ಭಾರತದ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ, ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆಯನ್ನು ಮುಂದುವರೆಸಿದ್ದು, ದೇಶದ ಪ್ರಮುಖ ರೈತ ಸಂಘಟನೆಗಳು ಅವರಿಗೆ ಬೆಂಬಲ ನೀಡುತ್ತಿದ್ದಾರೆ. ಮುಂದಿನ ಪ್ರತಿಭಟನೆಯ ರೂಪುರೇಷೆಗಳ ಬಗ್ಗೆ ಚರ್ಚಿಸಲು ರೈತರು ಗುರುವಾರ ‘ಮಹಾಪಂಚಾಯತ್’ ನಡೆಸಲಿದ್ದಾರೆ.
ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಕುಸ್ತಿಪಟುಗಳ ಪ್ರತಿಭಟನೆ ಕುರಿತು ಚರ್ಚಿಸಲು ಗುರುವಾರ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ಎಲ್ಲಾ ಖಾಪ್ಗಳ ಮಹಾ ಸಭೆ ನಡೆಯಲಿದೆ. ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ರಾಜಸ್ಥಾನ ಮತ್ತು ದೆಹಲಿಯ ವಿವಿಧ ಖಾಪ್ಗಳ ಹಲವಾರು ಪ್ರತಿನಿಧಿಗಳು ಮತ್ತು ಅವರ ಮುಖ್ಯಸ್ಥರು ಮಹಾಪಂಚಾಯತ್ನಲ್ಲಿ ಭಾಗವಹಿಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಹೇಳಿದೆ ಮುಖಂಡ ನರೇಶ್ ಟಿಕಾಯತ್ ಹೇಳಿದ್ದಾರೆ.
ಭಾರತದ ಕೆಲವು ಅತ್ಯುತ್ತಮ ಕುಸ್ತಿಪಟುಗಳು ತಾವು ಗೆದ್ದಿರುವ ಪದಕಗಳನ್ನು ಮಂಗಳವಾರ ಗಂಗಾ ನದಿಯಲ್ಲಿ ಬಿಡಲು ತೆರಳಿದ್ದ ವೇಳೆ ಅವರ ಮನವೊಲಿಸುವಲ್ಲಿ ರೈತ ಮುಖಂಡ ನರೇಶ್ ಟಿಕಾಯತ್ ಪ್ರಮುಖ ಪಾತ್ರ ವಹಿಸಿದ್ದಾರೆ. ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಮಂಗಳವಾರ ಹರಿದ್ವಾರಕ್ಕೆ ತೆರಳಿ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳದ ಕಾರಣ ತಮ್ಮ ಪದಕಗಳನ್ನು ನದಿಯಲ್ಲಿ ಮುಳುಗಿಸುವುದಾಗಿ ಹೇಳಿದ್ದರು. ರೈತ ಮುಖಂಡರು ಮನವೊಲಿಸಿದ ಬಳಿಕ ಪೊಲೀಸರಿಗೆ ಐದು ದಿನಗಳ ಗಡುವು ನೀಡಿ ತಮ್ಮನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಇದನ್ನೂ ಓದಿ: ಕುಸ್ತಿಪಟುಗಳು ಬಂಧನದಲ್ಲೂ ನಗುತ್ತಿದ್ದಾರೆ ಎಂದು ನಕಲಿ ಫೋಟೋ ಹರಿಬಿಟ್ಟ ಐಟಿ ಸೆಲ್: ಬಜರಂಗ್ ಪೂನಿಯಾ ಆರೋಪ
ಅಪ್ರಾಪ್ತ ವಯಸ್ಕರು ಸೇರಿದಂತೆ ಏಳು ಅಥ್ಲೀಟ್ಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜನವರಿಯಿಂದ ಕುಸ್ತಿಪಟುಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ತಮ್ಮ ಮೇಲಿನ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಘೋಷಿಸಿದ್ದಾರೆ.
”ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ. ನಿಮ್ಮ ಬಳಿ (ಕುಸ್ತಿಪಟುಗಳು) ಏನಾದರೂ ಸಾಕ್ಷ್ಯಾಧಾರಗಳಿದ್ದರೆ ಅದನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತು ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ” ಎಂದು ಬುಧವಾರ ಬ್ರಿಜ್ಭೂಷಣ್ ಸಿಂಗ್ ಘೋಷಿಸಿದ್ದಾರೆ.
ಭಾರತದಲ್ಲಿ ಕುಸ್ತಿಪಟುಗಳನ್ನು ಹೀಗೆ ನಡೆಸಿಕೊಳ್ಳುತ್ತಿರುವುದಕ್ಕೆ ಅಂತಾರಾಷ್ಟ್ರೀಯ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (UWW) ಆಡಳಿತ ಮಂಡಳಿಯು ಆಕ್ಷೇಪವ್ಯಕ್ತಪಡಿಸಿದೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ 45 ದಿನಗಳಲ್ಲಿ WFIಗಾಗಿ ಹೊಸ ಚುನಾವಣೆಗಳನ್ನು ನಡೆಸುವ ತನ್ನ ಭರವಸೆಯನ್ನು ಉಳಿಸಿಕೊಳ್ಳದಿದ್ದರೇ ಫೆಡರೇಶನ್ಅನ್ನು ಅಮಾನತುಗೊಳಿಸುವ ಎಚ್ಚರಿಕೆಯನ್ನೂ ನೀಡಿದೆ.