ಬಿಜೆಪಿಗೆ ಹಿಂದುಳಿದ ವರ್ಗದ ಸಮುದಾಯದ ಬಗ್ಗೆಅಷ್ಟೊಂದು ಕಾಳಜಿ ಇದ್ದರೆ ಜಾತಿ ಗಣತಿಯನ್ನು ಯಾಕೆ ನಡೆಸುತ್ತಿಲ್ಲ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.
ತೆಲಂಗಾಣ ರಾಜ್ಯದಲ್ಲಿ ನ.30ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ತೆಲಂಗಾಣದಲ್ಲಿ ಹಿಂದುಳಿದ ವರ್ಗದ ನಾಯಕನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂರ್ಯಪೇಟ್ನಲ್ಲಿ ನಡೆದ ರ್ಯಾಲಿಯಲ್ಲಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಅಸಾದುದ್ದೀನ್ ಓವೈಸಿ ಬಿಜೆಪಿಗೆ ಹಿಂದುಳಿದ ವರ್ಗದ ಜನರ ಬಗ್ಗೆ ಕಾಳಜಿ ಅಷ್ಟೊಂದು ಇದ್ದರೆ ಯಾಕೆ ಜಾತಿಗಣತಿಯನ್ನು ನಡೆಸುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
ಶುಕ್ರವಾರ ರಾತ್ರಿ ಜಹೀರಾಬಾದ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಓವೈಸಿ, ಬಿಜೆಪಿ ಮತ್ತು ಕಾಂಗ್ರೆಸ್ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಯಶಸ್ವಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಅಮಿತ್ ಶಾ ಅವರೇ, ನಾನು ಜವಾಬ್ದಾರಿಯಿಂದ ಹೇಳುತ್ತಿದ್ದೇನೆ. ನೀವು ಮತ್ತು ಕಾಂಗ್ರೆಸ್ ಅವಳಿಗಳು. ತೆಲಂಗಾಣದಲ್ಲಿ ನಿಮ್ಮದು ಏನೂ ನಡೆಯುವುದಿಲ್ಲ. ಈ ಚುನಾವಣೆ ತೆಲಂಗಾಣದಲ್ಲಿ ನಿಮಗೆ ವಿದಾಯವನ್ನು ಹೇಳಲಿದೆ ಎಂದು ಹೇಳಿದ್ದಾರೆ.
ಹಿಂದುಳಿದ ವರ್ಗದ ಬಗ್ಗೆ ನಿಮಗೆ ಕಾಳಜಿ ಇದ್ದರೆ, ನೀವು ಯಾಕೆ ಜನಗಣತಿ ನಡೆಸುವುದಿಲ್ಲ ಎಂದು ನಾನು ಅಮಿತ್ ಶಾ ಅವರನ್ನು ಕೇಳಲು ಬಯಸುತ್ತೇನೆ. ಒಬಿಸಿ ಮತ್ತು ಮುಸ್ಲಿಂ ಮಹಿಳೆಯರಿಗೆ ಮೀಸಲಾತಿ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಬೆಂಬಲಿಸಲಿಲ್ಲ ಎಂದು ಹೇಳಿದ್ದಾರೆ.
ಜನರು ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳ ಕೈ ಹಿಡಿಯಲಿದ್ದಾರೆ. ರಾಷ್ಟ್ರೀಯ ಪಕ್ಷಗಳು ಅಧಿಕಾರಕ್ಕೆ ಬಂದರೆ ಜನರಿಗೆ ಸಮಸ್ಯೆ ಪರಿಹರಿಸಲು ಯಾರೂ ಇರುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನು ಓದಿ: ದಲಿತ ಯುವಕನಿಗೆ ಜಾತಿ ನಿಂದನೆ, ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