Homeಮುಖಪುಟಪೊಲೀಸ್ ಚಿತ್ರಹಿಂಸೆ ಆರೋಪಿಸಿ ಯುವಕ ಆತ್ಮಹತ್ಯೆ ಪ್ರಕರಣ : ತನಿಖೆಗೆ ಆದೇಶ

ಪೊಲೀಸ್ ಚಿತ್ರಹಿಂಸೆ ಆರೋಪಿಸಿ ಯುವಕ ಆತ್ಮಹತ್ಯೆ ಪ್ರಕರಣ : ತನಿಖೆಗೆ ಆದೇಶ

- Advertisement -
- Advertisement -

ಪೊಲೀಸ್ ಕಸ್ಟಡಿಯಲ್ಲಿ ಚಿತ್ರ ಹಿಂಸೆ ನೀಡಲಾಗಿದೆ ಎಂದು ಆರೋಪಿಸಿ ಬಿಲ್ಲಾವರ್‌ನ ಗುಜ್ಜರ್ ಯುವಕ  ಮಖಾನ್ ದೀನ್ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಐದು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕಥುವಾ ಉಪ ಆಯುಕ್ತ ರಾಕೇಶ್ ಮಿನ್ಹಾಸ್ ಅವರು ಲೋಹೈ ಮಲ್ಹಾರ್ ತಹಶೀಲ್ದಾರ್ ಅನಿಲ್ ಕುಮಾರ್ ಅವರಿಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಬಗ್ಗೆ ಉಪ ಪೊಲೀಸ್ ಮಹಾನಿರ್ದೇಶಕ (ಕಥುವಾ-ಸಾಂಬಾ-ಜಮ್ಮು ಶ್ರೇಣಿ) ಶಿವಕುಮಾರ್ ನೇತೃತ್ವದಲ್ಲಿ ಇಲಾಖಾ ತನಿಖೆಗೂ ಜಮ್ಮು ಕಾಶ್ಮೀರ ಪೊಲೀಸ್‌ ಇಲಾಖೆ ಆದೇಶಿಸಿದೆ. ಯಾವುದೇ ಗಡುವನ್ನು ನಿರ್ದಿಷ್ಟಪಡಿಸದೆ ಸಾಧ್ಯವಾದಷ್ಟು ಬೇಗ ತನಿಖೆ ಪೂರ್ಣಗೊಳಿಸಲಾಗುವುದು ಎಂದಿದೆ.

ಕಸ್ಟಡಿ ಹತ್ಯೆ ಎಂದೇ ಆರೋಪಿಸಲಾದ ಯುವಕನ ಆತ್ಮಹತ್ಯೆಯನ್ನು ಜಮ್ಮು ಕಾಶ್ಮೀರದ ನಾಗರಿಕ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಆತ್ಮಹತ್ಯೆ ಮಾಡಿಕೊಂಡ ಬುಡಕಟ್ಟು ಯುವಕನಿಗೆ ನ್ಯಾಯ ದೊರಕಿಸಿಕೊಡುವಂತೆ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೇತೃತ್ವದಲ್ಲಿ ದೊಡ್ಡ ಮಟ್ಟದ ಆಗ್ರಹ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಮೆಹಬೂಬಾ ಮುಫ್ತಿ, “ಮಖಾನ್ ದೀನ್ ಅವರನ್ನು ಕ್ರೂರವಾಗಿ ಥಳಿಸಿ ಚಿತ್ರಹಿಂಸೆ ನೀಡಲಾಗಿದೆ. ತಪ್ಪೊಪ್ಪಿಗೆ ನೀಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದಿದ್ದಾರೆ.

