Homeಕರ್ನಾಟಕಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

- Advertisement -
- Advertisement -

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ ಚರ್ಚೆಗೆ ತೆರೆ ಎಳೆಯಲಾಗಿದೆ.

ಡಿ.ಕೆ ಶಿವಕುಮಾರ್ ಅವರ ಹೊಸ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿ (ಬಲಗೈ) ಸಮುದಾಯದ ಡಾ.ಜಿ ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ. ಸಚಿವರಾಗಿ ಲಿಂಗಾಯತ ಸಮುದಾಯದ ಎಂ.ಬಿ ಪಾಟೀಲ್, ಕ್ರಿಶ್ಚಿಯನ್ ಸಮುದಾಯದ ಕೆ.ಜೆ.ಜಾರ್ಜ್, ಪರಿಶಿಷ್ಟ ಜಾತಿ (ಎಡಗೈ) ಸಮುದಾಯದ ಕೆ.ಎಚ್.ಮುನಿಯಪ್ಪ, ರೆಡ್ಡಿ ಸಮುದಾಯದ ರಾಮಲಿಂಗಾರೆಡ್ಡಿ, ಪರಿಶಿಷ್ಟ ಪಂಗಡದ ಸತೀಶ್ ಜಾರಕಿಹೊಳಿ, ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಯು.ಟಿ ಖಾದರ್, ಒಕ್ಕಲಿಗ ಸಮುದಾಯದ ಕೃಷ್ಣಬೈರೇಗೌಡ, ಪರಿಶಿಷ್ಟ ಜಾತಿ (ಬಲಗೈ) ಸಮುದಾಯದ ಪ್ರಿಯಾಂಕ್ ಖರ್ಗೆ, ಕುರುಬ ಸಮುದಾಯದ ಯತೀಂದ್ರ ಸಿದ್ದರಾಮಯ್ಯ, ಲಿಂಗಾಯತ ಸಮುದಾಯದ ಶರಣಪ್ರಕಾಶ್ ಪಾಟೀಲ್, ಕುರುಬ ಸಮುದಾಯದ ಬೈರತಿ ಸುರೇಶ್, ಲಿಂಗಾಯತ ಸಮುದಾಯದ ಈಶ್ವರ್ ಖಂಡ್ರೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಮೂಲಕ ಹೊಸ ಸರ್ಕಾರದ ಮೊದಲ ಹಂತದಲ್ಲಿ ಪರಿಶಿಷ್ಟ ಜಾತಿ (ಬಲಗೈ) ಸಮುದಾಯದ ಇಬ್ಬರು, ಎಡಗೈ ಸಮುದಾಯದ ಒಬ್ಬರು, ಲಿಂಗಾಯತ ಸಮುದಾಯದ ಮೂವರು, ಒಕ್ಕಲಿಗ ಸಮುದಾಯದ ಇಬ್ಬರು, ಕುರುಬ ಸಮುದಾಯದ ಇಬ್ಬರು, ಪರಿಶಿಷ್ಟ ಪಂಗಡ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ರೆಡ್ಡಿ ಸಮುದಾಯದ ತಲಾ ಒಬ್ಬರಿಗೆ ಸ್ಥಾನ ದೊರೆತಿದೆ.

ಜಾತಿ ಲೆಕ್ಕಾಚಾರಗಳನ್ನು ನೋಡಿದರೆ ಒಂದಷ್ಟು ಪ್ರಮುಖ ಜಾತಿಗಳಿಗೆ ಮೊದಲ ಹಂತದಲ್ಲಿ ಪ್ರಾತಿನಿಧ್ಯ ಕೊಟ್ಟು ಸಮಾಧಾನಪಡಿಸಲಾಗಿದೆ. ಆದರೆ, ಸಿದ್ದರಾಮಯ್ಯ ಸಂಪುಟದಲ್ಲಿದ್ದ ಹೆಚ್‌.ಸಿ ಮಹದೇವಪ್ಪ, ಹೆಚ್‌.ಕೆ ಪಾಟೀಲ್, ಸಂತೋಷ್ ಲಾಡ್, ಝಮೀರ್ ಅಹ್ಮದ್‌ರಂತಹ ಹಿರಿಯ ಮತ್ತು ಪ್ರಮುಖ ನಾಯಕರನ್ನು ಹೊರಗಿಟ್ಟಿರುವುದು ಅವರ ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಗಿದೆ.

