Homeಕರ್ನಾಟಕವಿಸ್ಟ್ರಾನ್ ವಿವಾದ: ಆಕ್ರೋಶವಾಯಿತೆ ಕಾರ್ಮಿಕರಿಗೆ ಕೊಟ್ಟ ಕಿರುಕುಳ?

ವಿಸ್ಟ್ರಾನ್ ವಿವಾದ: ಆಕ್ರೋಶವಾಯಿತೆ ಕಾರ್ಮಿಕರಿಗೆ ಕೊಟ್ಟ ಕಿರುಕುಳ?

ವಿಸ್ಟ್ರಾನ್ ಗಲಾಟೆಯಿಂದ ಆಪಲ್ ಕಂಪೆನಿಗೂ ಇರಿಸು ಮುರಿಸು ಉಂಟಾಗಿರುವುದು ಸುಳ್ಳಲ್ಲ. ಇದೇ ಕಾರಣಕ್ಕೆ ಕೂಡಲೇ ಎಚ್ಚೆತ್ತ ಆಪಲ್ ಕಂಪೆನಿ ಕಾರ್ಮಿಕರ ಕ್ಷಮೆ ಕೇಳುವ ಮೂಲಕ ತೇಪೆ ಹಚ್ಚುವ ಕೆಲಸ ಮಾಡಿದೆ.

- Advertisement -
- Advertisement -

ಕಡಿಮೆ ಬಂಡವಾಳ ಹೂಡಿ, ಅಲ್ಪ ಖರ್ಚಿನಲ್ಲಿ ಹೆಚ್ಚು ಲಾಭ ಗಳಿಸಲು ಇಚ್ಛಿಸುವ ವಿದೇಶಿ ಮೂಲದ ಬಂಡವಾಳದಾರರಿಗೆ ಭಾರತಕ್ಕಿಂತ ಉತ್ತಮವಾದ ಸ್ವರ್ಗ ಬಹುಶಃ ಯಾವುದೂ ಇರಲು ಸಾಧ್ಯವಿಲ್ಲವೇನೋ! ನಮ್ಮ ಮೇಕ್ ಇನ್ ಇಂಡಿಯಾ ಎಂಬ ಪರಿಕಲ್ಪನೆ ಒತ್ತಿ ಒತ್ತಿ ಹೇಳುತ್ತಿರುವುದು ಸಹ ಇದನ್ನೇ. ನಮ್ಮದೇ ನೆಲ-ಜಲ ಮತ್ತು ಮಾನವ ಸಂಪನ್ಮೂಲವನ್ನು ಬಳಸಿಕೊಂಡು ನಮ್ಮವರ ಬೆವರನ್ನು ಲಾಭವಾಗಿ ಪರಿವರ್ತಿಸುವ ಈ ಹೂಡಿಕೆದಾರರನ್ನು ಯಾವ ಸರ್ಕಾರ, ಯಾವ ಕಾನೂನು ಸಹ ಏನೂ ಮಾಡಲಾಗದು. ಇನ್ನೂ ವಿದೇಶಿ ಕಂಪೆನಿಗಳಲ್ಲಿ ದುಡಿಯುವ ಕಾರ್ಮಿಕರ ಯೋಗಕ್ಷೇಮದ ಬಗ್ಗೆ ಸರ್ಕಾರಕ್ಕೆ ಜವಾಬ್ದಾರಿಯಾಗಲಿ, ಕಾಳಜಿಯಾಗಲಿ ಕಿಂಚಿತ್ತೂ ಇರಲು ಸಾಧ್ಯವೇ ಇಲ್ಲ ಎಂಬ ವಿಚಾರವನ್ನು ಇತ್ತೀಚಿನ ವಿಸ್ಟ್ರಾನ್ ಗಲಾಟೆ ಮತ್ತು ಅದರ ಸುತ್ತಲಿನ ಕೆಲವು ಪ್ರಸಂಗಗಳು ಮತ್ತೊಮ್ಮೆ ಸಾಬೀತುಪಡಿಸಿವೆ.