ಫೆಬ್ರವರಿ 6ರಂದು ಎಕ್ಸ್‌ನಲ್ಲಿ ಹಾಕಿದ್ದ ಪೋಸ್ಟ್‌ನಲ್ಲಿ ಮೆಹಬೂಬಾ ಮುಫ್ತಿ “ಕಥುವಾದಿಂದ ಆಘಾತಕಾರಿ ಸುದ್ದಿ : ಬಿಲ್ಲಾವರ್‌ನ ಪೆರೋಡಿಯ 25 ವರ್ಷದ ಮಖಾನ್ ದೀನ್ ಅವರನ್ನು ಬಿಲ್ಲಾವರ್ ಎಸ್‌ಹೆಚ್‌ಒ ಅವರು ಓವರ್ ಗ್ರೌಂಡ್ ವರ್ಕರ್ (ಒಜಿಡಬ್ಲ್ಯು) ಎಂಬ ಸುಳ್ಳು ಆರೋಪದ ಮೇಲೆ ಬಂಧಿಸಿದ್ದರು. ಬಳಿಕ ಆತನಿಗೆ ಕ್ರೂರವಾಗಿ ಥಳಿಸಿ, ಚಿತ್ರಹಿಂಸೆ ನೀಡಿ ಬಲವಂತವಾಗಿ ತಪ್ಪೊಪ್ಪಿಗೆ ಪತ್ರ ಬರೆಯಿಸಲಾಗಿದೆ. ದುರಂತ ಎಂಬಂತೆ ಇಂದು ಮಖಾನ್ ದೀನ್ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಆ ಪ್ರದೇಶವನ್ನು (ಕಥುವಾ) ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ. ಇದು ಭಾರೀ ಆತಂಕಕ್ಕೆ ಕಾರಣವಾಗಿದೆ. ನಿರಂತರ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಚ್ಚಿನ ಜನರನ್ನು ಬಂಧಿಸಲಾಗುತ್ತಿದೆ. ಈ ಘಟನೆಯು ಸುಳ್ಳು ಆರೋಪಗಳ ಮೇಲೆ ಮುಗ್ಧ ಯುವಕರನ್ನು ಗುರಿಯಾಗಿಸಿದಂತೆ ತೋರುತ್ತಿದೆ. ಈ ಕುರಿತು ತಕ್ಷಣ ತನಿಖೆ ಕೈಗೊಳ್ಳುವಂತೆ ನಾನು ಜಮ್ಮು ಕಾಶ್ಮೀರ ಡಿಜಿಪಿಗೆ ಒತ್ತಾಯಿಸುತ್ತಿದ್ದೇನೆ” ಎಂದಿದ್ದರು

ಕಥುವಾ ಮತ್ತು ಅದರ ಪಕ್ಕದ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆದ ಕೆಲವು ಉಗ್ರಗಾಮಿ ಸಂಬಂಧಿತ ಘಟನೆಗಳಲ್ಲಿ ಮಖಾನ್ ದೀನ್ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ಈ ವಾರದ ಆರಂಭದಲ್ಲಿ ಕಥುವಾ ಪೊಲೀಸರು ಅವರನ್ನು ಬಂಧಿಸಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬುಧವಾರ (ಫೆ.5) ಸಂಜೆ ಸಾವಿಗೂ ಮುನ್ನ ರೆಕಾರ್ಡ್ ಮಾಡಲಾದ ವಿಡಿಯೋದಲ್ಲಿ ಮಖಾನ್ ದೀನ್ ತಲೆಯ ಮೇಲೆ ಪವಿತ್ರ ಕುರಾನ್ ಪ್ರತಿಯನ್ನು ಹಿಡಿದು, ಇಸ್ಲಾಮಿಕ್ ಶುಭಾಶಯಗಳನ್ನು ವ್ಯಕ್ತಪಡಿಸುತ್ತಿರುವುದು ಮತ್ತು ಜಮ್ಮು ಪ್ರದೇಶದಲ್ಲಿ ಹಲವಾರು ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದಾನೆಂದು ಆರೋಪಿಸಲಾದ ಸಕ್ರಿಯ ಉಗ್ರಗಾಮಿ ಸ್ವರ್ ದೀನ್ ಅಲಿಯಾಸ್ ಸ್ವರು ಗುಜ್ಜರ್‌ನನ್ನು ನೋಡಿಲ್ಲ ಎಂದು ಪ್ರಮಾಣ ಮಾಡುತ್ತಿರುವುದು ಇದೆ.

