Homeಮುಖಪುಟಆಧಾರ್ ಜೋಡಣೆಯ ಅವಾಂತರಗಳು

ಆಧಾರ್ ಜೋಡಣೆಯ ಅವಾಂತರಗಳು

- Advertisement -
- Advertisement -

ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಅಗತ್ಯವೇ?

ವಿರೋಧ ಪಕ್ಷಗಳ ವಿರೋಧದ ನಡುವೆಯೇ ಉಭಯ ಸದನಗಳಲ್ಲಿ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ 2021 ಅಂಗೀಕರಿಸಲಾಯಿತು. ಈ ಮಸೂದೆಯ ಮೂಲಕ ಪ್ರಜಾಪ್ರತಿನಿಧಿ ಕಾಯಿದೆ 1950 ಮತ್ತು 1951ರ ವಿವಿಧ ವಿಭಾಗಗಳಿಗೆ ತಿದ್ದುಪಡಿ ಮಾಡಲು ಸರ್ಕಾರ ಮುಂದಾಗಿದೆ. ಮತದಾರರ ಗುರುತಿನ ಚೀಟಿಯನ್ನು ಆಧಾರ್ ನಂಬರ್‌ಗೆ ಜೋಡಿಸುವ ಪ್ರಸ್ತಾಪವನ್ನೂ ಇಲ್ಲಿ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಕಾನೂನು ಸಚಿವ ಕಿರಣ್ ರಿಜಿಜು ಅವರು ಮಸೂದೆಯನ್ನು ಮಂಡಿಸುತ್ತಾ, “ಚುನಾವಣೆ ವ್ಯವಸ್ಥೆಯ ’ಶುದ್ಧೀಕರಣ’ಕ್ಕೆ ಸರ್ಕಾರ ಮುಂದಾಗಿದೆ” ಎಂದಿದ್ದಾರೆ.

ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಒಬ್ಬನೇ ವ್ಯಕ್ತಿಯು ವೋಟರ್ ಐಡಿ ಹೊಂದುವುದನ್ನು ಈ ಮಸೂದೆ ತಡೆಯುತ್ತದೆ ಎಂಬುದು ಸರ್ಕಾರದ ವಾದ. “ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಯಾವುದೇ ಅರ್ಜಿಯನ್ನು ನಿರಾಕರಿಸುವಂತಿಲ್ಲ. ಆಧಾರ್ ನೀಡದ ಕಾರಣಕ್ಕಾಗಿ ಮತದಾರರ ಪಟ್ಟಿಯಲ್ಲಿನ ಯಾವುದೇ ನಮೂದುಗಳನ್ನು ಅಳಿಸಲಾಗುವುದಿಲ್ಲ. ಆಧಾರ್ ನೀಡಲು ವಿಫಲರಾದಂತಹ ಜನರು ಸೂಚಿಸಿರುವ ಇತರ ದಾಖಲೆಗಳನ್ನು ಒದಗಿಸಲು ಅನುಮತಿಸಲಾಗುವುದು” ಎಂದು ಸಚಿವರು ತಿಳಿಸಿದ್ದಾರೆ.

ಕಿರಣ್ ರಿಜಿಜು

ಆಧಾರ್ ಜೊತೆಗೆ ವೋಟರ್ ಐಡಿಯನ್ನು ಲಿಂಕ್ ಮಾಡುವುದು ಅಪಾಯಕಾರಿ ಎಂಬುದು ತಜ್ಞರ ಅಭಿಪ್ರಾಯ. ಈ ಹಿಂದೆಯೂ ಆಧಾರ್ ಜೊತೆಗೆ ಬೇರೆ ದಾಖಲೆಗಳನ್ನು ಜೋಡಣೆ ಮಾಡಿದ್ದರಿಂದ ಹಲವು ಲೋಪಗಳಾಗಿರುವುದನ್ನು ತಜ್ಞರು ಗುರುತಿಸಿದ್ದಾರೆ. ವಿರೋಧ ಪಕ್ಷಗಳೂ ಇದೇ ಅಭಿಪ್ರಾಯ ತಾಳಿವೆ. ಇದು ಪುಟ್ಟಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ (ಗೌಪ್ಯತೆಯ ಹಕ್ಕು) ಆಧಾರ್ ಬಗ್ಗೆ ಸುಪ್ರೀಂ ನೀಡಿದ್ದ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅಭಿಪ್ರಾಯಪಟ್ಟಿದ್ದಾರೆ. ಆಧಾರ್ ಬಳಸಿ ಮತದಾರರ ಪಟ್ಟಿಯನ್ನು ಪರಿಶೀಲಿಸುವ ಕೆಲಸಗಳು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ನಡೆದಾಗ ಮತದಾರರಿಗೆ ಆಗಿದ್ದ ಅನ್ಯಾಯವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿತ್ತು. ಈ ಕಾರ್ಯಕ್ರಮವನ್ನು ಕೋರ್ಟ್ ರದ್ದುಗೊಳಿಸಿತ್ತು ಕೂಡ.

’ನ್ಯಾಯಪಥ’ ಪತ್ರಿಕೆಯೊಂದಿಗೆ ಮಾತನಾಡಿದ ಬೆಂಗಳೂರಿನ ಅಜೀಂಪ್ರೇಮ್‌ಜೀ ಯೂನಿವರ್ಸಿಟಿಯ ಪ್ರಾಧ್ಯಾಪಕರಾದ ರಾಜೇಂದ್ರನ್ ನಾರಾಯಣ್ ಅವರು ತಮ್ಮ ಕ್ಷೇತ್ರ ಕಾರ್ಯದ ಅನುಭವಗಳನ್ನು ಹಂಚಿಕೊಳ್ಳುತ್ತಾ ಆಧಾರ್ ಜೋಡಣೆಯಿಂದಾಗಿ ಈ ಹಿಂದೆ ಆಗಿರುವ ಅವಾಂತರಗಳನ್ನು ಬಿಚ್ಚಿಟ್ಟರು.

“ನರೇಗಾ (ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಜಾಬ್ ಕಾರ್ಡ್ ಜೊತೆಗೆ ಆಧಾರ್ ಲಿಂಕ್ ಮಾಡಲಾಯಿತು. ಆಧಾರ್ ಕಾರ್ಡ್ ಸಂಖ್ಯೆಯನ್ನು ಬ್ಯಾಂಕ್ ಖಾತೆ ಹಾಗೂ ಜಾಬ್ ಕಾರ್ಡ್ ಜೊತೆಗೆ ಜನರು ಜೋಡಣೆ ಮಾಡಬೇಕಾಯಿತು. ಮೊದಲು ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿರಲಿಲ್ಲ. 2016-2017ಯಿಂದ ಕಡ್ಡಾಯ ಮಾಡಲಾಯಿತು. ಆಧಾರ್ ನೋಂದಣಿಯನ್ನು ಸರ್ಕಾರ ಉತ್ತೇಜಿಸಿತು. ನೀವು ಆಧಾರ್ ಜೊತೆಗೆ ಜಾಬ್‌ಕಾರ್ಡ್ ಲಿಂಕ್ ಮಾಡದಿದ್ದರೆ ನಿಮಗೆ ನರೇಗಾ ಕೆಲಸಗಳನ್ನು ಕೊಡುವುದಿಲ್ಲ ಎನ್ನುವಂತಹ ಬೆಳವಣಿಗೆಗಳು ಆದವು. ನಕಲಿ ಜಾಬ್ ಕಾರ್ಡ್‌ಗಳನ್ನು ತಡೆಯುವುದು ಇದರ ಉದ್ದೇಶ ಎಂದು ಹೇಳಲಾಯಿತು. ಇದರ ಪರಿಣಾಮ ನರೇಗಾದಲ್ಲಿ ತೊಡಗಿಸಿಕೊಂಡಿದ್ದ ಅನೇಕ ಕೂಲಿಕಾರರ ಜಾಬ್‌ಕಾರ್ಡ್ ಡಿಲೀಟ್ ಆಯಿತು” ಎನ್ನುತ್ತಾರೆ ರಾಜೇಂದ್ರನ್.

ರಾಜೇಂದ್ರನ್ ನಾರಾಯಣ್

ಮುಂದುವರಿದು ವಿವರಿಸುವ ಅವರು, “ಗ್ರಾಮೀಣ ಮಟ್ಟದ ಅಧಿಕಾರಿಗಳ ಮೇಲೆ ಒತ್ತಡ ಸೃಷ್ಟಿಸಲಾಯಿತು. ಕೆಲವೆಡೆಗಳಲ್ಲಿ, ಒಂದೇ ಮನೆಯ ಐವರಲ್ಲಿ ಇಬ್ಬರ ಜಾಬ್‌ಕಾರ್ಡ್ ಆಧಾರ್ ಲಿಂಕ್ ಆಗಿದ್ದು, ಇನ್ನು ಮೂವರ ಜಾಬ್‌ಕಾರ್ಡ್ ಡಿಲೀಟ್ ಮಾಡುವ ಕೆಲಸ ಆಯಿತು. ಆ ಮೂಲಕ ಶೇ.100 ಆಧಾರ್ ಲಿಂಕ್ ಕಾರ್ಯಾಚರಣೆ ಎಂದು ತೋರಿಸಲಾಯಿತು. ಮತ್ತೊಂದು ಸಮಸ್ಯೆ ತಲೆದೋರಿತು. ಕೇಂದ್ರ ಸರ್ಕಾರದಿಂದ ನೇರವಾಗಿ ಕೂಲಿಕಾರರ ಬ್ಯಾಂಕ್ ಖಾತೆಗೆ ಹಣ ಜಮೆ ಆಗುವುದರಲ್ಲಿ ತೊಡಕಾಯಿತು. ಆಧಾರ್ ಆಧಾರಿತ ಪೇಮೆಂಟ್, ಅಕೌಂಟ್ ಆಧಾರಿತ ಪೇಮೆಂಟ್- ಈ ಎರಡು ವಿಧದಲ್ಲಿ ಹಣ ಜಮೆ ಮಾಡಬಹುದು. ಅಕೌಂಟ್ ಆಧಾರಿತ ಜಮೆಯಲ್ಲಿ ಬ್ಯಾಂಕ್‌ನ ಐಎಫ್‌ಎಸ್‌ಸಿ ಕೋಡ್ ಹಾಗೂ ಬ್ಯಾಂಕ್ ಖಾತೆಯ ವಿವರ ಇದ್ದರೆ ಆಗುತ್ತದೆ. ಆಧಾರ್ ಆಧಾರಿತ ಖಾತೆಯಲ್ಲಿ ಆಧಾರ್ ನಂಬರ್‌ಅನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಬೇಕಾಗಿರುತ್ತದೆ. ಕೇಂದ್ರ ಸರ್ಕಾರ ಏನು ಮಾಡಿತ್ತೆಂದರೆ, ಆಧಾರ್ ನಂಬರ್ ಜೊತೆಗೆ ಲಿಂಕ್ ಇರುವ ಫೈನಾನ್ಸಿಯಲ್ ಅಡ್ರಸ್‌ಗೆ ಸರ್ಕಾರ ಹಣವನ್ನು ಜಮೆ ಮಾಡಿತು. ಇದರಿಂದ ಫಲಾನುಭವಿಗಳು ಗೊಂದಲಕ್ಕೊಳಗಾದರು. ನಿಗದಿತ ಖಾತೆಗೆ ಹಣ ಬಾರದೆ ಕಂಗಾಲಾದರು” ಎನ್ನುತ್ತಾರೆ.

“ನೀವು ಮೂರು ಬ್ಯಾಂಕ್ ಅಕೌಂಟ್‌ಗಳನ್ನು ಹೊಂದಿದ್ದರೆ, ಎಲ್ಲ ಬ್ಯಾಂಕ್ ಅಕೌಂಟ್‌ಗಳಿಗೂ ಆಧಾರ್ ಲಿಂಕ್ ಮಾಡಿರುತ್ತೀರಿ. ಸರ್ಕಾರ ಹಣ ಜಮೆ ಮಾಡಿದಾಗ ಕೊನೆಯದಾಗಿ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಅಕೌಂಟ್‌ಗೆ ಹೋಗುತ್ತಿತ್ತು. ನರೇಗಾ ಫಲಾನುಭವಿಯೊಬ್ಬ ತಮ್ಮ ಹಣಕ್ಕಾಗಿ ಎಸ್‌ಬಿಐ ಖಾತೆಯನ್ನು ನೀಡಿರುತ್ತಾನೆ ಎಂದುಕೊಳ್ಳೋಣ. ಆತ ಮತ್ತೊಂದು ಖಾತೆಯನ್ನು ಸೆಂಟ್ರಲ್ ಬ್ಯಾಂಕ್‌ನಲ್ಲಿ ಹೊಂದಿದ್ದು ಅದಕ್ಕೂ ಆಧಾರ್ ಲಿಂಕ್ ಮಾಡಿದ್ದರೆ ನರೇಗಾ ಹಣ ಎಸ್‌ಬಿಐ ಖಾತೆಗೆ ಬರುತ್ತಿರಲಿಲ್ಲ. ಸಾಮಾನ್ಯವಾಗಿ ನರೇಗ ಹಣ ಪಡಯಲು ಬಳಸುವ ಅಧಿಕೃತ ಖಾತೆಗೆ ಹಣ ಬಾರದೆ ಎಲ್ಲಿ ಹೋಯಿತು ಎಂದು ಫಲಾನುಭವಿಗಳು ಚಿಂತಿಸುವಂತಾಯಿತು. ಈ ಸಮಸ್ಯೆಯನ್ನು ಬಗೆಹರಿಸುವುದು ಕಷ್ಟವಾಯಿತು. ಆಧಾರ್ ಲಿಂಕ್‌ನಿಂದಾಗಿರುವ ಸಮಸ್ಯೆಗಳನ್ನು ನಾವು ಬಹಳ ಹತ್ತಿರದಿಂದ ನೋಡಿದ್ದೇವೆ. ವೋಟರ್ ಐಡಿ ಲಿಂಕ್ ಕಡ್ಡಾಯವೇನೂ ಅಲ್ಲ ಎನ್ನುತ್ತಾರೆ. ಒಮ್ಮೆ ಜಾರಿಗೆ ಬಂದ ಮೇಲೆ ಜನರು ಇದನ್ನು ಕಡ್ಡಾಯವೆಂದೇ ಭಾವಿಸುತ್ತಾರೆ. ಮುಂದೆ ಸರ್ಕಾರವೇ ಅಧಿಕೃತವಾಗಿ ಕಡ್ಡಾಯ ಮಾಡಬಹುದು. ನರೇಗಾ ಕಾರ್ಡ್ ಡಿಲೀಟ್ ಆದಂತೆಯೇ ವೋಟರ್ ಕಾರ್ಡ್ ಕೂಡ ಡಿಲೀಟ್ ಆಗಬಹುದು. ಆಧಾರ್ ಕಾರ್ಡ್‌ನಲ್ಲಿರುವ ಹೆಸರು ವೋಟರ್ ಐಡಿಗೆ ಹೋಲಿಕೆಯಾಗದಿದ್ದರೆ ಮತದಾರರ ಪಟ್ಟಿಯಿಂದ ತೆಗೆದುಹಾಕುವ ಸಾಧ್ಯತೆಯೇ ಹೆಚ್ಚಿದೆ” ಎಂದು ಆತಂಕ ವ್ಯಕ್ತಪಡಿಸುತ್ತಾರೆ ರಾಜೇಂದ್ರನ್.