ಅದು ಡಿಸೆಂಬರ್ 12. ಕೋಲಾರದಲ್ಲಿರುವ ವಿಸ್ಟ್ರಾನ್ ಎಂಬ ಐಫೋನ್ ತಯಾರಕ ಖಾಸಗಿ ಕಂಪೆನಿಯ ಉದ್ಯೋಗಿಗಳು ತಮ್ಮನ್ನು ದಿನಕ್ಕೆ 12 ಗಂಟೆ ದುಡಿಸಿಕೊಂಡ ಕಂಪೆನಿ ಕಳೆದ ನಾಲ್ಕು ತಿಂಗಳಿಂದ ವೇತನ ನೀಡಿಲ್ಲ ಎಂದು ಪ್ರತಿಭಟನೆಗೆ ಮುಂದಾಗಿದ್ದರು. ನೋಡನೋಡುತ್ತಿದ್ದಂತೆ ಪ್ರತಿಭಟನೆ ಗಲಭೆಗೆ ತಿರುಗಿತ್ತು. ತಾಳ್ಮೆ ಕಳೆದುಕೊಂಡ ಕಾರ್ಮಿಕರು ಕಂಪೆನಿಯ ಕಿಟಕಿ ಗಾಜುಗಳನ್ನು ಪುಡಿ ಮಾಡಿದ್ದರು. ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಈ ಸುದ್ದಿ ದೇಶದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಲಾರಂಭಿಸಿತ್ತು.

ಕೂಡಲೇ ಎಚ್ಚೆತ್ತ ಸಿಎಂ ಯಡಿಯೂರಪ್ಪ, ಕೋಲಾರ ಸಂಸದ ಮುನಿಸ್ವಾಮಿ ಸೇರಿದಂತೆ ಅನೇಕರು ಈ ಘಟನೆಯ ಬಗ್ಗೆ ಮಾತನಾಡಲು ಆರಂಭಿಸಿದ್ದರು. ಕಾರ್ಮಿಕರು ಹಾಗೂ ಎಸ್‌ಎಫ್‌ಐ ಸಂಘಟನೆಯೇ ಈ ಎಲ್ಲಾ ಸಮಸ್ಯೆ ಮತ್ತು ಗಲಾಟೆಗೆ ಕಾರಣ ಎಂದು ಹೇಳಿ, ಈಗಾಗಲೇ ಸಂಬಳ ಇಲ್ಲದೆ ನೊಂದಿದ್ದ ಶ್ರಮಿಕ ವರ್ಗದ ಮೇಲೆ ಗೂಬೆ ಕೂರಿಸಲು ವೇದಿಕೆ ಸಜ್ಜು ಮಾಡಿದ್ದರು. ನೂರಾರು ಕಾರ್ಮಿಕರನ್ನೂ ಬಂಧಿಸಲಾಗಿತ್ತು. ಆದರೆ, ಅದೃಷ್ಟವಶಾತ್ ಸ್ವತಃ ಅಮೆರಿಕ ಮೂಲದ ಆಪೆಲ್ ಕಂಪೆನಿ ಕಾರ್ಮಿಕರ ಕ್ಷಮೆ ಕೇಳುವುದರೊಂದಿಗೆ ಈ ಘಟನೆಯಲ್ಲಿ ಕಾರ್ಮಿಕರದ್ದಷ್ಟೇ ತಪ್ಪಿಲ್ಲ ಎಂಬುದು ಸಾಬೀತಾಗಿದೆ.

ಹಾಗಾದರೆ ಏನಿದು ವಿಸ್ಟ್ರಾನ್ ಕಂಪೆನಿ ಗಲಭೆ ಪ್ರಕರಣ. ಈ ಗಲಭೆಗೆ ಕಾರಣವೇನು? ಇಲ್ಲಿ ಕಾರ್ಮಿಕರು ಅನುಭವಿಸುತ್ತಿರುವ ಸಮಸ್ಯೆಗಳೇನು? ಇಷ್ಟಕ್ಕೂ ನಮ್ಮದೇ ರಾಜಕಾರಣಿಗಳು ನಮ್ಮದೇ ಶ್ರಮಿಕ ವರ್ಗವನ್ನು ಹಣಿಯಲು ಕಾರಣವೇನು? ಈ ಕಂಪೆನಿಯಲ್ಲಿ ಕಾರ್ಮಿಕ ನೀತಿಗಳ ಕಥೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ.