ಪ್ರಮುಖವಾಗಿ, ಝಮೀರ್ ಅಹ್ಮದ್ ಅವರಿಗೆ ಮೊದಲ ಹಂತದಲ್ಲಿ ಅವಕಾಶ ಸಿಗದಿರುವುದಕ್ಕೆ ಮುಸ್ಲಿಂ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿದೆ. ಮುಸ್ಲಿಂ ಸಮುದಾಯದಿಂದ ಯು.ಟಿ ಖಾದರ್ ಅವರಿಗೆ ಅವಕಾಶ ನೀಡಲಾಗಿದೆಯಾದರೂ, ಝಮೀರ್ ಅಹ್ಮದ್ ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಮುಸ್ಲಿಮರ ಮಾಸ್ ಲೀಡರ್ ಎನಿಸಿಕೊಂಡಿದ್ದಾರೆ. ಕೇವಲ ಮುಸ್ಲಿಮರಷ್ಟೇ ಅಲ್ಲದೆ, ದಲಿತರು, ಕ್ರೈಸ್ತರು ಸೇರಿದಂತೆ ಹಿಂದುಳಿದ, ತಳ ಸಮುದಾಯಗಳ ಜನ ಬೆಂಬಲವೂ ಝಮೀರ್ ಅಹ್ಮದ್ ಅವರಿಗಿದೆ.

ಉಳ್ಳಾಲದಲ್ಲಿ ಹೆಚ್ಚಿನ ಮತಗಳು ಮುಸ್ಲಿಮರದ್ದೇ ಇದೆ, ಹಾಗಾಗಿ, ಯುಟಿ ಖಾದರ್ ಸುಲಭವಾಗಿ ಗೆಲ್ಲುತ್ತಾರೆ. ಆದರೆ, ಚಾಮರಾಜಪೇಟೆಯಲ್ಲಿ ಮುಸ್ಲಿಂ ಮತಗಳೇ ನಿರ್ಣಾಯಕವಲ್ಲ. ಇಲ್ಲಿ ಝಮೀರ್ ಅಹ್ಮದ್ ಗೆಲ್ಲಬೇಕಾದರೆ ಎಲ್ಲಾ ಸಮುದಾಯಗಳ ಮತಗಳು ಬೇಕು. ಚಾಮರಾಜಪೇಟೆಯಲ್ಲಿ ಝಮೀರ್ ಸತತ ಗೆಲುವಿನ ಹಿಂದೆ ಮುಸ್ಲಿಮರ ಜೊತೆ ದಲಿತರು ಸೇರಿದಂತೆ ಇತರ ಹಿಂದುಳಿದವರ ಬೆಂಬಲವಿದೆ. ಎಲ್ಲಾ ಜನ ಸಮುದಾಯವನ್ನು ವಿಶ್ವಾಸದಲ್ಲಿ ಮುನ್ನಡೆಸುವಲ್ಲಿ ಝಮೀರ್ ಅಹ್ಮದ್ ಸಫಲರಾಗಿದ್ದಾರೆ ಎನ್ನಲಾಗ್ತಿದೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವೇಳೆ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಝಮೀರ್ ಅಹ್ಮದ್ ನೇತೃತ್ವದ ತಂಡ ಒತ್ತಾಯಿಸಿತ್ತು. ಆಗ ತಮ್ಮ ಮಗನಿಗೆ ಟಿಕೆಟ್ ಕೈ ತಪ್ಪುವ ಆತಂಕದಲ್ಲಿದ್ದ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್, ತನ್ನ ಸಹೋದ್ಯೋಗಿಯಾಗಿದ್ದ ಹಿರಿಯ ನಾಯಕ ಝಮೀರ್ ಅಹ್ಮದ್ ವಿರುದ್ದ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಇದು ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿತ್ತು.