ಆಧಾರ್ ಪ್ಯಾನ್ ಲಿಂಕಿಂಗ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದವರಲ್ಲಿ ಒಬ್ಬರಾದ ಮತ್ತು ಡೇಟಾಮೀಟ್ ಸಂಸ್ಥಾಪಕರಾದ ತೇಜೇಶ್ ಜಿ ಎನ್ ಅವರು ತಮ್ಮ ಆತಂಕಗಳನ್ನು ’ನ್ಯಾಯಪಥ’ದೊಂದಿಗೆ ಹಂಚಿಕೊಂಡರು. “ಎಲ್ಲರನ್ನೂ ಮತದಾನದಲ್ಲಿ ಒಳಗೊಳ್ಳಬೇಕು ಎಂಬುದು ನಮ್ಮ ಗುರಿಯಾಗಿದೆ. ಚುನಾವಣೆ ಬಂದಾಗಲೆಲ್ಲ ಆದಷ್ಟು ವೋಟ್ ಮಾಡಿ ಎಂದು ಜಾಗೃತಿ ಮೂಡಿಸುತ್ತೇವೆ. ಅಮೆರಿಕದಂತಹ
ದೇಶದಲ್ಲಿ ಪರಿಸ್ಥಿತಿ ಬೇರೆ ರೀತಿ ಇದೆ. ಮತದಾರರೆಂದು ಸಾಬೀತು ಮಾಡದೆ ಅಮೆರಿಕದಲ್ಲಿ ಮತ ಚಲಾಯಿಸಲು ಸಾಧ್ಯವಾಗಲ್ಲ. ಅಮೆರಿಕದ್ದು ರಿಜೆಕ್ಷನ್ ಪ್ರೊಸೆಸ್ ಆದರೆ ನಮ್ಮದು ಸೆಲೆಕ್ಷನ್ ಪ್ರೊಸೆಸ್. ಮನೆಯಿಂದ ಹೊರಬಂದು ಮತ ಚಲಾಯಿಸಬೇಕು ಎಂಬುದೇ ನಮ್ಮ ಉದ್ದೇಶವಾಗಿದೆ. ವೋಟರ್ ಲಿಸ್ಟ್‌ನಲ್ಲಿ ಹೆಸರು ಇಲ್ಲದಿದ್ದರೆ ಅದನ್ನು ಸಮಸ್ಯೆ ಎಂದು ನಾವು ಭಾವಿಸುತ್ತೇವೆ. ಮತದಾನ ಮಾಡಿದವರಿಗೆ ಶಾಯಿಯನ್ನು ಹಾಕುತ್ತಾರೆ. ಅದು ಸುಲಭಕ್ಕೆ ಅಳಿಸಿ ಹೋಗುವುದಿಲ್ಲ. ಹೀಗಾಗಿ ಡಬಲ್ ವೋಟಿಂಗ್ ಸಂಖ್ಯೆ ತುಂಬಾ ಕಡಿಮೆ ಇದೆ. ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡುವುದರಿಂದ ಮತದಾನದಿಂದ ಹೊರಗುಳಿಯುವವರ ಸಂಖ್ಯೆ ಹೆಚ್ಚಾಗುತ್ತದೆಯೇ ಹೊರತು ಕಡಿಮೆಯಾಗುವುದಿಲ್ಲ. ವೋಟರ್ ಲಿಂಕ್ ಜೊತೆಗೆ ರೇಷನ್ ಕಾರ್ಡ್ ಲಿಂಕ್ ಮಾಡಿದ್ದರಿಂದ ರೇಷನ್ ತೆಗೆದುಕೊಳ್ಳಲು ಆಗದೆ ಒದ್ದಾಡಿದವರನ್ನು ನೋಡಿದ್ದೇವೆ” ಎನ್ನುತ್ತಾರೆ ತೇಜೇಶ್.


“ವೋಟರ್ ಐಡಿ ಜೊತೆಗೆ ಆಧಾರ್ ಜೋಡಣೆಯು ಖಾಸಗಿತನದ ಮೇಲೆ ದುಷ್ಪರಿಣಾಮ ಬೀರುತ್ತದೆ. ಯಾರುಯಾರಿಗೆ ವೋಟ್ ಹಾಕುತ್ತಿದ್ದರು ಎಂಬುದು ಈವರೆಗೆ ಗೌಪ್ಯವಾಗಿರುತ್ತಿತ್ತು. ಸದ್ಯಕ್ಕೆ ಮತಗಟ್ಟೆ ಆಧಾರದಲ್ಲಿ ಮಾತ್ರ ಯಾರಿಗೆ ಎಷ್ಟು ಮತ ಹೋಗಿದೆ ಎಂದು ಊಹಿಸಬಹುದಿತ್ತು. ಒಂದು ಓಣಿಯಲ್ಲಿರುವ ಜನ ಯಾವ ಪಕ್ಷಕ್ಕೆ ವೋಟು ಹಾಕಿದ್ದಾರೆಂದು ಹೇಳಬಹುದಿತ್ತು. ಈ ಓಣಿಯಲ್ಲಿರುವವರು ನಮಗೆ ವೋಟ್ ಹಾಕಿಲ್ಲ, ನಾನೇಕೆ ಸಹಾಯ ಮಾಡಲಿ ಎಂದು ಕೇಳುವುದನ್ನು ನಾವು ನೋಡಿದ್ದೇವೆ. ಈ ರೀತಿಯ ರಾಜಕಾರಣ ಮತಗಟ್ಟೆ ಮಟ್ಟಕ್ಕೆ, ಗ್ರಾಮ ಪಂಚಾಯಿತಿ ಮಟ್ಟಕ್ಕೆ ಸೀಮಿತವಾಗಿತ್ತು. ಆದರೆ
ಆಧಾರ್ ಲಿಂಕ್ ಮಾಡಿದರೆ ಯಾವ ಆಧಾರ್ ಐಡಿ ಯಾರಿಗೆ ವೋಟ್ ಹಾಕಿದೆ ಎಂಬುದನ್ನು ರಾಷ್ಟ್ರಮಟ್ಟದಲ್ಲಿ ತಿಳಿಯಬಹುದಾದ ಸಮಸ್ಯೆ ಇದೆ. ಇದರಿಂದ ಮತದಾನದ ಗೌಪ್ಯತೆ ಹಾಳಾಗುತ್ತದೆ. ಪಕ್ಷಪಾತ ಧೋರಣೆ ಮೊದಲು ಸಣ್ಣ ಘಟಕಗಳ ಮಟ್ಟದಲ್ಲಿತ್ತು. ಈಗ ರಾಷ್ಟ್ರಮಟ್ಟಕ್ಕೆ ಹೋಗುತ್ತದೆ. ವೋಟರ್ ಐಡಿ ಜೊತೆಗೆ ಆಧಾರ್ ಇದ್ದರೆ ಫೋನ್ ನಂಬರ್ ಕೂಡ ಲಭ್ಯವಾಗುತ್ತದೆ. ನಂಬರ್ ಲೀಕ್ ಆಗಿ ಮತದಾರರಿಗೆ ಕಾಲ್ ಮಾಡಿರುವ ಘಟನೆ ಪಾಂಡಿಚೆರಿಯಲ್ಲಿ ನಡೆದಿರುವುದು ಈಗ ಕೋರ್ಟ್ ಮೆಟ್ಟಿಲೇರಿದೆ” ಎಂದು ವಿವರಿಸುತ್ತಾರೆ ತೇಜೇಶ್.

