Homeಅಂಕಣಗಳುನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

ನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

- Advertisement -
- Advertisement -

ಚಂದ್ರಶೇಖರ್ ಆಜಾದ್ ‘ರಾವಣ್’, ಯಾವುದೇ ಬಾಲಿವುಡ್ ಹೀರೋಗೂ ಕಡಿಮೆಯಿಲ್ಲದಂತೆ ಸಂಚಲನ ಮೂಡಿಸಿರುವ ಹೆಸರುಗಳಲ್ಲೊಂದು. ಈವರೆಗೆ ರಾಮಾಯಣದ ರಾವಣನ ಪೌರಾಣಿಕ ಪಾತ್ರವನ್ನು ಬಿಟ್ಟು ಆ ಹೆಸರಿನ ಇನ್ಯಾವ ವ್ಯಕ್ತಿಯ ಬಗ್ಗೆಯೂ ಗೊತ್ತಿಲ್ಲದವರೂ ಕೂಡಾ, ಕಳೆದ ಕೆಲವು ದಿನಗಳಲ್ಲಿ ಮಾಧ್ಯಮಗಳು ಪದೇ ಪದೇ ಪ್ರಸ್ತಾಪಿಸಿದ ಈ ಹೆಸರಿನ ವ್ಯಕ್ತಿಯ ಬಗ್ಗೆ ಕುತೂಹಲದಿಂದ ಪರಿಶೀಲಿಸುವಂತಾಯಿತು. ವಿವರಗಳನ್ನು ಕೆದಕಿದವರಿಗೆ ಕಂಡಿದ್ದು ಚಂದ್ರಶೇಖರ್ ಅಥವಾ ರಾವಣ್ ಎಂಬ ಪಶ್ಚಿಮ ಉತ್ತರ ಪ್ರದೇಶದ ದಲಿತ ಯುವ ವಕೀಲನೊಬ್ಬನು ಹೊಸ ತಲೆಮಾರನ್ನು ಪ್ರಭಾವಿಸಿದ ರೀತಿ; ವಿಶೇಷವಾಗಿ ಈತ, ವಿನಯ್ ರತನ್‍ಸಿಂಗ್ ಎಂಬ ಮತ್ತೊಬ್ಬ ದಲಿತ ಯುವ ವಕೀಲನೊಂದಿಗೆ ಸೇರಿ ಕಟ್ಟಿದ ‘ಭೀಮ್ ಆರ್ಮಿ’ ತಂಡವು ದಲಿತ ಯುವಕರಲ್ಲಿ ಮಿಲಿಟೆನ್ಸಿಯನ್ನು ಹುಟ್ಟುಹಾಕಿ ಯಾರಿಗೂ ತಲೆಬಾಗಿ ಬದುಕಬೇಡಿ ಎಂಬ ಸಂದೇಶ; ನಂತರ ಆಜಾದ್ ಮೇಲೆ ಸುಳ್ಳು ಕೇಸುಗಳನ್ನು ಜಡಿದು ಜೈಲುಪಾಲು ಮಾಡಿ ಇವೆಲ್ಲವನ್ನೂ ಹತ್ತಿಕ್ಕಲು ಉತ್ತರ ಪ್ರದೇಶದ ಸರ್ಕಾರ ನಡೆಸಿದ ವಿಫಲ ಯತ್ನ ಮತ್ತು ನಂತರ ಅನಿವಾರ್ಯವಾಗಿ ಈ ಸೆಪ್ಟೆಂಬರ್ 13ರ ಮಧ್ಯರಾತ್ರಿ ಚಂದ್ರಶೇಖರ್ ಆಜಾದ್ ರ  ಬಿಡುಗಡೆ!

