಾಗಾಗಿ ನಿನ್ನೆ ರಾತ್ರಿಯೇ ಕಾಂಗ್ರೆಸ್ ಹೈಕಮಾಂಡ್ ಅಮರಿಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿತ್ತು ಎಂದು ಮೂಲಗಳು ತಿಳಿಸಿವೆ.
ಇನ್ನು ಅಮರಿಂದರ್ರವರಿಂದ ತೆರವಾದ ಸಿಎಂ ಸ್ಥಾನಕ್ಕೆ ಸದ್ಯಕ್ಕೆ ಮೂವರು ನಾಯಕರ ಹೆಸರುಗಳು ಚಾಲ್ತಿಯಲ್ಲಿವೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಪಂಜಾಬ್ ಕಾಂಗ್ರೆಸ್ನ ಮಾಜಿ ಮುಖ್ಯಸ್ಥರುಗಳಾದ ಸುನೀಲ್ ಜಖರ್ ಮತ್ತು ಪ್ರತಾಪ್ ಸಿಂಗ್ ಬಾಜ್ವಾರೊಂದಿಗೆ ಬಿಯಾಂತ್ ಸಿಂಗ್ ಅವರ ಮೊಮ್ಮಗ ರವಣೀತ್ ಸಿಂಗ್ ಬಿಟ್ಟು ಕೂಡ ಸ್ಪರ್ಧೆಯಲ್ಲಿದ್ದಾರೆ ಎನ್ನಲಾಗಿದೆ.
ನಿರ್ಣಾಯಕ ನಿರ್ಧಾರ ಕೈಗೊಂಡು ಮುಖ್ಯಮಂತ್ರಿ ಬದಲಾವಣೆ ಮಾಡಿ ರಾಜ್ಯದಲ್ಲಿ ಪಕ್ಷವನ್ನು ಪುನರ್ ಸಂಘಟಿಸಿದ್ದಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರಿಗೆ ಸಿಎಂ ರೇಸ್ನಲ್ಲಿ ಸುನೀಲ್ ಜಖರ್ ಅಭಿನಂದನೆ ಸಲ್ಲಿಸಿದ್ದಾರೆ.
ಇಂದು ಸಂಜೆ 5 ಗಂಟೆಯಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಅಲ್ಲಿಯ ಮುಂದಿನ ಸಿಎಂ ಹೆಸರು ಪ್ರಸ್ತಾಪವಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ!