ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಬಹರಂಪುರದಿಂದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಯೂಸುಫ್ ಪಠಾಣ್ ಸ್ಪರ್ಧಿಸಲಿದ್ದು, ಪ್ರಸ್ತುತ ಕಾಂಗ್ರೆಸ್ನ ಅಧೀರ್ ರಂಜನ್ ಚೌಧರಿ ಅವರು ಬಹರಂಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಬಹರಂಪುರಕ್ಕೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಹೆಸರಿಸದಿದ್ದರೂ, ಅಧೀರ್ ರಂಜನ್ ಚೌಧರಿ ಅವರು ಲೋಕಸಭೆಯಲ್ಲಿ ಐದು ಬಾರಿ ಪ್ರತಿನಿಧಿಸಿರುವ ಬಹರಂಪುರ ಕ್ಷೇತ್ರದಲ್ಲಿ ಮರುಸ್ಪರ್ಧೆ ಮಾಡುವ ಸಾಧ್ಯತೆಯಿದೆ.
ನಗರದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆಯುವ ಟಿಎಂಸಿಯ ಬೃಹತ್ ರ್ಯಾಲಿ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭ್ಯರ್ಥಿಗಳ ಹೆಸರು ಘೋಷಿಸಲಿದ್ದಾರೆ. ಇದರೊಂದಿಗೆ ಟಿಎಂಸಿಯ ಚುನಾವಣಾ ಪ್ರಚಾರವೂ ಆರಂಭವಾಗಲಿದೆ ಎಂದು ಈ ಮೊದಲು ಹೇಳಲಾಗಿತ್ತು. ಪಶ್ಚಿಮ ಬಂಗಾಳದ 42 ಲೋಕಸಭೆ ಸ್ಥಾನಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪ್ರಕಟಿಸಲಿದ್ದಾರೆ ಎಂದು ಟಿಎಂಸಿ ಹೇಳಿಕೆ ಬಿಡುಗಡೆ ಮಾಡಿತ್ತು. ಟಿಎಂಸಿ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಸಾರ್ವಜನಿಕ ಸಾಮಾವೇಶದ ಮೂಲಕ ಘೋಷಿಸುತ್ತಿರುವುದು ಇದೇ ಮೊದಲು. ವಿವಿಧ ಜಿಲ್ಲೆಗಳಿಂದ ಬಂದಿರುವ ಲಕ್ಷಾಂತರ ಬೆಂಬಲಿಗರು ಹಾಗೂ ಕಾರ್ಯಕರ್ತರು, ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಯೂಸುಫ್ ಪಠಾಣ್ ಅವರು ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರರಾಗಿದ್ದು, ಅವರು ದೇಶೀಯ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಆಡಿದ್ದರು. 2007ರಲ್ಲಿ ಚೊಚ್ಚಲ T20 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು ಮತ್ತು 2011ರ ODI ವಿಶ್ವಕಪ್ನಲ್ಲಿ ಸ್ವದೇಶದಲ್ಲಿ ಜಯಗಳಿಸಿದ ತಂಡದ ಭಾಗವಾಗಿದ್ದರು. ಯೂಸುಫ್ ಪಠಾಣ್ 57 ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಆಡಿದ್ದು, 22 T20Iಗಳಲ್ಲಿ ಆಡಿದ್ದರು ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸಿದ್ದರು.
ಇದನ್ನು ಓದಿ: ಬಿಜೆಪಿಯಿಂದ ಸ್ಪರ್ಧಿಸಲು ಗೋಯಲ್ ರಾಜೀನಾಮೆ ನೀಡಿರಬಹುದು: ಜೈರಾಮ್ ರಮೇಶ್