Homeಸಾಮಾಜಿಕಉಸಿರು ಕಟ್ಟಿಸುವ ಹೊಗೆ: ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ

ಉಸಿರು ಕಟ್ಟಿಸುವ ಹೊಗೆ: ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ

- Advertisement -
- Advertisement -

ಡಾ.ಎಚ್.ಎಸ್.ಅನುಪಮ |

೨೦೧೮ರ ನವೆಂಬರ್ ಕೊನೆಯ ವಾರ ಭಾರತಕ್ಕೆ ಬಂದಿದ್ದ ಟ್ವಿಟರ್ ಸಿಇಒ ಜಾಕ್ ಡಾರ್ಸ್ ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ನಾಶವಾಗಲಿ’ (ಸ್ಮಾಷ್ ಬ್ರಾಹ್ಮಿನಿಕಲ್ ಪೇಟ್ರಿಯಾರ್ಕಿ) ಎಂಬ ಪೋಸ್ಟರನ್ನು ಕೈಲಿ ಹಿಡಿದು ಕೆಲವು ಭಾರತೀಯ ಪತ್ರಕರ್ತೆಯರ ಜೊತೆ ಫೋಟೋಗೆ ನಿಂತರು. ಈ ನೆಲದ ಎಲ್ಲ ವಿಕಾರ-ವಿಪರ್ಯಾಸಗಳ ಮೂಲಕಾರಣವಾಗಿರುವ, ವಿಶ್ವದ ಯಾವ ಸಮಾಜವೂ ಕೇಳರಿಯದಷ್ಟು ಅನಿರ್ಬಂಧಿತ, ಏಕಮುಖಿ ಅಧಿಕಾರ-ಸುಖಸವಲತ್ತನ್ನು ಬ್ರಾಹ್ಮಣರಿಗೆ, ಎಲ್ಲ ಪುರುಷರಿಗೆ ನೀಡಿರುವ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಕುರಿತು ಜಾಕ್‌ಗೆ ಗೊತ್ತಿತ್ತೋ ಇಲ್ಲವೋ, ಆದರೆ ಪೋಸ್ಟರ್ ಹಿಡಿದು ನಿಂತ ಫೋಟೋ ನೋಡಿದ್ದೇ ತಡ, ದಾರವಂತರು ಕೆರಳಿಹೋದರು. ಅಂಕಣಕಾರ್ತಿ ಸ್ಮಿತಾ ಬರೂವಾ, ಮಣಿಪಾಲ ಸಮೂಹ ಸಂಸ್ಥೆಗಳ ಮೋಹನದಾಸ ಪೈ, ಬಾಲಿವುಡ್ ಚಿತ್ರಕತೆಗಾರರಾದ ಅದ್ವೈತ್ ಕಲಾ, ರಿಪಬ್ಲಿಕ್ ಟಿವಿಯ ಚಿತ್ರಾ ಸುಬ್ರಹ್ಮಣಿಯನ್, ಲೇಖಕ ಹಿಂದೋಳ್ ಸೇನ್‌ಗುಪ್ತ ಮೊದಲಾದವರು ಈ ಘಟನೆಯನ್ನು ‘ಜನಾಂಗ ದ್ವೇಷ’, ‘ಜಾತಿ ನಿಂದನೆ’ ಎನ್ನುವಂತೆ ಬಿಂಬಿಸಿದರು. ಭಾರತೀಯ ಪತ್ರಿಕೋದ್ಯಮದ 49% ಉಚ್ಛ ಸ್ಥಾನಗಳನ್ನು ತುಂಬಿರುವ ‘ಅಲ್ಪಸಂಖ್ಯಾತ’ ಬ್ರಾಹ್ಮಣರು ಹಾಗೂ ಅನಿವಾಸಿ ಜಾಲಿಗ ಬ್ರಾಹ್ಮಣರು ಟ್ವಿಟರಿನಲ್ಲಿ ಧೂಳೆಬ್ಬಿಸಿ, ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎನ್ನುವುದೆಲ್ಲ ಸ್ತ್ರೀವಾದಿಗಳ ಕುತರ್ಕ, ಎಲ್ಲಿದೆ ಅವೆಲ್ಲ? ಎಂದು ಬೊಬ್ಬೆ ಹಾಕಿದರು.

‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎಲ್ಲಿದೆಯೆ! ಅಹಹ, ಹೊಗೆ ದೆಹಲಿಯನ್ನು ಆವರಿಸಿರುವಂತೆ ಈ ದೇಶದ ಜೀವಜಂತುಗಳ ಉಸಿರುಕಟ್ಟಿಸಿರುವುದೇ ಬ್ರಾಹ್ಮಣೀಯ ಪಿತೃಪ್ರಾಧಾನ್ಯ. ಮತ್ತೇನೂ ಬೇಡ, ತಮ್ಮದೇ ಜಾತಿಯ ನಿಷ್ಪಾಪಿ ವಿಧವೆಯರು, ಪರಿತ್ಯಕ್ತೆಯರು, ಅಡುಗೆ ಕೋಣೆಯಲ್ಲಿ ಬೇಯುವ ತಾಯಂದಿರನ್ನು ನೆನಪಿಸಿಕೊಂಡಿದ್ದರೂ ಸಾಕಿತ್ತು, ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎಲ್ಲಿದೆ ಎಂದು ಗೊತ್ತಾಗುತ್ತಿತ್ತು. ಆದರೆ ಜಾತಿ ಅಭಿಮಾನ ಅವರನ್ನು ಎಷ್ಟು ಕುರುಡಾಗಿಸಿತು ಎಂದರೆ ತಮ್ಮ ಜಾತಿಯ ಹೆಣ್ಣುಗಳನ್ನೂ ಸೇರಿದಂತೆ ಬಾಧಿಸುತ್ತಿರುವ ಒಂದು ಕೇಡನ್ನು ಕಣ್ಣು ತೆರೆದು ನೋಡುವುದೂ ಅಸಾಧ್ಯವಾಯಿತು.

ಏನಿದು ಬ್ರಾಹ್ಮಣೀಯ ಪಿತೃಪ್ರಧಾನತೆ?

ಜೈವಿಕವಾಗಿ ಗಂಡುಹೆಣ್ಣುಗಳ ನಡುವೆ ಕೆಲವು ಭಿನ್ನತೆಗಳಿವೆ, ಹಾಗೆಯೇ ಅನನ್ಯತೆಗಳಿವೆ. ದೈಹಿಕ ಭಿನ್ನತೆಯನ್ನೇ ಮುಂದಿಟ್ಟುಕೊಂಡು ಸಮಾನತೆ, ಸ್ವಾತಂತ್ರ್ಯ, ಪೌರ ಹಕ್ಕುಗಳಿಂದ ಹೆಣ್ಣನ್ನು ವಂಚಿಸುವ ವ್ಯವಸ್ಥೆ ಪಿತೃಪ್ರಾಧಾನ್ಯತೆ. ಹೊಸ ಜೀವವನ್ನು ಹೆರುವ ಶಕ್ತಿಯಿರುವ, ಜೀವ ಪೊರೆವ ಆಹಾರವಾಗಿ ಮೊಲೆಹಾಲು ಸ್ರವಿಸಬಲ್ಲ ಹೆಣ್ಣೆಂಬ ಅದ್ಭುತವನ್ನು ತನ್ನ ಅಂಕೆಯಲ್ಲಿಟ್ಟುಕೊಳ್ಳಲು ಯತ್ನಿಸದ ಗಂಡು ಸಮುದಾಯವೇ ಇಲ್ಲ. ಹೆಣ್ಣನ್ನು ಅಂಕೆಯಲ್ಲಿಟ್ಟುಕೊಳ್ಳುವ ಪ್ರಯತ್ನಗಳಿಗೆ ಮನ್ನಣೆ ಪಡೆಯುವ ಸಲುವಾಗಿ, ಅದಕ್ಕೆ ಧಾರ್ಮಿಕ ಸಮ್ಮತಿ ಇದೆ ಎಂಬಂತೆ ಬಿಂಬಿಸುವ ಹುನ್ನಾರವಾಗಿ ಮೊದಲು ಅವಳ ಧಾರ್ಮಿಕ ಹಕ್ಕುಗಳನ್ನು ಮೊಟಕುಗೊಳಿಸಲಾಯಿತು. ಅದಕ್ಕಾಗಿ ಪುರಾಣ, ಕಟ್ಟುಕತೆ, ಐತಿಹ್ಯಗಳ ಸೃಷ್ಟಿಸಲಾಯಿತು. ನಂತರ ಸಾಮಾಜಿಕ, ರಾಜಕೀಯ ಅವಕಾಶಗಳನ್ನು ಕಡಿತಗೊಳಿಸಲಾಯ್ತು. ಕಾಲಕಾಲಕ್ಕೆ ಹೊಸಪ್ರಶ್ನೆಗಳು ಏಳತೊಡಗಿದಾಗ ಅವುಗಳನ್ನು ಹತ್ತಿಕ್ಕಲು ಹೊಸಹೊಸ ಆಚರಣೆಗಳ ಜಾರಿಗೊಳಿಸಲಾಯ್ತು.