ಇವೆಲ್ಲವೂ ಕೇವಲ 30ರ ಆಸುಪಾಸಿನಲ್ಲಿರುವ, ದಲಿತರ ಪರವಾದ ಖಚಿತವಾದ ರಾಜಕೀಯ ನಿಲುವುಗಳನ್ನುಳ್ಳ, ಪ್ರಖರ ವಾಗ್ಮಿಯೂ ಹೋರಾಟಗಾರನೂ ಆದ ಈ ಯುವಕನನ್ನು ಭಾರತದ ಬಹುಪಾಲು ದಲಿತ ಮತ್ತು ಚಿಂತನಶೀಲ ಯುವಕರ ಕಣ್ಮಣಿಯಾಗಿಸಿದೆ. ತಮ್ಮ ಸಮುದಾಯವನ್ನು ಸುದೀರ್ಘ ಕಾಲದಿಂದ ಕಾಡುತ್ತಾ ಬಂದಿರುವ ಉತ್ತರ ಪ್ರದೇಶದ ಬಲಾಢ್ಯ ಠಾಕೂರ್ ಸಮುದಾಯದ ರೀತಿಯಂತೆ ಉದ್ದೇಶಪೂರ್ವಕವಾಗಿಯೇ ಮೇಲೆತ್ತಿ ತಿರುಗಿಸಿದ ಮೀಸೆಯನ್ನೂ, ಬಲಗೈಗೆ ಧರಿಸುವ ದಪ್ಪ ಕಡಗವನ್ನೂ ತಮ್ಮ ವಿಶಿಷ್ಟ (ಸಿಗ್ನೇಚರ್) ಶೈಲಿಯಾಗಿಸಿಕೊಂಡಿರುವ ಭೀಮ್ ಆರ್ಮಿಯ ಹೋರಾಟಗಾರರು ಸದ್ಯಕ್ಕೆ ಸಮಾನತೆಯನ್ನು ಕನಸುವ ಯುವಕರ ಫ್ಯಾಶನ್ ಐಕಾನ್‍ಗಳು ಕೂಡಾ ಹೌದು!

ಚಂದ್ರಶೇಖರ್ ಆಜಾದ್ ‘ರಾವಣ್’ ಭೀಮ್ ಆರ್ಮಿಯನ್ನು ಆರಂಭಿಸಿದ್ದು 2015ರ ಜುಲೈನಲ್ಲಿ. ‘ರಾವಣ್’ ಎಂಬುದು ಖಳನಾಯಕರಂತೆ ಬಿಂಬಿಸಲ್ಪಟ್ಟ ಈ ದೇಶದ ಮೂಲನಿವಾಸಿ ಹೋರಾಟಗಾರರ ನಿಜವಾದ ಇತಿಹಾಸವನ್ನು ಎತ್ತಿತೋರುವುದಕ್ಕಾಗಿ ಬೇಕೆಂದೇ ಇಟ್ಟುಕೊಂಡ ಹೆಸರು. ಠಾಕೂರರ ಉಸಿರುಕಟ್ಟಿಸುವ ದಮನ ದಬ್ಬಾಳಿಕೆಗಳ ನಡುವೆ ತಲೆಯೆತ್ತಲು ಹೆಣಗುತ್ತಿದ್ದ ಸಹರಾನ್‍ಪುರದ ದಲಿತ ಸಮುದಾಯದೊಳಕ್ಕೆ ಅಂಬೇಡ್ಕರ್ ಚಿಂತನೆಗಳೊಂದಿಗೆ ಅವರ ತಂಡ ನುಗ್ಗಿತು. ಅತ್ಯಂತ ಸಣ್ಣ ಅವಧಿಯಲ್ಲಿ ಜನಬೆಂಬಲವನ್ನೂ, ಜನಪ್ರಿಯತೆಯನ್ನೂ ಗಳಿಸಿದ ಆಜಾದ್ ರ ಮಿಂಚಿನ ವೇಗವು ದಲಿತ ಸಮುದಾಯದಲ್ಲಿ ಐಕ್ಯತೆಯನ್ನು ತಂದಿತ್ತು. ಇದು ಬಲಾಢ್ಯ ಸಮುದಾಯಗಳ ಫ್ಯೂಡಲ್ ದೊರೆಗಳ ಮತ್ತು ಉತ್ತರ ಪ್ರದೇಶದ ಸರಕಾರಗಳ (ಈಗಿನ ಮತ್ತು ಹಿಂದಿನ) ನಿದ್ದೆ ಕೆಡಿಸಿತ್ತು. ಆದ್ದರಿಂದಲೇ, ಸುಮಾರು 24 ಗಂಭೀರ ದೋಷಾರೋಪಗಳನ್ನು ಅವರ ಮೇಲೆ ಹೊರಿಸಿತು. ಅದು ಸಾಲದೆಂದು ದೇಶದ ಭದ್ರತೆಗೇ ಅಪಾಯವಾಗುವಂತಹ ಕೆಲಸ ಮಾಡಿದ್ದಾನೆಂದು ಆರೋಪಿಸುತ್ತಾ ‘ರಾಷ್ಟ್ರೀಯ ಭದ್ರತಾ ಕಾಯ್ದೆ’ಯ ಅತಿ ಗಂಭೀರ ಆರೋಪಗಳನ್ನೂ ಬಳಸಿ 2017ರಲ್ಲಿ ಅವರನ್ನು ಜೈಲಿಗೆ ದಬ್ಬಲಾಯಿತು.

