ಇಡೀ ದೇಶದಲ್ಲಿ ಆಪರೇಷನ್ ಕಮಲ ಎಂಬುದು ಚಾಲ್ತಿಗೆ ಬಂದಿದ್ದರೆ ಅದು ಬಿ.ಎಸ್ ಯಡಿಯೂರಪ್ಪನವರಿಂದ. ಅವರೇ ಆಪರೇಷನ್ ಕಮಲದ ಪಿತಾಮಹ. ಅದಕ್ಕೂ ಮುಂಚೆ ಇಂತಹಾ ಯಾವ ಆಪರೇಷನ್ಗಳು, ಸರ್ಜರಿಗಳು ನಡೆದಿರಲಿಲ್ಲ. ಇದೀಗ ಪ್ರಜಾಪ್ರಭುತ್ವಕ್ಕೆ ಮಾರಕವಾದ ಆಪರೇಷನ್ ಕಮಲದ ಸೋಂಕು ರಾಷ್ಟ್ರವ್ಯಾಪಿ ಹಬ್ಬುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬಿಜೆಪಿ ಪಕ್ಷವು ರಾಜಸ್ಥಾನ ಸರ್ಕಾರವನ್ನು ಅಸ್ಥಿರಗೊಳಿಸಲು ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ ಇಂದು ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರದು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ನಡೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯ ಈ ಷಡ್ಯಂತ್ರದಲ್ಲಿ ರಾಜಸ್ಥಾನದ ರಾಜ್ಯಪಾಲರೂ ಭಾಗಿಯಾಗಿದ್ದಾರೆ. ಸಚಿವ ಸಂಪುಟದ ತೀರ್ಮಾನದಂತೆ ನಡೆದುಕೊಳ್ಳುವುದು ರಾಜ್ಯಪಾಲರ ಕರ್ತವ್ಯ. ಆದರೆ, ಅವರು ಅಲ್ಲಿನ ಬಿಜೆಪಿಗೆ ಸಹಕಾರ ನೀಡುವ ಮೂಲಕ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ ಎಂದು ಕಾಂಗ್ರೆಸ್ ಪಕ್ಷ ಇಂದು ದೇಶಾದ್ಯಂತ ಶಾಂತಿಯುತ ಪ್ರತಿಭಟನೆ ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಅನ್ಯಾಯವನ್ನು ಪ್ರತಿಭಟಿಸಲು ಸಂವಿಧಾನ ಎಲ್ಲರಿಗೂ ಅವಕಾಶ ಕೊಟ್ಟಿದೆ ಎಂದು ಅವರು ಹೇಳಿದರು.
ಈ ಹಿಂದೆ ಬಿಜೆಪಿಯವರು ಮಧ್ಯಪ್ರದೇಶದ ಸರ್ಕಾರ ಉರುಳಿಸಿದರು. ಇದೀಗ ರಾಜಸ್ಥಾನ ಸರ್ಕಾರ ಕೆಡವಲು ಹೊರಟಿದ್ದಾರೆ. ನಿತ್ಯ ಚಿಕಿತ್ಸೆ ಸಿಗದೆ ಸಾವಿರಾರು ಮಂದಿ ಕೊರೊನಾ ಇಂದ ಸಾವಿಗೀಡಾಗುತ್ತಿದ್ದಾರೆ, ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಿಂಚಿತ್ತಾದರೂ ಕಾಳಜಿ ಇದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಪೊಲೀಸರು ಕಾನೂನುಬದ್ಧವಾಗಿ ನಡೆದುಕೊಂಡು ನಮಗೆ ಪ್ರತಿಭಟಿಸಲು ಹಾಗೂ ರಾಜ್ಯಪಾಲರ ಕಚೇರಿಗೆ ಹೋಗಲು ಅವಕಾಶ ಮಾಡಿಕೊಡಬೇಕು. ಇದು ನಮ್ಮ ಹಕ್ಕು ಕೂಡ. ಪೊಲೀಸ್ ಇಲಾಖೆ ಆಳುವ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯದೆ, ನಿಷ್ಪಕ್ಷಪಾತವಾಗಿ ವರ್ತಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿಗೆ ದೂರು ನೀಡಿದ ಗೆಹ್ಲೋಟ್: ಅಧಿವೇಶನ ಕರೆದ ರಾಜ್ಯಪಾಲರು