ಇದುವೆ ಪಿತೃಪ್ರಾಧಾನ್ಯ ಅಥವಾ ಗಂಡು ಮೇಲರಿಮೆ. ಪಿತೃಪ್ರಾಧಾನ್ಯ ವಿಶ್ವದ ಬಹುತೇಕ ಸಮಾಜಗಳಲ್ಲಿ ಚಾಲ್ತಿಯಲ್ಲಿದೆ. ಇದು ಜಾಕ್ ಪ್ರತಿನಿಧಿಸುವ ಸಮಾಜಕ್ಕೂ, ಅವರು ಪ್ರತಿನಿಧಿಸುವ ಸಂಸ್ಥೆಗೂ ಅನ್ವಯಿಸುತ್ತದೆ. ಮುಂದುವರಿದ ಪಾಶ್ಚಾತ್ಯ ಸಮಾಜಗಳಲ್ಲೂ ನಾನಾ ಲಿಂಗಾಧಾರಿತ ತಾರತಮ್ಯಗಳು ಇವತ್ತಿಗೂ ಚಾಲ್ತಿಯಲ್ಲಿವೆ. ಬಹುಪಾಲು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಲಿಂಗಾಧಾರಿತ ಉದ್ಯೋಗ ತಾರತಮ್ಯ, ವೇತನ ತಾರತಮ್ಯ ಮುಂದುವರೆದಿದೆ. ಹಾಗಾಗಿ ಜಾಕ್ ಆ ಪೋಸ್ಟರ್ ಹಿಡಿಯುವ ಮೂಲಕ ತಮ್ಮ ಸಮಾಜ-ಕಂಪನಿಯ ಪಿತೃಪ್ರಾಧಾನ್ಯ ಕೊನೆಗೊಳಿಸಲು ಮುಂದಾಗುವ ಇಚ್ಛೆ ಹೊಂದಿದ್ದಲ್ಲಿ ಅದು ಸ್ವಾಗತಾರ್ಹ ಎನ್ನಬಹುದು.