ಆದರೆ, ಈ ಸುದ್ದಿಗಳ ನಡುವೆ ಭೀಮ್ ಆರ್ಮಿಯು ತನ್ನ ಹುಟ್ಟಿನೊಂದಿಗೇನೆ ಆರಂಭಿಸಿದ ‘ಭೀಮ್ ಪಾಠ್‍ಶಾಲಾ’ಗಳ ಯಶಸ್ಸಿನ ಕಥೆ ಸ್ವಲ್ಪ ಮಸುಕಾದಂತಾಗಿದೆ. ಮೊಟ್ಟಮೊದಲ ಭೀಮ್ ಪಾಠ್‍ಶಾಲಾ 2015ರಲ್ಲಿ ಸಹರನ್‍ಪುರದ ಫತೇಪುರ್ ಭಾಡೋ ಗ್ರಾಮದಲ್ಲಿ ಆರಂಭವಾಯಿತು. ಭೀಮ್ ಆರ್ಮಿ (ಈ ಸಂಘಟನೆಯ ಪೂರ್ಣ ಹೆಸರು ‘ಭೀಮ್ ಆರ್ಮಿ ಭಾರತ್ ಏಕ್ತಾ ಮಿಶನ್’)ಯ ಸಂಸ್ಥಾಪಕರಾದ ಆಜಾದ್ ಮತ್ತು ವಿನಯ್ ರತನ್‍ರಿಗೆ ಮತ್ತು ಅವರ ಜೊತೆಗಾರರಿಗೆ ಇಂತಹ ಶಾಲೆಗಳ ಅಗತ್ಯವೇನೆಂಬುದು ನಿಚ್ಚಳವಾಗಿ ತಿಳಿದಿತ್ತು.
‘ಯಾವುದೇ ಮಗುವಿನ ಸರ್ವತೋಮುಖ ಬೆಳವಣಿಗೆಗೆ ಮೊದಲ ಹತ್ತು ವರ್ಷಗಳಲ್ಲಿ ಆ ಮಗು ಏನು ಕಲಿಯುತ್ತದೆಂಬುದು ಬಹಳ ಮುಖ್ಯ. ಆದರೆ ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳು ಅಸಹನೀಯವಾದ ಸ್ಥಿತಿಯಲ್ಲಿವೆ. ಬಹುಪಾಲು ದಲಿತ ಸಮುದಾಯ ಖಾಸಗಿ ಶಾಲೆಗಳ ದುಬಾರಿ ಶುಲ್ಕವನ್ನು ಭರಿಸುವ ಸ್ಥಿತಿಯಲ್ಲಿಲ್ಲ; ಒಂದು ವೇಳೆ ಹಾಗೆ ಖಾಸಗಿ ಶಾಲೆಗಳಿಗೆ ಕಳಿಸಿದರೂ ಜಾತಿಯ ಕಾರಣದಿಂದಾಗಿ ಅಲ್ಲಿ ಅವರಿಗೆ ಸಮಾನ ಗೌರವ ಅಥವಾ ಕಲಿಕೆ ಸಿಗುವುದಿಲ್ಲವೆಂಬುದು ಗೊತ್ತೇ ಇದೆ. ಬಾಬಾಸಾಹೇಬರು ಶಿಕ್ಷಣಕ್ಕೆ ಪ್ರಮುಖ ಸ್ಥಾನ ಕೊಟ್ಟಿದ್ದು ಸುಮ್ಮನೇ ಅಲ್ಲ. ಅದಕ್ಕಾಗಿಯೇ ನಮ್ಮ ಸಂಘಟನೆಯ ಮೊದಲ ಮತ್ತು ಆದ್ಯತೆಯ ಕೆಲಸವಾಗಿ ನಾವು ಆರಂಭಿಸಿದ್ದು ಉಚಿತವಾಗಿ ಉತ್ತಮ ಕಲಿಕೆಯನ್ನು ರೂಪಿಸುವ ‘ಭೀಮ್ ಪಾಠ್‍ಶಾಲಾ’ಗಳನ್ನು’ ಎನ್ನುತ್ತಾರೆ ಸಿಂಗ್.

