ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಕುರಿತು ಫೇಸ್ ಬುಕ್ ನಲ್ಲಿ ಕಿಡಿಕಾರಿರುವ ಅವರು ಹಬ್ಬದ ಆಚರಣೆಗೂ ಅವಕಾಶ ನೀಡದೆ 4 ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ ಡಿ.ಕೆ. ಶಿವಕುಮಾರ್ ಅವರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಸಹ ಡಿ.ಕೆ ಶಿವಕುಮಾರ್ ಬಂಧನವನ್ನು ತೀವ್ರವಾಗಿ ಖಂಡಿಸಿದ್ದಾರೆ. ಕೇಂದ್ರ ಸರ್ಕಾರದ ಏಜೆನ್ಸಿಗಳನ್ನು ಬಳಸಿಕೊಂಡು ಪ್ರತಿಪಕ್ಷ ನಾಯಕರನ್ನು ಪ್ರತಿದಿನವೂ ಗುರಿಯಾಗಿಸಲಾಗುತ್ತಿದೆ. ಇದು ಬಿಜೆಪಿ ಸರ್ಕಾರದ ರಚನಾತ್ಮಕ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನವಾಗಿದೆ ಮತ್ತು ಭಿನ್ನಾಭಿಪ್ರಾಯದ ಧ್ವನಿಗಳನ್ನು ತಡೆಯುವ ಪ್ರಯತ್ನವಾಗಿದೆ. ಡಿ.ಕೆ.ಶಿವಕುಮಾರ್ ಬಿಜೆಪಿಯ ದ್ವೇಷದ ಪ್ರತೀಕಾರದ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ಸಿದ್ದು ಗುಡುಗಿದ್ದಾರೆ.
ಡಿಕೆ ಶಿವಕುಮಾರ್ ಖಂಡಿತವಾಗಿಯೂ ಸ್ವಚ್ಛವಾಗಿ ಹೊರಬರುತ್ತಾರೆ ಮತ್ತು ಇಡೀ ದೇಶವು ಬಿಜೆಪಿಯ ಈ ಕೆಟ್ಟ ಉದ್ದೇಶಗಳನ್ನು ಅರ್ಥಮಾಡಿಕೊಳ್ಳುತ್ತದೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಅವರೊಂದಿಗೆ ಇದ್ದೇವೆ ಮತ್ತು ಅವರಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ ಎಂದು ಘೋಷಿಸಿದ್ದಾರೆ.