ವಿಸ್ಟ್ರಾನ್ ಕಂಪೆನಿ

ಮೊಬೈಲ್ ಹ್ಯಾಂಡ್‌ಸೆಟ್ ಲೋಕದ ಪ್ರತಿಷ್ಠಿತ ಬ್ರ್ಯಾಂಡ್ ಆಪಲ್ ಕಂಪೆನಿಗೆ ಬಿಡಿಭಾಗಗಳನ್ನು ತಯಾರಿಸಿ ನೀಡುವ ತೈವಾನ್ ಮೂಲದ ಕಂಪೆನಿಯೇ ಈ ವಿಸ್ಟ್ರಾನ್. ಭಾರತದಲ್ಲಿ ಆಪಲ್ ಮೊಬೈಲ್ ಫೋನ್‌ಗಳಿಗೆ ಬಿಡಿಭಾಗಗಳನ್ನು ತಯಾರಿಸುವ ಏಕೈಕ ಘಟಕ ಇರುವುದು ಕರ್ನಾಟಕದಲ್ಲಿಯೇ.

ವಿಸ್ಟ್ರಾನ್ ಕಾರ್ಪ್‌ನ ಫೋನ್ ಉತ್ಪಾದನಾ ಘಟಕಕ್ಕೆ ಕರ್ನಾಟಕ ಸರ್ಕಾರ ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 43 ಎಕರೆ ಜಮೀನನ್ನು ಮಂಜೂರು ಮಾಡಿದೆ. 29,000 ಕೋಟಿ ರೂ ಹೂಡಿಕೆ ಮಾಡುತ್ತಿರುವುದಾಗಿ ಹಾಗು ಸುಮಾರು 15 ಸಾವಿರ ಜನರಿಗೆ ಉದ್ಯೋಗ ಕೊಡುವುದಾಗಿ ಆರಂಭದಲ್ಲಿ ಘೋಷಿಸಿತ್ತು. ಆದರೆ ಕಂಪನಿಯ ಖಾಯಂ ಉದ್ಯೋಗಗಳನ್ನು ಬೇರೆ ರಾಜ್ಯದವರಿಗೆ ನೀಡಿ, ನಾಲ್ಕನೇ ದರ್ಜೆಯ ಕೆಲಸಗಳನ್ನು ಮಾತ್ರ ಕನ್ನಡಿಗರಿಗೆ ನೀಡುತ್ತಿದೆ ಎಂಬ ಆರೋಪ ಕಾರ್ಮಿಕರದು.

ಕಂಪೆನಿಯಲ್ಲಿ ಕೆಲಸ ಮಾಡುವವರ ಪೈಕಿ ಶೇ.10ರಷ್ಟು ಜನರಿಗೆ ಮಾತ್ರ ಖಾಯಂ ಕೆಲಸ ನೀಡಲಾಗಿದೆ. ಅದೂ ಸಹ ತಮಿಳುನಾಡು, ಮಧ್ಯಪ್ರದೇಶ, ಬಿಹಾರ, ಕೇರಳ ಸೇರಿದಂತೆ ಬೇರೆ ಬೇರೆ ರಾಜ್ಯಗಳ ಯುವಕರ ಪಾಲಾಗಿದೆ. ಇನ್ನೂ ಉಳಿದ ಶೇ.90ರಷ್ಟು ಗುತ್ತಿಗೆ ಆಧಾರದ ಕೆಲಸ ಮಾತ್ರ ಸ್ಥಳೀಯರಿಗೆ. ಈ ಕಂಪೆನಿಗೆ ಸುಮಾರು 10 ಸಾವಿರ ಗುತ್ತಿಗೆ ಕಾರ್ಮಿಕರನ್ನು ಪೂರೈಸುವ ಕೆಲಸವನ್ನು 5 ವಿವಿಧ ಖಾಸಗಿ ಕಂಪೆನಿಗಳು ನಿರ್ವಹಿಸುತ್ತಿವೆ.