ಈ ಶಾಲೆಗಳಲ್ಲಿ ಮಕ್ಕಳು ಪಠ್ಯ ವಿಷಯಗಳಾದ ಗಣಿತ, ವಿಜ್ಞಾನ, ಇಂಗ್ಲೀಷ್ ಮೊದಲಾದವುಗಳ ಜೊತೆಗೆ, ಇತಿಹಾಸದ ಪುಟಗಳಲ್ಲಿ ಹೂತುಹೋಗಿರುವ ದಲಿತ ಸಮುದಾಯದ ಚರಿತ್ರೆಯನ್ನೂ, ಶೋಷಿತರ ವಿಮೋಚನೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿಗಳ ಜೀವನ ಚಿತ್ರಣಗಳನ್ನೂ, ಅಂಬೇಡ್ಕರ್‍ರವರ ಚಿಂತನೆಗಳನ್ನೂ ಕಲಿಯುತ್ತಾರೆ. ಆರಂಭದಲ್ಲಿ ಸಹರನ್‍ಪುರದ ಸುತ್ತಲಿನ ಪ್ರದೇಶದಲ್ಲಷ್ಟೇ ಸಂಜೆಯ ಕೋಚಿಂಗ್ ತರಗತಿಗಳಾಗಿ 2 ಗಂಟೆಗಳ ಕಾಲ ನಡೆಯುತ್ತಿದ್ದ ಈ ಶಾಲೆಗಳು ಬಹಳ ವೇಗವಾಗಿ ಮೀರಟ್, ಮುಜಫ್ಫರ್‍ನಗರ್, ಆಗ್ರಾ ಮೊದಲಾದೆಡೆಗಳಿಗೂ ವ್ಯಾಪಿಸಿದವು. ಇಂದು ಸುಮಾರು 350ರಷ್ಟು ‘ಭೀಮ್ ಪಾಠ್‍ಶಾಲಾ’ಗಳು ಕಾರ್ಯನಿರ್ವಹಿಸುತ್ತಿದ್ದು ಸಾವಿರದ ಸಂಖ್ಯೆಯನ್ನು ಮುಟ್ಟುವ ದಿಕ್ಕಿನಲ್ಲಿ ಮುನ್ನಡೆಯುತ್ತಿವೆ.

ಮೊದಲ ಶಾಲೆ ಫತೇಪುರದಲ್ಲಿ ಆರಂಭವಾಗುತ್ತಿದ್ದಂತೆ ಬುಢಖೇರಾದ ದಲಿತ ಯುವಕರಿಗೆ ತಮ್ಮಲ್ಲೂ ಇಂತಹ ಶಾಲೆ ಬೇಕೆಂದೆನಿಸಿತು. ನಿವೃತ್ತ ಶಿಕ್ಷಕ ಕನ್ವರ್ ಪಾಲ್ ಸಿಂಗ್‍ರವರ ಮನೆಯೆದುರಿನ ಖಾಲಿ ಬಯಲೇ ಶಾಲಾ ಆವರಣವಾದರೆ ಆಗಷ್ಟೇ 10ನೇ ತರಗತಿ ಮುಗಿಸಿದ್ದ 15 ವರ್ಷದ ಸಿಂಗ್‍ರವರ ಕಿರಿಯ ಪುತ್ರಿ ನಿಶಾ ಆ ಭೀಮ್ ಶಾಲೆಯ ಮೊದಲ ಬೋಧಕಿಯಾದಳು. ಮೊದಲ ದಿನ 30 ಇದ್ದ ಮಕ್ಕಳ ಸಂಖ್ಯೆ ಕೇವಲ 2 ವಾರಗಳಲ್ಲಿ 100ರ ಸಂಖ್ಯೆಯನ್ನೂ ದಾಟಿ ಹಿಗ್ಗುತ್ತಾ ಹೋಗಿ ಶಾಲೆಯನ್ನು ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಬೇಕಾದ ಅನಿವಾರ್ಯತೆ ಸೃಷ್ಟಿಸಿತು. ಈಗ ಶಾಲೆಯಲ್ಲಿ 200ಕ್ಕೂ ಹೆಚ್ಚು ಮಕ್ಕಳು 1-4 ಹಾಗೂ 5-9ರವರೆಗಿನ ವಿಭಾಗಗಳಲ್ಲಿ ನಿರಂತರ ಕಲಿಕೆಯಲ್ಲಿದ್ದಾರೆ.