ಆದರೆ ಅವರ ಪೋಸ್ಟರು ಕೆಲವು ಭಾರತೀಯರನ್ನು ಕೆರಳಿಸಲು ಕಾರಣ ಅದರಲ್ಲಿದ್ದ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎಂಬ ಪದ. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆ, ಒಂದು ಶೋಷಕ ಮನಸ್ಥಿತಿಯ ಪ್ರತೀಕವಾದ ಪದದ ಮೊದಲೆರೆಡು ಅಕ್ಷರಗಳನ್ನು ತಮ್ಮ ಜಾತಿಯ ಹೆಸರಲ್ಲಿಟ್ಟುಕೊಂಡವರು ತಮ್ಮನ್ನೇ ನಿಂದಿಸಿದಂತೆ ಕೆರಳಿದರು. ಆ ಬ್ರಹ್ಮಜ್ಞಾನಿಗಳಿಗೆ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನ್ನುವುದು ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದವರನ್ನು ಬೈಯಲು ರೂಪಿಸಿದ ಪದವಲ್ಲ, ಬದಲಾಗಿ ಅದೊಂದು ಮನಸ್ಥಿತಿ; ಈ ದೇಶದ ಹೆಣ್ಣುಗಳನ್ನು, ಅಧಿಕಾರಹೀನರನ್ನು ತುಳಿಯಲು ಮಾಡಿಕೊಂಡ ಒಂದು ದುಷ್ಟ ಚೌಕಟ್ಟು ಎಂದು ಅರ್ಥವೇ ಆಗಲಿಲ್ಲ. ದಾರವಂತರು ತಿಳಿಯಲಿ: ಜಾತಿ-ಲಿಂಗದ ಕಾರಣವಾಗಿ ಮನುಷ್ಯರನ್ನು ಕೀಳಾಗಿ ನಡೆಸಿಕೊಳ್ಳುವುದು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ನಿರಾಕರಿಸುವುದು, ತಾನು ಶ್ರೇಷ್ಠ ಎಂಬ ಜಾತಿ/ಲಿಂಗ ಮೇಲರಿಮೆಯನ್ನು ಉಳಿದವರ ಮೇಲೆ ಹೇರುವುದು ಬ್ರಾಹ್ಮಣೀಯ ಪಿತೃಪ್ರಾಧಾನ್ಯ. ಅದು ಈ ನೆಲದ, ಸಂವಿಧಾನದ ಆಶಯಗಳಿಗೆ ವಿರುದ್ಧ. ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆಯ ನಾಶ ಎಂದರೆ ಬ್ರಾಹ್ಮಣರ ನಾಶವಲ್ಲ; ಜಾತಿ ಮೇಲರಿಮೆಯ ನಾಶ.