ಬುಧವಾರ ಸಂಜೆ ಪೊಲೀಸರು ಮಖಾನ್ ದೀನ್ ಅವರನ್ನು ಬಂಧನದಿಂದ ಬಿಡುಗಡೆ ಮಾಡಿ, ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದರೆಂದು ಹೇಳಲಾದ ಫೋನ್ ತರಲು ಸೂಚಿಸಿದ್ದರು. ಅವರೊಂದಿಗೆ ಯಾರಾದರು ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಲಾಗಿತ್ತೋ ಎಂಬುವುದು ತಿಳಿದು ಬಂದಿಲ್ಲ.

“ನಾನು ಬೇರೆ ಫೋನ್ ಬಳಸಿ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದೆ ಎಂದು ಪೊಲೀಸರಿಗೆ ಸುಳ್ಳು ಹೇಳಿದ್ದೇನೆ. ನನಗೆ ಕ್ರೂರವಾಗಿ ಹೊಡೆಯುತ್ತಿದ್ದರು. ಅದರಿಂದ ತಪ್ಪಿಸಿಕೊಳ್ಳಲು ಸುಮ್ಮನೆ ಸುಳ್ಳು ಕಥೆ ಹೇಳಿದ್ದೆ. ಪೊಲೀಸರು ಈಗ ಆ ಫೋನ್ ತರಲು ನನಗೆ ಸೂಚಿಸಿದ್ದಾರೆ. ನಾನು ಯಾವುದೇ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿ ಇಲ್ಲ. ಹೀಗಿರುವಾಗ, ಅವರನ್ನು ಸಂಪರ್ಕಿಸಿದ ಫೋನ್ ಎಲ್ಲಿಂದ ತರಲಿ? ಎಂದು ಸಾವಿಗೂ ಮುನ್ನ ಮಾಡಿದ ವಿಡಿಯೋದಲ್ಲಿ ಮಖಾನ್ ದೀನ್ ಅಳಲು ತೋಡಿಕೊಂಡಿದ್ದರು.

ಮುಂದುವರಿದು, “ನಾನು ಚಿಕ್ಕವನಿದ್ದಾಗ, ಬಹುಶಃ ಹಾಗೆ ಮಾಡಿರಬಹುದು. ಆದರೆ, ಯಾರು ಹೇಗೆ ಎಂದು ನನಗೆ ತಿಳಿದಾಗಿನಿಂದ ನಾನು ಯಾವುದೇ ಉಗ್ರಗಾಮಿಯನ್ನು ನೋಡಿಲ್ಲ. ನಾನು ಎಂದಿಗೂ ಪೊಲೀಸರಿಗೆ ದ್ರೋಹ ಮಾಡುವುದಿಲ್ಲ ಎಂದು ಶಫಿ ಭಾಯ್‌ಗೆ ಭರವಸೆ ನೀಡಿದ್ದೇನೆ. ನಾನು ನನ್ನ ಭರವಸೆಯನ್ನು ಉಳಿಸಿಕೊಂಡಿದ್ದೇನೆ” ಎಂದು ಎಂದಿದ್ದರು.