ಇದನ್ನೂ ಓದಿ: ವಿಸ್ಟ್ರಾನ್‌ ದುರ್ಘಟನೆಗೆ ಕಂಪನಿಯೆ ಕಾರಣ: AICCTU ಸತ್ಯಶೋಧನಾ ವರದಿ

ಕಳೆದ 10 ತಿಂಗಳಿನಿಂದ ಕೊರೊನಾ ಇಡೀ ವಿಶ್ವವನ್ನೇ ಅಲುಗಾಡಿಸಿದೆ. ಹೀಗಾಗಿ ಶಾಲಾ ಕಾಲೇಜುಗಳು ಬಂದ್ ಆಗಿವೆ. ಅತ್ತ ದುಡಿಮೆಯೂ ಇಲ್ಲದೆ, ಖರ್ಚೂ ಹೆಚ್ಚಾಗಿ ಒದ್ದಾಡುತ್ತಿರುವ ಬಡ ಮತ್ತು ಹಿಂದುಳಿದ ವರ್ಗದ ಯುವಜನರೇ ಈ ಗುತ್ತಿಗೆದಾರ ಕಂಪೆನಿಗಳ ಟಾರ್ಗೆಟ್. 20-22 ವರ್ಷದ ಯುವಕರಿಗೆ ಮಾಸಿಕ 22 ಸಾವಿರ ಸಂಬಳ ನೀಡುವುದಾಗಿ ಆಸೆ ತೋರಿಸಿದ್ದ ಗುತ್ತಿಗೆದಾರರು, ಎಲ್ಲರಿಂದಲೂ ದಿನಕ್ಕೆ ಕನಿಷ್ಟ 12 ಗಂಟೆಗಳ ಕಾಲ ದುಡಿಸಿದ್ದಾರೆ. ಕಳೆದ ಆರು ತಿಂಗಳಿನಿಂದ ಅಮಾನವೀಯ ಪರಿಸರದಲ್ಲಿ ದುಡಿದಿದ್ದ ಕಾರ್ಮಿಕರಿಗೆ ಕಂಪೆನಿ ಮತ್ತು ಗುತ್ತಿಗೆದಾರರು 8 ಸಾವಿರಕ್ಕಿಂತ ಹೆಚ್ಚು ವೇತನ ನೀಡಿಲ್ಲ. ಇನ್ನೂ ಅನೇಕರಿಗೆ ಕಳೆದ ನಾಲ್ಕು ತಿಂಗಳಿನಿಂದ ನಯಾಪೈಸೆಯನ್ನೂ ವೇತನವಾಗಿ ಪಾವತಿ ಮಾಡಿಲ್ಲ. ವಿಸ್ಟ್ರಾನ್ ಗಲಭೆಗೆ ಇದೇ ನೇರ ಕಾರಣ ಎನ್ನಲಾಗುತ್ತಿದೆ.

ಕಾರ್ಮಿಕ ನೀತಿಗೆ ಬೆಲೆ ಇಲ್ಲ, ಮಹಿಳೆಯರಿಗೂ ಶೋಷಣೆ ತಪ್ಪಿಲ್ಲ

1947ರ ಕೈಗಾರಿಕಾ ವಿವಾದಗಳ ಕಾಯ್ದೆಯ ಅನುಸಾರ 100ಕ್ಕಿಂತಲೂ ಹೆಚ್ಚಿನ ಕಾರ್ಮಿಕರು ಇರುವ ಯಾವುದೇ ಕೈಗಾರಿಕೋದ್ಯಮವು ಕಾರ್ಮಿಕ ಮತ್ತು ಮಾಲಿಕರ ಪ್ರತಿನಿಧಿಗಳನ್ನೊಳಗೊಂಡ ಕ್ರಿಯಾ ಸಮಿತಿಯೊಂದನ್ನು ರಚಿಸುವುದು ಕಡ್ಡಾಯವಾಗಿದೆ. ಆದರೆ ಈ ವಿಸ್ಟ್ರಾನ್ ಕಾರ್ಖಾನೆಯಲ್ಲಿ ಈ ಯಾವುದೇ ನಿಯಮಗಳನ್ನು ಪಾಲಿಸಲಾಗಿಲ್ಲ. 10 ಸಾವಿರಕ್ಕಿಂತ ಅಧಿಕ ಉದ್ಯೋಗಿಗಳಿರುವ ಕಂಪೆನಿಯಲ್ಲಿ ಕಾರ್ಮಿಕ ಸಂಘಟನೆ ಅಸ್ತಿತ್ವದಲ್ಲಿ ಇಲ್ಲ ಎಂಬುದೇ ಆಶ್ಚರ್ಯ.