ಭಾರತದ ಪಿತೃಪ್ರಾಧಾನ್ಯತೆಯನ್ನು ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನ್ನಲು ಕಾರಣಗಳಿವೆ. ಪಿತೃಪ್ರಾಧಾನ್ಯವನ್ನು ಭಾರತದಲ್ಲಿ ಮತ್ತಷ್ಟು ಅಸಹನೀಯಗೊಳಿಸಿರುವುದು ಮತ್ತು ದುಷ್ಟಗೊಳಿಸಿರುವುದು ಇಲ್ಲಿನ ಜಾತಿವ್ಯವಸ್ಥೆ. ಅದು ಎರಡಲಗಿನ ಕತ್ತಿಯಾಗಿ ಈ ದೇಶದ ಹೆಣ್ಣುಗಳ ಘನತೆಯ ಬದುಕಿಗೆ ಎರವಾಗಿದೆ. ಭಾರತದ ಜಾತಿಪದ್ಧತಿಯು ನಡತೆ, ವ್ಯಕ್ತಿತ್ವ, ಸಾಧನೆ, ಉದಾತ್ತತೆ ಮುಂತಾದ ಗುಣಗಳಿಂದ ಅಲ್ಲ; ಹುಟ್ಟಿನಿಂದ ಬ್ರಾಹ್ಮಣರನ್ನು ಶ್ರೇಷ್ಠರೆಂದು ವರ್ಗೀಕರಿಸಿದೆ. ಅವರಿಗೆ ಎಲ್ಲ ವಿಶೇಷ ಸವಲತ್ತು, ಮೀಸಲಾತಿಗಳನ್ನು ಪ್ರಶ್ನಾತೀತವಾಗಿ ಕೊಟ್ಟಿದೆ. ಹುಟ್ಟಿನಿಂದಲೇ ಯಾವುದಾದರೂ ಮೇಲು ಅಥವಾ ಕೀಳೆಂದು ನಿರ್ಧಾರ ಮಾಡುವುದು ಪ್ರಕೃತಿ ವಿರೋಧಿ ತತ್ವ. ಆದರೆ ಜಾತಿಹೆಮ್ಮೆ, ಜಾತಿಪ್ರಜ್ಞೆ, ಜಾತಿ ಶ್ರೇಷ್ಠತೆಯ ವ್ಯಸನಗಳು ಬ್ರಾಹ್ಮಣರ ನಂತರದವೆಂದು ಗುರುತಿಸಲ್ಪಟ್ಟ ಸಾವಿರಾರು ಜಾತಿಗಳಿಗೂ ಹಾಗೇ ಸೋಸಿಕೊಂಡು ಇಳಿಯಿತು. ಅಂಬೇಡ್ಕರ್ ಮನೋಜ್ಞವಾಗಿ ವಿಶ್ಲೇಷಿಸಿರುವಂತೆ ಭಾರತದ ಪ್ರತಿಜಾತಿಯೂ ತಾನು ಮತ್ತೊಂದು ಜಾತಿಗಿಂತ ಶ್ರೇಷ್ಠ ಎಂಬ ಹಿರಿಮೆಯಲ್ಲಿ ಕೆಳಗಿನ ಜಾತಿಯನ್ನು ತುಳಿಯುವುದರಲ್ಲಿ ಮೇಲಿನ ಜಾತಿಯ ತುಳಿತವನ್ನು ಮರೆಯುತ್ತದೆ. ಹೀಗೆ ಬ್ರಾಹ್ಮಣ್ಯವು – ಎಂದರೆ ಅಸಮಾನತೆಯ ಉತ್ಸಾಹ, ಜಾತಿ ಮೇಲರಿಮೆ, ಜನ್ಮಜಾತ ಜಾತಿಅಸ್ಮಿತೆಗಳು – ಪ್ರತಿಜಾತಿಗೂ ಸೋಸಿಕೊಂಡು ಇಳಿದಿವೆ. ಬ್ರಾಹ್ಮಣ್ಯ ಮತ್ತು ಪಿತೃಪ್ರಾಧಾನ್ಯ ಸೇರಿ ಪ್ರತಿ ಜಾತಿಯ ಹೆಣ್ಣುಗಳನ್ನೂ ಬಾಧಿಸುತ್ತಿರುವುದು ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನಿಸಿಕೊಂಡಿದೆ. ಭಾರತದ ಪ್ರತಿಜಾತಿಯಲ್ಲೂ, ಪ್ರತಿಧರ್ಮದಲ್ಲೂ ಪಿತೃಪ್ರಾಧಾನ್ಯವಿದೆ; ಪಿತೃಪ್ರಾಧಾನ್ಯತೆ ಅಷ್ಟೇ ಅಲ್ಲ, ಬ್ರಾಹ್ಮಣೀಯ ಪಿತೃಪ್ರಾಧಾನ್ಯವಿದೆ.