ಅತಿ ಹೆಚ್ಚು ಮುಸ್ಲಿಂ ಮತಗಳಿದ್ದರೂ, ದಾವಣಗೆರೆ ದಕ್ಷಿಣದಲ್ಲಿ ಝಮೀರ್ ಅಹ್ಮದ್ ತಂಡದ ಬೇಡಿಕೆಯನ್ನು ಕಡೆಗಣಿಸಿ, ಕಾಂಗ್ರೆಸ್ ಹೈಕಮಾಂಡ್ ಸಮರ್ಥ್ ಶಾಮನೂರುಗೆ ಟಿಕೆಟ್ ನೀಡಿತು. ಟಿಕೆಟ್ ಸಿಗದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅವರನ್ನು ಚುನಾವಣೆ ಬಳಿಕ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್ ಅಹ್ಮದ್ ಅವರನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಿತು. ಝಮೀರ್ ಅಹ್ಮದ್ ಅವರ ತಲೆದಂಡ ಆಗುವ ಸಾಧ್ಯತೆಯೂ ಇತ್ತು. ಆದರೆ, ಝಮೀರ್ ಅವರಿಗೆ ಇರುವ ಜನ ಬೆಂಬಲದಿಂದ ಅವರು ಉಳಿದುಕೊಂಡರು ಎಂದು ಹೇಳಲಾಗ್ತಿದೆ.

ಹೊಸ ಸರ್ಕಾರ ರಚನೆಯ ವೇಳೆ ದಾವಣಗೆರೆ ಗೊಂದಲಗಳು ತಣ್ಣಗಾಗಿತ್ತು. ಹಾಗಾಗಿ, ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಹಾಗೂ ಹಿರಿಯರಾದ ಝಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂದು ಅವರ ಬೆಂಬಲಿಗರು ನಂಬಿದ್ದರು. ಆದರೆ, ಈ ನಡುವೆ ವೈರಲ್ ಆದ ಆಡಿಯೋ ಒಂದು ಝಮೀರ್ ಅವರ ಅವಕಾಶ ತಪ್ಪಿಸಿತಾ? ಎಂಬ ಪ್ರಶ್ನೆ ಹುಟ್ಟು ಹಾಕಿದೆ.

ದಾವಣಗೆರೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಕೋಪದಲ್ಲಿ ತಮ್ಮದೇ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಝಮೀರ್ ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಝಮೀರ್ ಅಹ್ಮದ್ ತಮ್ಮ ಆಪ್ತ ಮೊಹಮ್ಮದ್ ಸಿರಾಜ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಕಾಲ್ ರೆಕಾರ್ಡ್ ಆಡಿಯೋ ವೈರಲ್ ಆಗಿದೆ. ಹೊಸ ಸರ್ಕಾರ ರಚನೆಯಾಗುವ ಸಮಯದಲ್ಲೇ ಆಡಿಯೋ ಹೊರ ಬಂದಿರುವುದು ಝಮೀರ್ ಅವರಿಗೆ ಸಚಿವ ಸ್ಥಾನ ಕೈ ತಪ್ಪುವಂತೆ ಮಾಡಿತು ಎನ್ನಲಾಗ್ತಿದೆ. ಮತ್ತೊಂದೆಡೆ ಅಡಿಯೋ ಬಿಡುಗಡೆ ಮಾಡುವ ಮೂಲಕ ಉದ್ದೇಶಪೂರ್ವಕವಾಗಿ ಝಮೀರ್ ಅವರಿಗೆ ಸಚಿವ ಸ್ಥಾನ ಕೈ ತಪ್ಪುವಂತೆ ಮಾಡಲಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ.

ಆಡಿಯೋ ವೈರಲ್ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮಾಜಿ ಸಚಿವ ಎಸ್‌ಎಸ್‌ ಮಲ್ಲಿಕಾರ್ಜನ್, “ಝಮೀರ್‌ ಮಾತನಾಡಿದ ಆಡಿಯೋ ಈಗ ಹೊರಬಂದಿದೆ. ಬಿಜೆಪಿಗೆ ಸಹಾಯ ಮಾಡಲು ಅವರು ಹೀಗೆ ಮಾಡಿದ್ದಾರೆ. ಅವರಿಗೆ ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಆಗಿದೆ” ಎಂದು ಹೇಳಿದ್ದರು.

