ತನ್ನದು ನೋಂದಾಯಿತ ಸಂಸ್ಥೆಯಲ್ಲ ಎಂದು ಆರ್ಎಸ್ಎಸ್ ಲಿಖಿತ ರೂಪದಲ್ಲಿ ಅಧಿಕೃತವಾಗಿ ತಿಳಿಸಿದೆ. ನೋಂದಾಯಿಸದ ಸಂಸ್ಥೆಯೊಂದರ ಮುಖ್ಯಸ್ಥರು ಪ್ರಧಾನಿ ಮತ್ತು ಗೃಹ ಸಚಿವರಿಗೆ ಸಮಾನವಾಗಿ ಅಡ್ವಾನ್ಸಡ್ ಸೆಕ್ಯುರಿಟಿ ಲಿಯಾಸನ್ ಪ್ರೋಟೋಕಾಲ್ ಏಕೆ ಪಡೆಯುತ್ತಾರೆ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ತೆರಿಗೆ ಪಾವತಿದಾರರ ಹಣವನ್ನು ಆರ್ಎಸ್ಎಸ್ ಮುಖ್ಯಸ್ಥರ ಮೇಲೆ ಏಕೆ ಖರ್ಚು ಮಾಡಲಾಗುತ್ತಿದೆ? ಎಂದು ಕೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, ಆರ್ಎಸ್ಎಸ್ ನಿಜವಾಗಿಯೂ ನಿಸ್ವಾರ್ಥವಾಗಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದರೆ, ಪಾರದರ್ಶಕವಾಗಿ ಮತ್ತು ಕಾನೂನುಬದ್ಧವಾಗಿ ಕೆಲಸ ಮಾಡುವ ಲಕ್ಷಾಂತರ ಎನ್ಜಿಒಗಳಂತೆ ಏಕೆ ನೋಂದಾಯಿಸಬಾರದು? ಅವರ ದೇಣಿಗೆಗಳು ಎಲ್ಲಿಂದ ಬರುತ್ತವೆ ಮತ್ತು ದಾನಿಗಳು ಯಾರು? ಎಂಬ ಪ್ರಶ್ನೆ ಮುಂದಿಟ್ಟಿದ್ದಾರೆ.
ಪೂರ್ಣ ಸಮಯದ ಪ್ರಚಾರಕರಿಗೆ ಯಾರು ಹಣ ಪಾವತಿಸುತ್ತಾರೆ ಮತ್ತು ಸಂಸ್ಥೆಯ ದೈನಂದಿನ ಕಾರ್ಯಾಚರಣೆಗಳು ಹಾಗೂ “ಸಾಮಾಜಿಕ” ಅಭಿಯಾನಗಳಿಗೆ ಯಾರು ಹಣಕಾಸು ಒದಗಿಸುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
ಆರ್ಎಸ್ಎಸ್ ಅನ್ನು ನೋಂದಾಯಿಸದಿದ್ದರೆ ಮತ್ತು ಹೊಣೆಗಾರಿಕೆ ಹೊಂದಿಲ್ಲದ್ದಾಗಿದ್ದರೆ, ದೇಶಕ್ಕೆ ಸೇವೆ ಸಲ್ಲಿಸುವುದಾಗಿ ಹೇಳಿಕೊಳ್ಳುತ್ತಾ ಪರಿಶೋಧನೆ ಹಾಗೂ ತೆರಿಗೆಗಳನ್ನು ವಂಚಿಸುತ್ತಿಲ್ಲವೇ? ಇದು ಅವರನ್ನು ಹೇಗೆ ದೇಶ ಭಕ್ತರನ್ನಾಗಿಸುತ್ತದೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ ಎತ್ತಿದ್ದಾರೆ.