ದೇಶದ ಕಾರ್ಮಿಕ ನೀತಿಯ ಅನ್ವಯ ಕಾರ್ಮಿಕರಿಂದ 8 ಗಂಟೆಗಿಂತ ಅಧಿಕ ದುಡಿಸುವಂತಿಲ್ಲ. ಅದಕ್ಕಿಂತ ಹೆಚ್ಚು ದುಡಿಸಿದರೆ ನಿಯಮದ ಅನ್ವಯ ಮೂಲ ವೇತನದ ಜೊತೆಗೆ ಹೆಚ್ಚುವರಿ ಕೆಲಸದ ವೇತನವನ್ನೂ ಪಾವತಿ ಮಾಡಬೇಕು. ರಾತ್ರಿ ಪಾಳಿಯಲ್ಲಿ ಮಹಿಳೆಯರನ್ನು ದುಡಿಸಿಕೊಳ್ಳುವುದಾದರೆ ಸೂಕ್ತ ಸೌಲಭ್ಯಗಳನ್ನು ಒದಗಿಸಬೇಕು. ಆದರೆ, ವಿಸ್ಟ್ರಾನ್ ಕಂಪೆನಿಯಲ್ಲಿ ಮೂಲವೇತನಕ್ಕೆ ತಲೆಬುಡ ಇಲ್ಲದಂತಾಗಿದೆ. ರಾತ್ರಿ ಪಾಳಿಯಲ್ಲಿ ಮಹಿಳೆಯರಿಂದ ನಿಯಮಗಳನ್ನು ಮೀರಿ ದುಡಿಸಿಕೊಳ್ಳಲಾಗುತ್ತಿದೆ.

PC : Business Today

ಇನ್ನೂ ಮಹಿಳೆಯರಿಗೆ ಕನಿಷ್ಟ ಪ್ರಥಮ ಚಿಕಿತ್ಸೆ, ಉತ್ತಮ ಶೌಚಾಲಯದ ವ್ಯವಸ್ಥೆ ಸಹ ನೀಡದೆ ಸತತ 12 ಗಂಟೆಗಳ ಕಾಲ ಬಿಡುವಿಲ್ಲದೆ ಕೆಲಸ ಮಾಡಿಸಲಾಗಿದೆ ಎಂಬ ಗಂಭೀರ ಆರೋಪವೂ ವಿಸ್ಟ್ರಾನ್ ಕಂಪೆನಿ ಮೇಲಿದೆ. ಇದಲ್ಲದೆ, ಈ ಕಂಪೆನಿ ಗುತ್ತಿಗೆ ಕಾರ್ಮಿಕರನ್ನು ಹಿಂಬಾಗಿಲಿನಿಂದ ನೇಮಕ ಮಾಡಿ, ಗುತ್ತಿಗೆ ಕಾರ್ಮಿಕ ಕಾಯ್ದೆಗಳನ್ನೂ ಉಲ್ಲಂಘನೆ ಮಾಡಿದೆ. ಆದರೆ, ಈ ಎಲ್ಲಾ ವಿಚಾರಗಳೂ ಗೊತ್ತಿದ್ದೂ ರಾಜ್ಯ ಸರ್ಕಾರ ಮತ್ತು ಕಾರ್ಮಿಕ ಇಲಾಖೆ ನಮ್ಮ ಕಾರ್ಮಿಕ ಪರ ನಿಂತಿಲ್ಲವೇಕೆ ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಸೋಗಲಾಡಿ ಮುಖಂಡರು

ಗುತ್ತಿಗೆ ಆಧಾರದಲ್ಲಿ ವಿಸ್ಟ್ರಾನ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವವರು ಎಲ್ಲರೂ ಸ್ಥಳೀಯ ಬಡ ಮತ್ತು ಹಿಂದುಳಿದ ವರ್ಗದ ಜನ. ಕೊರೊನಾ ಸಂದರ್ಭದಲ್ಲಿ ಸಂಬಳ ಇಲ್ಲದ ಕಾರಣ ಈ ಜನ ಸಾಮಾನ್ಯವಾಗಿ ಸಂಕಷ್ಟಕ್ಕೆ ನೂಕಲ್ಪಟ್ಟಿದ್ದರು. ಅಸಲಿಗೆ ಇಂತಹ ಜನರ ಸಮಸ್ಯೆಯನ್ನು ಆಲಿಸಬೇಕಿದ್ದ ಸರ್ಕಾರ ಮತ್ತು ಜನ ನಾಯಕರು ಈ ಸಂದರ್ಭದಲ್ಲಿ ದೀರ್ಘ ನಿದ್ರೆಗೆ ಜಾರಿದ್ದರು.