ಹೊಸ ಸರ್ಕಾರ ರಚನೆಯ ಸಂದರ್ಭದಲ್ಲೇ ಆಡಿಯೋ ಬಿಡುಗಡೆ ಮಾಡಿದವರು ಯಾರು? ಅದು ನಿಜವಾದ ಆಡಿಯೋ ಹೌದಾ? ದಾವಣಗೆರೆ ಚುನಾವಣೆ ನಡೆದು ತಿಂಗಳು ಕಳೆದ ಬಳಿಕ, ಈಗ ಆಡಿಯೋ ವೈರಲ್ ಆಗಲು ಕಾರಣ ಏನು? ಎಂಬ ಪ್ರಶ್ನೆಗಳು ಈಗ ಮೂಡಿವೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಶೇಕಡ 88ರಷ್ಟು ಮುಸ್ಲಿಮರು ಕಾಂಗ್ರೆಸ್‌ ಮತಚಲಾಯಿಸಿದ್ದಾರೆ ಎಂದು ವರದಿಯಾಗಿತ್ತು. 2018ರ ಚುನಾವಣೆಗೆ ಹೋಲಿಸಿದರೆ (ಆಗ ಶೇ. 61ರಷ್ಟು ಮುಸ್ಲಿಮರು ಕಾಂಗ್ರೆಸ್‌ಗೆ ಮತ ಹಾಕಿದ್ದರು), 2023ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಸಮುದಾಯದಿಂದ ದಾಖಲೆಯ ಶೇ. 27ರಷ್ಟು ಮತಗಳು ಹೆಚ್ಚಳವಾಗಿದ್ದವು.

ರಾಜ್ಯದಲ್ಲಿ ಪ್ರಸ್ತುತ ಮುಸ್ಲಿಂ ಜನಸಂಖ್ಯೆ ಸುಮಾರು ಶೇಕಡ 13 ರಿಂದ 14 ರಷ್ಟಿದೆ. ರಾಜ್ಯದ ಒಟ್ಟು ಸಚಿವ ಸಂಪುಟದ ಗರಿಷ್ಠ ಮಿತಿ 34 ಸಚಿವರು (ಮುಖ್ಯಮಂತ್ರಿ ಸೇರಿ). ಜನಸಂಖ್ಯೆಯ ಈ ಶೇಕಡಾವಾರು ಅನುಪಾತವನ್ನು (13-14%) ನೇರವಾಗಿ 34 ಸಚಿವ ಸ್ಥಾನಗಳಿಗೆ ಲೆಕ್ಕ ಹಾಕಿದರೆ, ಮುಸ್ಲಿಂ ಸಮುದಾಯಕ್ಕೆ 4 ರಿಂದ 5 ಸಚಿವ ಸ್ಥಾನಗಳನ್ನು ನೀಡಬೇಕಾಗುತ್ತದೆ.

ಸಿದ್ದರಾಮಯ್ಯ ಸಂಪುಟದಲ್ಲಿ ಝಮೀರ್ ಅಹ್ಮದ್ ಖಾನ್ ಮತ್ತು ರಹೀಮ್ ಖಾನ್ ಇಬ್ಬರಿಗೆ ಮಾತ್ರ ಸಚಿವ ಸ್ಥಾನ ಕೊಡಲಾಗಿತ್ತು. ಹೆಚ್ಚುವರಿಯಾಗಿ ಯು.ಟಿ ಖಾದರ್ ಅವರಿಗೆ ಸ್ಪೀಕರ್ ಹುದ್ದೆ ನೀಡಲಾಗಿತ್ತು. ಆದರೆ, ಅದು ಸಚಿವ ಸಂಪುಟಕ್ಕೆ ಸೇರಿರಲಿಲ್ಲ.

2023ರ ಚುನಾವಣೆಯ ನಂತರ ಮುಸ್ಲಿಂ ಸಂಘಟನೆಗಳು ಮತ್ತು ನಾಯಕರು ಜನಸಂಖ್ಯೆ ಮತ್ತು ಮತದಾನದ ಪ್ರಮಾಣಕ್ಕೆ ಅನುಗುಣವಾಗಿ ತಮಗೆ 1 ಉಪಮುಖ್ಯಮಂತ್ರಿ ಸ್ಥಾನ ಮತ್ತು ಕನಿಷ್ಠ 4-5 ಪ್ರಮುಖ ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ, ಸಿದ್ದರಾಮಯ್ಯ ಸಂಪುಟದಲ್ಲಿ ಈ ಬೇಡಿಕೆ ಈಡೇರಿಲ್ಲ.

