ಮುಂಬರುವ 2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿ ಅವರ AIMIM ಪಕ್ಷ 100 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಕುರಿತು ಮಾತನಾಡಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್, ಅಸಾದುದ್ದೀನ್ ಓವೈಸಿ ಅವರ ಸವಾಲು ಸ್ವೀಕರಿಸಿದ್ದೇವೆ ಎಂದಿದ್ದಾರೆ.
ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ “300 ಕ್ಕೂ ಹೆಚ್ಚು ಸ್ಥಾನಗಳನ್ನು” ಗೆದ್ದ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ಅಸಾದುದ್ದೀನ್ ಓವೈಸಿ ನಮ್ಮ ದೇಶದ ದೊಡ್ಡ ನಾಯಕ. ಅವರು 2022 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸವಾಲು ಹಾಕಿದರೇ, ಬಿಜೆಪಿಯ ಕಾರ್ಯಕರ್ತರು ಅಸಾದುದ್ದೀನ್ ಓವೈಸಿ ಸವಾಲನ್ನು ಸ್ವೀಕರಿಸುತ್ತಾರೆ” ಎಂದು ಯೋಗಿ ಸುದ್ದಿ ಸಂಸ್ಥೆ ಎಎನ್ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
“2022 ರ ಚುನಾವಣೆಯಲ್ಲಿ ಬಿಜೆಪಿ ಗಲುವು ಸಾಧಿಸಿ, ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚಿಸುವುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಕೊರೊನಾ ಮೊದಲ ಅಲೆಯಿಂದ ಉತ್ತರ ಪ್ರದೇಶ ಪಾಠ ಕಲಿಯಲಿಲ್ಲ: ಆಡಳಿತ ಪಕ್ಷದ ನಾಯಕರಿಂದ ಟೀಕೆ
ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪ್ರಚಾರ ಕಾರ್ಯ ಈಗಾಗಲೇ ಶುರುವಾಗಿದೆ. ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ತಮ್ಮ ಪಕ್ಷವು 2022 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 100 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಕಳೆದ ತಿಂಗಳು ಹೇಳಿದ್ದರು.
ಓಂ ಪ್ರಕಾಶ್ ರಾಜ್ಭರ್ ನೇತೃತ್ವದ ಎಸ್ಬಿಎಸ್ಪಿ ಮತ್ತು ಇತರ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸಂಕಲ್ಪ ಮೋರ್ಚಾ ಬ್ಯಾನರ್ ಅಡಿಯಲ್ಲಿ ಓವೈಸಿ ಪಕ್ಷವು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಜ್ಜಾಗಿದೆ.
ವಿಧಾನಸಭಾ ಚುನಾವಣೆ ಮುಂಚಿತವಾಗಿ ನಡೆದಿರುವ ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ 75 ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಗಳಲ್ಲಿ 67 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಪಕ್ಷದ ಈ ಗೆಲುವು ರಾಜ್ಯದ ಬಿಜೆಪಿ ನಾಯಕ ವಿಶ್ವಾಸವನ್ನು ಬಲಪಡಿಸಿದೆ. ಇದರಿಂದಾಗಿ ಯೋಗಿ ಆದಿತ್ಯನಾಥ್, 2022 ರ ವಿಧಾನಸಭಾ ಚುನಾವಣೆಯನ್ನು ಇದೇ ಮಾದರಿಯಲ್ಲಿ ಗೆಲ್ಲುವುದಾಗಿ ಪ್ರತಿಜ್ಞೆ ಮಾಡಿದ್ದು, “ನಾವು 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