ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹೊಸದುರ್ಗದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಂಡಾಯವೆದ್ದಿರುವ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಬಿಜೆಪಿ ತೊರೆದು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಘೋಷಿಸಿದ್ದಾರೆ.
ಹಾರನ ಕಣಿವೆ ರಂಗನಾಥಸ್ವಾಮಿ ದೇವಸ್ಥಾನದ ಬಳಿ ಬುಧವಾದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, “ನಾನು ಈಗಾಗಲೇ ಪ್ರಚಾರ ಆರಂಭಿಸಿಯಾಗಿದೆ. ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ” ಎಂದಿದ್ದಾರೆ.
ಟಿಕೆಟ್ ಕೈತಪ್ಪುವ ಸಾಧ್ಯತೆ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತು. ಇದರಿಂದ ಸಹಜವಾಗಿ ನೋವಾಗಿದೆ. ನೀರಾವರಿ ಯೋಜನೆಗಳ ಟೆಂಡರ್ನಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನೀಡಿದ ಪ್ರತಿಕ್ರಿಯೆಯಿಂದ ಟಿಕೆಟ್ ಕೈತಪ್ಪಿದೆ ಎಂದು ನನಗೆ ಅನಿಸುವುದಿಲ್ಲ. ಟಿಕೆಟ್ ಸಿಗದಿರಲು ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಅವರೇ ಟಿಕೆಟ್ ಕೈ ತಪ್ಪಲು ನೇರ ಕಾರಣ ಎಂದು ಅವರು ಆರೋಪಿಸಿದ್ದಾರೆ.
ಈಗಾಗಲೇ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಜನಾರ್ಧನ ರೆಡ್ಡಿಯವರು ಮಾತನಾಡಿದ್ದಾರೆ. ಕಾರ್ಯಕರ್ತರು ಮತ್ತು ಹಿತೈಷಿಗಳ ಅಭಿಪ್ರಾಯ ಪಡೆದು ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಗೂಳಿಹಟ್ಟಿ ಶೇಖರ್ ಹೊಸದುರ್ಗದಲ್ಲಿ 2008 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಕಂಡರೆ 2013 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸೋಲು ಕಂಡಿದ್ದರು. 2018 ರಲ್ಲಿ ಬಿಜೆಪಿ ಸೇರಿ ಕಾಂಗ್ರೆಸ್ನ ಬಿ.ಜಿ ಗೋವಿಂದಪ್ಪನವರ ಎದುರು 25,992 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈಗ ಅವರ ಬದಲಿಗೆ ಎಸ್.ಲಿಂಗಮೂರ್ತಿಯವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ಕಾಂಗ್ರೆಸ್ ಬಿ.ಜಿ ಗೋವಿಂದಪ್ಪನವರಿಗೆ ಮತ್ತೆ ಟಿಕೆಟ್ ನೀಡಿದೆ.
ಇದನ್ನೂ ಓದಿ; 8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಇಲ್ಲಿದೆ ಪಟ್ಟಿ