ಆದರೆ, ಅಸಹಾಯಕ ಸ್ಥಿತಿಯಲ್ಲಿ ನೊಂದ ಕಾರ್ಮಿಕರು ತಮ್ಮ ನ್ಯಾಯಬದ್ಧ ಆಕ್ರೋಶವನ್ನು ಹೊರಹಾಕುತ್ತಿದ್ದಂತೆ, ಗಲಭೆ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿ ಆದಿಯಾಗಿ ಎಲ್ಲಾ ನಾಯಕರು ಈ ಗಲಭೆಗೆ ಕಾರ್ಮಿಕರೇ ಕಾರಣ ಎಂದು ಷರಾ ಬರೆದುಬಿಟ್ಟಿದ್ದರು. ಅಲ್ಲದೆ, 160ಕ್ಕೂ ಹೆಚ್ಚು ಕಾರ್ಮಿಕರನ್ನು ಬಂಧಿಸಿದ್ದರು. ಆದರೆ ಆಪಲ್ ಕಂಪೆನಿ ತನ್ನ ತಪ್ಪನ್ನು ಒಪ್ಪಿಕೊಂಡು ನೇರ ಕಾರ್ಮಿಕರ ಕ್ಷಮೆ ಕೇಳಿದ ಪರಿಣಾಮ ಪ್ರಕರಣ ತಣ್ಣಗಾಗಿದೆ. ಇಲ್ಲದಿದ್ದರೆ ಕಾರ್ಮಿಕರ ಪರಿಸ್ಥಿತಿಯನ್ನೂ ಊಹಿಸುವುದೂ ಕಷ್ಟವಿತ್ತೆನ್ನಿ.

ಇನ್ನಾದರೂ ಸಿಗುತ್ತಾ ನ್ಯಾಯ?

ವಿಸ್ಟ್ರಾನ್ ಗಲಭೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಇದರಿಂದ ಆಪಲ್ ಕಂಪೆನಿಗೂ ಇರಿಸು ಮುರಿಸು ಉಂಟಾಗಿರುವುದು ಸುಳ್ಳಲ್ಲ. ಇದು ಆ ಕಂಪೆನಿಯ ಉತ್ಪನ್ನಗಳ ಮಾರಾಟದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಕೂಡಲೇ ಎಚ್ಚೆತ್ತ ಆಪಲ್ ಕಂಪೆನಿ ಕಾರ್ಮಿಕರ ಕ್ಷಮೆ ಕೇಳುವ ಮೂಲಕ ತೇಪೆ ಹಚ್ಚುವ ಕೆಲಸಕ್ಕೆ ಮುಂದಾಗಿತ್ತು. ಅಲ್ಲದೆ, ವಿಸ್ಟ್ರಾನ್ ಕಂಪೆನಿಯ ಜೊತೆಗಿನ ಗುತ್ತಿಗೆಯನ್ನು ಮುಗಿಸುವ ಮಾತುಗಳನ್ನಾಡಿದೆ.

ಇದನ್ನೂ ಓದಿ: ವಿಸ್ಟ್ರಾನ್ ಬಿಕ್ಕಟ್ಟು – ಕಾರ್ಮಿಕರ ಬಳಿ ಕ್ಷಮೆಯಾಚಿಸಿದ ಕಂಪೆನಿ; ಉಪಾಧ್ಯಕ್ಷನ ವಜಾ!