ಅಂಬೇಡ್ಕರರು ಹೇಳಿದ್ದು 

ಅಂಬೇಡ್ಕರರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಜಿಐಪಿ ರೈಲ್ವೇ ವರ್ಕ್‌ಮೆನ್ಸ್ ಕಾನ್ಫರೆನ್ಸ್‌ನಲ್ಲಿ ಇಂಡಿಪೆಂಡೆಂಟ್ ಲೇಬರ್ ಪಾರ್ಟಿ ಅಧ್ಯಕ್ಷರಾಗಿ ಹಾಗೂ ಸಮ್ಮೇಳನದ ಅಧ್ಯಕ್ಷರಾಗಿ ಮಾತನಾಡುತ್ತ ೧೯೩೮ರಲ್ಲಿ ಮನೋಜ್ಞವಾಗಿ ಹೇಳಿದ್ದು ಗಮನಾರ್ಹವಾಗಿದೆ:

” ‘ಬ್ರಾಹ್ಮಣಿಕೆಯು ಪರಿಗಣಿಸಲೇಬೇಕಾದ ಶತ್ರು’ ಎಂಬ ನನ್ನ ಹೇಳಿಕೆ ಅಪಾರ್ಥಕ್ಕೊಳಗಾಗುವುದು ನನಗಿಷ್ಟವಿಲ್ಲ. ಬ್ರಾಹ್ಮಣಿಕೆಯೆಂದರೆ ಒಂದು ಸಮುದಾಯವಾಗಿ ಬ್ರಾಹ್ಮಣರ ಶಕ್ತಿ, ಅಧಿಕಾರ, ಅವಕಾಶ, ಆಸಕ್ತಿಯೆಂದಷ್ಟೇ ನಾನು ತಿಳಿಯುವುದಿಲ್ಲ. ಬ್ರಾಹ್ಮಣಿಕೆಯೆಂದರೆ ಸ್ವಾತಂತ್ರ್ಯ, ಸೋದರತೆ, ಸಮಾನತೆಯನ್ನು ನಾಶ ಮಾಡುವ ಶಕ್ತಿ. ಈ ಅರ್ಥದಲ್ಲಿ ಎಲ್ಲ ಜಾತಿ-ವರ್ಗಗಳಲ್ಲೂ ಬ್ರಾಹ್ಮಣಿಕೆಯಿದೆ ಮತ್ತು ಇದನ್ನು ಹುಟ್ಟುಹಾಕಿದವರು ಬ್ರಾಹ್ಮಣರಾದರೂ ಅವರಿಗಷ್ಟೇ ಇದು ಸೀಮಿತವಾಗಿಲ್ಲ. ಎಲ್ಲ ಕಡೆ ಕಾಣುವ, ಎಲ್ಲರ ಯೋಚನೆ-ಕ್ರಿಯೆಯನ್ನು ಹಿಡಿತದಲ್ಲಿಟ್ಟುಕೊಂಡಿರುವುದು ಇದೇ ಬ್ರಾಹ್ಮಣಿಕೆಯೆಂಬುದು ಅವಿವಾದಿತ ಸತ್ಯ. ಇದು ಕೆಲವರಿಗಷ್ಟೇ ಹೆಚ್ಚು ಅವಕಾಶ ಮಾಡಿಕೊಡುತ್ತದೆಂಬುದೂ ವಿವಾದಾತೀತ ಸಂಗತಿ. ಕೆಲ ವರ್ಗಗಳಿಗೆ ಇದು ಅವಕಾಶಗಳಲ್ಲಿ ಸಮಾನತೆಯನ್ನು ನಿರಾಕರಿಸುತ್ತದೆ. ಬ್ರಾಹ್ಮಣಿಕೆಯು ಅಂತರ್ಜಾತಿ ಭೋಜನ, ಅಂತರ್ಜಾತಿ ವಿವಾಹಗಳಂಥ ಸಾಮಾಜಿಕ ಹಕ್ಕುಗಳನ್ನು ತಡೆಯುವುದಕ್ಕಷ್ಟೇ ಸೀಮಿತವಾಗಿಲ್ಲ. ಅದು ಪೌರ ಹಕ್ಕುಗಳಿಗೂ ವಿಸ್ತರಿಸುತ್ತದೆ… ಕೋಟಿಗಟ್ಟಲೆ ಜನರಿಗೆ ಪೌರ ಹಕ್ಕುಗಳನ್ನು ನಿರಾಕರಿಸಲಾಗಿದೆ. ಸಾವಿರಾರು ವರ್ಷಗಳಿಂದ ಆಚರಣೆಯಲ್ಲಿರುವ, ಈಗಲೂ ಉರಿಯುವ ಕೊಳ್ಳಿಯಂತೆ ಜೀವಂತವಾಗಿರುವ ಬ್ರಾಹ್ಮಣಿಕೆಯೇ ಇಂದಿನ ಸಮಸ್ಯೆಗಳಿಗೆ ಕಾರಣವೆಂಬುದನ್ನು ಯಾರಾದರೂ ಸಂಶಯಿಸಲು ಸಾಧ್ಯವೆ?

ಬ್ರಾಹ್ಮಣಿಕೆ ಎಂದರೆ ಅಸಮಾನತೆಯ ಉತ್ಸಾಹ.. ಬ್ರಾಹ್ಮಣ್ಯವು ಜೀವಂತ ಶಕ್ತಿಯಾಗಿರುವ ತನಕ, ಅದು ಕೊಡುವ ಸವಲತ್ತಿಗಾಗಿ ಕೆಲವರು ಬ್ರಾಹ್ಮಣ್ಯಕ್ಕೆ ಅಂಟಿಕೊಂಡಿರುವ ತನಕ ಅದರಿಂದ ತೊಂದರೆಗೊಳಗಾದವರು ಸಂಘಟಿತರಾಗಲೇಬೇಕಾಗಿದೆ. ಹಾಗೆ ಅದರ ವಿರುದ್ಧ ಸಂಘಟಿತರಾಗುವುದರಲ್ಲಿ ತಪ್ಪೇನಿದೆ?”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...