ಮಖಾನ್ ದೀನ್ ಅವರು ಉಗ್ರಗಾಮಿ ಎಂದು ಹೇಳಲಾದ ಸ್ವರು ಗುಜ್ಜರ್ ಅವರ ಸೋದರಳಿಯ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ಬದ್ನೋಟಾ ಪ್ರದೇಶದಲ್ಲಿ ಸೇನಾ ಬೆಂಗಾವಲು ಪಡೆಯ ಮೇಲೆ ಹೊಂಚು ಹಾಕಿ ದಾಳಿ ನಡೆಸಿದ್ದ ಉಗ್ರರ ಗುಂಪಿನೊಂದಿಗೆ ಈತ ಸಂಪರ್ಕ ಹೊಂದಿದ್ದ ಎಂದು ಆರೋಪಿಸಲಾಗಿದೆ. ಈ ದಾಳಿಯಲ್ಲಿ ಜೂನಿಯರ್ ಕಮಿಷನರ್ ಅಧಿಕಾರಿ ಸೇರಿದಂತೆ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದರು.

“ಕೊಹಾಗ್ ಕಾರ್ಯಾಚರಣೆಯಲ್ಲಿ ಹೆಚ್‌ಸಿ ಬಶೀರ್ ಅವರ ಸಾವಿಗೆ ಕಾರಣವಾದ ಗುಂಪು ಇದೇ ಆಗಿದೆ. ಮಖಾನ್‌ಗೆ ಪಾಕಿಸ್ತಾನ ಮತ್ತು ಇತರ ವಿದೇಶಗಳಲ್ಲಿ ಹಲವಾರು ಅನುಮಾನಾಸ್ಪದ ಸಂಪರ್ಕಗಳಿದ್ದವು. ಯಾವುದೇ ಕಸ್ಟಡಿ ಚಿತ್ರಹಿಂಸೆ ಅಥವಾ ಹಲ್ಲೆ ಆಗಿಲ್ಲ. ಮಖಾನ್ ಅವರನ್ನು ವಿಚಾರಣೆಗೆ ಒಳಪಡಿಸಿ, ಬಿಟ್ಟು ಕಳುಹಿಸಲಾಗಿದೆ. ಆತನ ಮನೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂಬ ಮೆಹಬೂಬಾ ಮುಫ್ತಿ ಅವರ ಆರೋಪಗಳನ್ನು ‘ಆಧಾರರಹಿತ ಮತ್ತು ದಾರಿತಪ್ಪಿಸುವ’ ಹೇಳಿಕೆ ಎಂದಿದ್ದಾರೆ.

ಪೂಂಚ್‌ನ ನಾರ್ ಗ್ರಾಮದ ನಿವಾಸಿ, ಉಗ್ರಗಾಮಿ ದಾಳಿ ಸಂಬಂಧ ವಿಚಾರಣೆಗೆ ಕರೆಯಲ್ಪಟ್ಟಿದ್ದ 50 ವರ್ಷದ ಮುಖ್ತಾರ್ ಹುಸೇನ್ ಶಾ ಎಂಬಾತ ಏಪ್ರಿಲ್ 27, 2023ರಂದು ವಿಷ ಸೇವಿಸಿ ಸಾವನ್ನಪ್ಪಿದ್ದರು. ಅದಾಗಿ, ಎರಡು ವರ್ಷಗಳ ಒಳಗೆ ಈ ಘಟನೆ ನಡೆದಿದೆ. ಮುಖ್ತಾರ್ ಹುಸೇನ್ ಶಾ ಕೂಡ ಸಾವಿಗೂ ಮುನ್ನ 9 ನಿಮಿಷ 45 ಸೆಕೆಂಡುಗಳ ವೀಡಿಯೊವನ್ನು ರೆಕಾರ್ಡ್ ಮಾಡಿದ್ದರು.