ಇದೇ ಶಾಲೆಯ ಹಿರಿಯ ವಿದ್ಯಾರ್ಥಿನಿ ರಚನಾ, ತನ್ನ ಔಪಚಾರಿಕ ಖಾಸಗಿ ಶಾಲೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತರಗತಿಗೆ ಮೊದಲ ಸ್ಥಾನ ಗಳಿಸಿ ಆಜಾದ್ ರವರಿಂದ ಬಹುಮಾನ ಪಡೆದಿರುವುದನ್ನು ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತಾಳೆ. ರಚನಾ ಕೂಲಿಕಾರ್ಮಿಕರಾದ ತನ್ನ ತಂದೆತಾಯಿಯರ 7 ಮಂದಿ ಮಕ್ಕಳಲ್ಲಿ ಒಬ್ಬಳು. ‘ಭೀಮ್ ಆರ್ಮಿಯೊಂದಿಗೆ ಗುರುತಿಸಿಕೊಂಡಿರುವುದರಿಂದ ನಾವು ದಲಿತ ಹೆಣ್ಣುಮಕ್ಕಳು ಇಂದು ಲೈಂಗಿಕ ದೌರ್ಜನ್ಯಗಳ ಭೀತಿಯಿಲ್ಲದೆ ಸೈಕಲ್ ತುಳಿದುಕೊಂಡು ಶಾಲೆಗೆ ಹೋಗಲು ಸಾಧ್ಯವಾಗುತ್ತಿದೆ. ನಾನು ಜೀವಶಾಸ್ತ್ರ ಕಲಿತು ಮುಂದೆ ವೈದ್ಯೆಯಾಗಬೇಕು, ನೊಂದವರಿಗಾಗಿ ಉಚಿತ ಚಿಕಿತ್ಸಾಲಯಗಳನ್ನು ತೆರೆಯಬೇಕು’ ಎಂಬ ಕನಸು ಕಾಣುವುದು ರಚನಾಗೆ ಈಗ ಸಾಧ್ಯವಾಗಿದೆ. ಆಕೆಯು ಭೀಮಶಾಲೆಯ ಮತ್ತೊಬ್ಬ ಸ್ವಯಂಸೇವಕ ಬೋಧಕಿ!

ಈ ಅನೌಪಚಾರಿಕ ಶಾಲೆಗಳು ದಲಿತ ಸ್ವಾಭಿಮಾನದ, ಅರಿವಿನ ಮತ್ತು ಐಕ್ಯತೆಯ ಪ್ರತೀಕಗಳಾಗಿ ಛಾಪು ಮೂಡಿಸುತ್ತಾ ವಿಸ್ತರಣೆಗೊಳ್ಳುತ್ತಲೇ ಹೋಗುತ್ತಿವೆ.
ಶೋಷಿತರ ಸ್ವಾಭಿಮಾನದ ಚಳವಳಿಗಳಿಗೆ ಶಿಕ್ಷಣವು ಕೇವಲ ಅನ್ನದ ಮಾರ್ಗ ಮಾತ್ರವಲ್ಲ; ಸಮಾಜ ಪರಿವರ್ತನೆಯ ಮಾರ್ಗ. ಶೋಷಿತ ಸಮುದಾಯಗಳು ತಮ್ಮದೇ ಆದ ಸಾಮಾಜಿಕ ಸಾಂಸ್ಕøತಿಕ ಗುರುತನ್ನು ಗಳಿಸಿಕೊಳ್ಳುವ ಮತ್ತು ಉಳಿಸಿಕೊಳ್ಳುವ ಮಾರ್ಗ. ಆದ್ದರಿಂದಲೇ ರಷ್ಯಾ ಕ್ರಾಂತಿಯ ನಂತರ ಲೆನಿನ್ ತಮ್ಮ ಭಾಷಣವೊಂದರಲ್ಲಿ “ರಷ್ಯಾದ ದುಡಿಯುವ ಜನತೆಯ ಶೇ.90ಕ್ಕಿಂತ ಹೆಚ್ಚು ಮಂದಿ ಶಿಕ್ಷಣ ಪಡೆದಿಲ್ಲ; ಆದರೆ, ಬಂಡವಾಳಶಾಹಿಗಳ ಮೇಲೆ ವಿಜಯ ಸಾಧಿಸಲು ತಮಗೆ ಅದು ಬೇಕೇಬೇಕು ಎಂಬುದನ್ನು ಅರಿತಿದ್ದಾರೆ. ಇಲ್ಲಿ ಶಿಕ್ಷಣ ಕೇವಲ ಅಕ್ಷರ ಜ್ಞಾನವಲ್ಲ, ಹೊಸ ಮಾನವರ ಹುಟ್ಟು” ಎನ್ನುತ್ತಾರೆ. ಇದೇ ಮಾದರಿಯಲ್ಲಿ ಭೀಮ್ ಪಾಠಶಾಲೆಯ ಪ್ರಯೋಗ ಏಕಕಾಲದಲ್ಲಿ ರಚನಾತ್ಮಕವಾದದ್ದೂ ಹಾಗೂ ಅತ್ಯಂತ ರಾಜಕೀಯವಾದದ್ದೂ ಹೌದು.