ಪ್ರತಿಭಟನೆಯಲ್ಲಿ ತೊಡಗಿದ್ದ 160ಕ್ಕೂ ಅಧಿಕ ಕಾರ್ಮಿಕರನ್ನು ಬಂಧಿಸಿ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಲಾಗಿದೆ. ಈ ನಡುವೆ ವಿಸ್ಟ್ರಾನ್ ಕಂಪೆನಿಯ ಗುತ್ತಿಗೆಯನ್ನು ಮರು ಪರಿಶೀಲಿಸುವುದಾಗಿ ಆಪೆಲ್ ಕಂಪೆನಿ ಹೇಳಿರುವುದು ಇಲ್ಲಿನ ಕಾರ್ಮಿಕ ಭವಿಷ್ಯದ ಮೇಲೆ ತೂಗುಗತ್ತಿಯಾಗಿದೆ. ಹೀಗಾಗಿ ಸಂಬಂಧಪಟ್ಟ ಕಾರ್ಮಿಕ ಇಲಾಖೆ ಮತ್ತು ಸರ್ಕಾರ ಇನ್ನಾದರೂ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕಿದೆ. ಕಾರ್ಮಿಕರಿಗೆ ಖಾಯಂ ಉದ್ಯೋಗ ಭದ್ರತೆಯ ಜೊತೆಗೆ ಸಂಬಳವೂ ಸಿಗುವಂತೆ ಮಾಡಬೇಕಿದೆ.

ಆಪೆಲ್ ಫೋನ್‌ಗಳನ್ನು ಉತ್ಪಾದಿಸುವ ಸಂಸ್ಥೆಗಳಿಂದ ಕಾರ್ಮಿಕರ ಕಿರುಕುಳ ಇದೇ ಮೊದಲಲ್ಲ!

ಆಪೆಲ್ ಕಂಪೆನಿಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ದೊಡ್ಡ ಮಾರುಕಟ್ಟೆ ಮತ್ತು ಬೇಡಿಕೆ ಇದೆ. ಅಲ್ಲದೆ, ವಿಶ್ವದ ಅನೇಕ ದೇಶಗಳಲ್ಲಿ ಬಿಡಿಭಾಗಗಳನ್ನು ಉತ್ಪಾದಿಸುವ ಗುತ್ತಿಗೆಯನ್ನು ನಾನಾ ಕಂಪೆನಿಗಳಿಗೆ ನೀಡಿದೆ. ಹೀಗೆ ಚೀನಾದಲ್ಲಿ ಫಾಕ್ಸ್‌ಕಾನ್ನ್ ಕಂಪೆನಿಗೆ ಈ ಗುತ್ತಿಗೆಯನ್ನು ನೀಡಲಾಗಿದೆ.

ಚೀನಾದ ಈ ಕಂಪೆನಿಯಲ್ಲೂ ಕಾರ್ಮಿಕರನ್ನು ಮಿತಿಮೀರಿ ದುಡಿಸಿರುವ ವರದಿಗಳಿವೆ. ದಿನಕ್ಕೆ ಕನಿಷ್ಟ 12 ಗಂಟೆಗೂ ಅಧಿಕ ಕಾಲ ದುಡಿಸಲಾಗಿದೆ. ಕೆಲಸದ ಒತ್ತಡ ಮತ್ತು ಹತಾಶೆಯಿಂದಾಗಿ 2010-11ರಲ್ಲಿ ಈ ಕಂಪೆನಿಯ ಅನೇಕ ಉದ್ಯೋಗಿಗಳು ಆತ್ಮಹತ್ಯೆಗೆ ಶರಣಾಗಿದ್ದರು. ಕಂಪೆನಿಯ ಮಹಡಿಯಿಂದಲೂ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಅನೇಕ ಪ್ರಕರಣಗಳು ವರದಿಯಾಗಿದ್ದವು. ಇವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ್ದವು.

ಪರಿಣಾಮ ಚೀನಾದ ಲೇಬರ್ ವಾಚ್ ಈ ಕಂಪೆನಿಗೆ ಭೇಟಿ ನೀಡಿ ಇಲ್ಲಿ ಉದ್ಯೋಗಿಗಳಿಗೆ ಕಿರುಕುಳ ನೀಡುತ್ತಿರುವುದನ್ನು ಖಚಿತಪಡಿಸಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಚೀನಾ ಸರ್ಕಾರ ಕೊನೆಗೂ ಕಾರ್ಮಿಕರ ಸಮಸ್ಯೆಗೆ ಪರಿಹಾರ ನೀಡಿತ್ತು.

ಇದೀಗ ಇದೇ ರೀತಿಯ ಪ್ರಕರಣ ಭಾರತದಲ್ಲೂ ಸಹ ನಡೆಯುತ್ತಿರುವುದು ಕಾಕತಾಳೀಯವೇನಲ್ಲ.