ಡಿ.ಕೆ ಶಿವಕುಮಾರ್ ಅವರ ಹೊಸ ಸರ್ಕಾರದಲ್ಲಿ ಮುಸ್ಲಿಂ ಸಮುದಾಯದಿಂದ ಸದ್ಯಕ್ಕೆ ಯು.ಟಿ ಖಾದರ್ ಒಬ್ಬರನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಇನ್ನು ಎರಡನೇ ಹಂತದಲ್ಲಿ ಹೆಚ್ಚೆಂದರೆ ಒಬ್ಬರು ಅಥವಾ ಇಬ್ಬರನ್ನು ಸೇರಿಸಿಕೊಳ್ಳಬಹುದು. ಈ ರೀತಿಯಾದರೆ, ಮುಸ್ಲಿಮರ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ಸಿಕ್ಕಂತಾಗುವುದಿಲ್ಲ. ಕಳೆದ ಬಾರಿ ಇದ್ದ ಹೆಚ್ಚುವರಿ ಸ್ಪೀಕರ್ ಹುದ್ದೆಯೂ ಈ ಬಾರಿ ಕೈತಪ್ಪಲಿದೆ. ಹಾಗಾಗಿ, ಡಿಕೆಶಿ ಸಂಪುಟದಲ್ಲಾದರೂ ಕಾಂಗ್ರೆಸ್ ಗೆಲ್ಲಿಸಿದ ಮುಸ್ಲಿಮರಿಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಾ? ಎಂದು ಸಮುದಾಯ ಕಾಯುತ್ತಿದೆ.

ಇದು ಮುಸ್ಲಿಮರ ಕಥೆಯಾದರೆ ಇನ್ನುಳಿದ ಅಲ್ಪಸಂಖ್ಯಾತ ಜೈನ, ಬೌದ್ದ ಮತ್ತು ಸಿಖ್ ಸಮುದಾಗಳಿಗೆ ಡಿಕೆಶಿ ಸಂಪುಟದಲ್ಲಿ ಮೊದಲ ಹಂತದಲ್ಲಿ ಯಾವುದೇ ಸ್ಥಾನಗಳು ದೊರೆತಿಲ್ಲ. ಸಿದ್ದರಾಮಯ್ಯ ಸಂಪುಟದಲ್ಲಿ ಮಾಜಿ ಸಚಿವ ದಿವಂಗತ ಸುಧಾಕರ್ ಅವರು ಜೈನ ಸಮುದಾಯದ ಪ್ರತಿನಿಧಿಯಾಗಿದ್ದರು. ಇತರ ಅಲ್ಪಸಂಖ್ಯಾತ ಸಮುದಾಯಗಳಿಂದ ಯಾರೂ ಸಚಿವರಾಗಿರಲಿಲ್ಲ. ಈ ಸಂಪುದಲ್ಲಿ ಜೈನರಿಗೂ ಪ್ರತಿನಿಧಿ ಇಲ್ಲದಂತಾಗಿದೆ.

ಹೊಸ ಸರ್ಕಾರದಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಸೇರಿ 14 ಜನರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ಖಾತೆಗಳ ಹಂಚಿಕೆಯೂ ಆಗಿಲ್ಲ. ಮುಂದಿನ ದಿನಗಳಲ್ಲಿ ಸಂಪುಟ ವಿಸ್ತರಣೆ ಅಗತ್ಯವಾಗಿದೆ. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ಸಿಗುತ್ತದಾ? ಝಮೀರ್ ಅಹ್ಮದ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದಾ? ಎಂಬ ಕುತೂಹಲದಲ್ಲಿ ಅವರ ಬೆಂಬಲಿಗರು ಇದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಝಮೀರ್ ಅಹ್ಮದ್ ಅವರನ್ನು ಮೊದಲ ಪಟ್ಟಿಯಲ್ಲಿ ಕೈ ಬಿಟ್ಟಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಜೊತೆಗೆ ರಹೀಂ ಖಾನ್, ತನ್ವೀರ್ ಸೇಠ್, ಕನೀಝ್ ಫಾತಿಮಾ, ರಿಝ್ವಾನ್ ಅರ್ಷದ್ ಅವರ ಹೆಸರುಗಳು ಮುನ್ನೆಲೆಗೆ ಬಂದಿವೆ. ಒಂದು ಡಿಸಿಎಂ ಹುದ್ದೆ ನೀಡಬೇಕು ಎಂಬ ಆಗ್ರಹವೂ ಕೇಳಿ ಬರುತ್ತಿದೆ. ಸಿಎಂ ಡಿ.ಕೆ ಶಿವಕುಮಾರ್ ಮತ್ತು ಕಾಂಗ್ರೆಸ್‌ ಹೈಕಮಾಂಡ್ ಇವೆಲ್ಲವನ್ನೂ ಹೇಗೆ ನಿಭಾಯಿಸಲಿದೆ ಎಂದು ಕಾದು ನೋಡಬೇಕಿದೆ.








ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...