ಛತ್ತೀಸ್‍ಗಢದಲ್ಲಿ ಹೋರಾಟ ಮತ್ತು ರಚನಾತ್ಮಕ ಕೆಲಸಗಳು ಜೊತೆಜೊತೆಯಾಗಿ ಸಾಗಬೇಕಿರುವ ಕುರಿತು ಛತ್ತೀಸ್‍ಗಡ ಮುಕ್ತಿ ಮೋರ್ಚಾದ ಸಂಸ್ಥಾಪಕ ಶಂಕರ್ ಗುಹಾ ನಿಯೋಗಿ ‘ಸಂಘರ್ಷ್ ಔರ್ ನಿರ್ಮಾಣ್’ ಎಂದು ಸೂತ್ರೀಕರಿಸಿದ್ದರು. ಶಹೀದ್ ಶಾಲೆಗಳು ಮತ್ತು ಶಹೀದ್ ಆಸ್ಪತ್ರೆಗಳು ಇಂದಿಗೂ ಮಾದರಿ ಸಂಸ್ಥೆಗಳಾಗಿವೆ. ಮಹಾರಾಷ್ಟ್ರದಲ್ಲಿ ಅನೂಪ್ ವಾರ್ಧಾರವರು ನಡೆಸುತ್ತಿರುವ ನಳಂದ ಅಕಾಡೆಮಿಯ ಪ್ರಯೋಗದ ಕುರಿತು, ಅವರ ಸಂದರ್ಶನದ ಮೂಲಕ ಓದುಗರಿಗೆ ‘ಪತ್ರಿಕೆ’ ತಿಳಿಸಿತ್ತು.

ಬಹುಶಃ ಸಂಘರ್ಷ್ ಔರ್ ನಿರ್ಮಾಣ್‍ಗಳು ಇಂದು ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿವೆ. ಈ ತಲೆಮಾರಿನ ಯುವಜನರನ್ನು ಒಳಗೊಂಡು, ಮಕ್ಕಳು ಕುಟುಂಬ ಎಲ್ಲರನ್ನೂ ಜೊತೆಗೊಯ್ಯಬಲ್ಲ ಹೋರಾಟದ ಮಾದರಿಗಳು ಹೆಚ್ಚೆಚ್ಚು ಜನರನ್ನೂ ತಲುಪುತ್ತವೆ ಹಾಗೂ ಇದರ ಪ್ರಭಾವ ಹಾಗೂ ಪರಿಣಾಮ ದೂರಗಾಮಿಯಾದದ್ದೂ ಆಗಿರುತ್ತದೆ. ಇದನ್ನು ಭೀಮ್‍ಆರ್ಮಿ ತಂಡವು ಚೆನ್ನಾಗಿಯೇ ಮನಗಂಡಿದೆ. ಅವರಿಗೊಂದು ಜೈಭೀಮ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...