ಕಾರ್ಮಿಕರಿಗೆ ಅಂತಾರಾಷ್ಟ್ರೀಯ ಸಂಘಟನೆ ಅಗತ್ಯವಿದೆ!

ಬೆಂಗಳೂರು ಗಾರ್ಮೆಂಟ್ ಕಂಪೆನಿಗಳ ದೊಡ್ಡ ಕಣಜ. ರಾಜ್ಯ ರಾಜಧಾನಿಯ ಬಹುಪಾಲು ಜನರಿಗೆ ಉದ್ಯೋಗದ ಮೂಲ ಈ ಗಾರ್ಮೆಂಟ್‌ಗಳು. ಇಲ್ಲಿ ತಯಾರಾಗುವ ವಿವಿಧ ಬಟ್ಟೆಗಳು ಬೇರೆ ಬೇರೆ ಬ್ರ್ಯಾಂಡ್ ಹೆಸರಿನಲ್ಲಿ ಅಮೆರಿಕ ಮತ್ತು ಯೂರೋಪ್‌ಗಳಿಗೆ ರಫ್ತಾಗುತ್ತದೆ. ಇಲ್ಲಿನ ಗಾರ್ಮೆಂಟ್ ಕಂಪೆನಿಗಳು ಮಾರಾಟಗಾರರಾದರೆ ಅದನ್ನು ಕೊಳ್ಳುವುದು ಅಂತಾರಾಷ್ಟ್ರೀಯ ಬ್ರ್ಯಾಂಡ್ ಕಂಪೆನಿಗಳು. ಇದನ್ನು ಕಾರ್ಟಲ್ ಚೈನ್ ಸಿಸ್ಟಮ್ ಎನ್ನಲಾಗುತ್ತದೆ.

ಆರಂಭದಲ್ಲಿ ಗಾರ್ಮೆಂಟ್ ಕಾರ್ಮಿಕರು ಸಹ ಇಂತಹ ನಾನಾ ಸಮಸ್ಯೆಗಳನ್ನು ಎದುರಿಸಿದ್ದಾರೆ. ಹೋರಾಟಕ್ಕೆ ಮುಂದಾದ ಪ್ರಸಂಗಗಳೂ ಸಾಕಷ್ಟಿವೆ. ಆದರೆ, ಇದೀಗ ಗಾರ್ಮೆಂಟ್ ಉದ್ಯೋಗಿಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಘಟಿತರನ್ನಾಗಿಸಲಾಗಿದೆ. ಸ್ಥಳೀಯ ಕಂಪೆನಿಗಳು ಇಲ್ಲಿನ ಕಾರ್ಮಿಕರಿಗೆ ಏನೇ ಕಿರುಕುಳ ನೀಡಿದರೂ, ಆ ವಿಚಾರವನ್ನು ಈ ಗಾರ್ಮೆಂಟ್ ಕಂಪೆನಿಗಳಿಂದ ಉತ್ಪನ್ನಗಳನ್ನು ಖರೀದಿಸುವ ಅಂತಾರಾಷ್ಟ್ರೀಯ ಬ್ರ್ಯಾಂಟ್‌ಗಳ ಗಮನಕ್ಕೆ ತಂದು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲಾಗುತ್ತಿದೆ.
ದೇಶದ ಕಾರ್ಮಿಕ ವಲಯ ಹೀಗೆ ಅಂತಾರಾಷ್ಟ್ರೀಯವಾಗಿ ಸಂಘಟಿತವಾಗದ ಹೊರತು ಈ ಸಮಸ್ಯೆಗೆ ಪರಿಹಾರ ಇಲ್ಲ ಎನ್ನುತ್ತಾರೆ ಗಾರ್ಮೆಂಟ್ ಮತ್ತು ಟೆಕ್ಸ್ಟೈಲ್ ಕಾರ್ಮಿಕ ಸಂಘಟನೆಯ ಜಯರಾಮ್.


ಇದನ್ನೂ ಓದಿ: ವಿಸ್ಟ್ರಾನ್ ಬಿಕ್ಕಟ್ಟು: ಕಾರ್ಮಿಕರ ಹೋರಾಟಕ್ಕೆ AILU ಉಚಿತ ಕಾನೂನು ನೆರವು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...