ಐಟಿ ಫಾರ್ ಚೇಂಜ್‌ನ ಕೆ.ಗುರು ಅವರು ನಮ್ಮೊಂದಿಗೆ ಮಾತನಾಡಿ ಆಧಾರ್ ಕಾರ್ಡ್‌ನ ಮಿತಿಯನ್ನು ವಿವರಿಸಿದರು. “ಪೌರತ್ವಕ್ಕೆ ಆಧಾರ್ ಕಾರ್ಡ್ ಆಧಾರವಲ್ಲ. ನೀವು ಇಲ್ಲಿ ವಾಸವಿದ್ದರೆ ಆಧಾರ್ ಕಾರ್ಡ್ ಸಿಗುತ್ತದೆ. ಮತದಾನ ಕೇವಲ ಪೌರತ್ವಕ್ಕೆ ಮಾತ್ರ ಸಿಗಬೇಕು. ಆಧಾರ್ ಮೂಲಕ ಪೌರರಲ್ಲದವರಿಗೂ ಮತದಾನದ ಹಕ್ಕು ಸಿಗುವ ಸಾಧ್ಯತೆ ಇದೆ. ಮತ್ತೊಂದು ಅಪಾಯವೆಂದರೆ ಡಿಜಿಟಲ್ ಜಗತ್ತಿನಲ್ಲಿ ನಾವು ಹೀಗೆ ಲಿಂಕ್ ಮಾಡುತ್ತಾ ಹೋದಷ್ಟು ನಮ್ಮ ಪೌರತ್ವದ ಸೆಕ್ಯುರಿಟಿ ಕಡಿಮೆಯಾಗುತ್ತದೆ. ನಮ್ಮ ವಿವರಗಳು ಗೌಪ್ಯವಾಗಿ ಇರಲು ಸಾಧ್ಯವಾಗದು” ಎನ್ನುತ್ತಾರೆ.

ಆಧಾರ್ ಜೋಡಣೆಯ ವಿಚಾರವಾಗಿ ತಜ್ಞರು ಹೇಳುವ ಮಾತುಗಳನ್ನು ಕೇಳಿದರೆ ಇದರಿಂದ ಉಂಟಾಗಬಹುದಾದ ಅಪಾಯಗಳು, ಸರ್ಕಾರ ಪ್ರತಿಪಾದಿಸುತ್ತಿರುವ ಉಪಯೋಗಗಳನ್ನು
ಮೀರಿಸುವಂತಿವೆ ಎಂಬುದು ಸ್ಪಷ್ಟವಾಗುತ್ತದೆ. ಆದುದರಿಂದ ಇದರ ಬಗ್ಗೆ ವಿಸ್ತೃತ ಸಾರ್ವಜನಿಕ ಚರ್ಚೆಯ ಅಗತ್ಯವಿದೆ.


ಇದನ್ನೂ ಓದಿ: Explainer: ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಮಸೂದೆಯ ಸಾಧಕ-ಬಾಧಕಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...