“ನನಗೆ ಸೇನೆ, ಪೊಲೀಸರು ಅಥವಾ ಯಾವುದೇ ಗ್ರಾಮಸ್ಥರಿಂದ ಯಾವುದೇ ಒತ್ತಡವಿಲ್ಲ. ನನ್ನ ಕುಟುಂಬ ಮತ್ತು ನೆರೆಹೊರೆಯವರು ಎದುರಿಸುತ್ತಿರುವ ಚಿತ್ರ ಹಿಂಸೆಯಿಂದಾಗಿ ನನ್ನ ಧರ್ಮವು ನಿಷೇಧಿಸಿರುವ ಆತ್ಮಹತ್ಯೆ ಮೂಲಕ ನನ್ನ ಪ್ರಾಣವನ್ನು ನಾನು ತೆಗೆದುಕೊಳ್ಳುತ್ತಿದ್ದೇನೆ…ನನಗೆ ಏನೂ ತಿಳಿದಿಲ್ಲ” ಎಂದು ಶಾ ವಿಡಿಯೋದಲ್ಲಿ ಹೇಳಿದ್ದರು. ವಿಡಿಯೋ ಮಾಡುವ ವೇಳೆ ಕೀಟನಾಶಕದ ಬಾಟಲಿಯನ್ನು ಹೊಂದಿದ್ದ ಸಣ್ಣ ಪಾಲಿಥಿನ್ ಚೀಲವನ್ನು ಕೈಯಲ್ಲಿ ಹಿಡಿದುಕೊಂಡಿದ್ದರು.

ಫೆಬ್ರವರಿ 6ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ, “ಕಳೆದ 24 ಗಂಟೆಗಳಲ್ಲಿ ಬಾರಾಮುಲ್ಲಾ ಮತ್ತು ಕಥುವಾದಲ್ಲಿ ಇಬ್ಬರು ನಾಗರಿಕರ ಸಾವುಗಳ ವಿಷಯವನ್ನು ಗಮನಿಸಿದ್ದೇನೆ. ಒಬ್ಬರು ಸೇನೆಯ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದು ಅತ್ಯಂತ ದುರದೃಷ್ಟಕರ. ಈ ಘಟನೆಗಳು ನಡೆಯಬಾರದಿತ್ತು ಎಂದು ಬರೆದುಕೊಂಡಿದ್ದರು.

ಮುಂದುವರಿದು, “ಸ್ಥಳೀಯ ಜನರ ಸಹಕಾರ ಮತ್ತು ಪಾಲುದಾರಿಕೆ ಇಲ್ಲದೆ ಜಮ್ಮು ಕಾಶ್ಮೀರ ಎಂದಿಗೂ ಸಂಪೂರ್ಣವಾಗಿ ಸಹಬದಿಗೆ ಬರಲು ಮತ್ತು ಭಯೋತ್ಪಾದನೆ ಮುಕ್ತವಾಗಲು ಸಾಧ್ಯವಿಲ್ಲ. ಈ ರೀತಿಯ ಘಟನೆಗಳು ಸಾಮಾನ್ಯ ಸ್ಥಿತಿಗೆ ಮರಳಲು ನಾವು ನಮ್ಮೊಂದಿಗೆ ಕೊಂಡೊಯ್ಯಬೇಕಾದ ಜನರನ್ನೇ ದೂರವಿಡುವ ಅಪಾಯವನ್ನುಂಟುಮಾಡುತ್ತವೆ. ನಾನು ಈ ಘಟನೆಗಳನ್ನು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿದ್ದೇನೆ ಮತ್ತು ಎರಡೂ ಘಟನೆಗಳನ್ನು ಸಮಯಕ್ಕೆ ಅನುಗುಣವಾಗಿ, ಪಾರದರ್ಶಕ ರೀತಿಯಲ್ಲಿ ತನಿಖೆ ಮಾಡಬೇಕೆಂದು ಒತ್ತಾಯಿಸಿದ್ದೇನೆ. ಜಮ್ಮು ಕಾಶ್ಮೀರ ಸರ್ಕಾರವು ತನ್ನದೇ ಆದ ವಿಚಾರಣೆಗೆ ಆದೇಶಿಸಿದೆ ಎಂದು ತಿಳಿಸಿದ್ದರು.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನ್ಯಾಯಾಲಯದಲ್ಲೇ ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದುತ್ವ ಸಂಘಟನೆ ದುಷ್ಕರ್ಮಿಗಳು! : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...