Homeಮುಖಪುಟತೆರಿಗೆ ಹೆಸರಲ್ಲಿ ಮೋದಿ ಸರ್ಕಾರದ ಸುಲಿಗೆ

ತೆರಿಗೆ ಹೆಸರಲ್ಲಿ ಮೋದಿ ಸರ್ಕಾರದ ಸುಲಿಗೆ

- Advertisement -
- Advertisement -
  • ವಿಕಾಸ್ ಆರ್. ಮೌರ್ಯ |

2012ರ ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಸಭೆ ಚುನಾವಣೆ ಆದತಕ್ಷಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದ್ದವು. ಬಿಜೆಪಿ ಮತ್ತು ಎಡಪಕ್ಷಗಳು ಬೀದಿಗಿಳಿದು ಯುಪಿಎ ಸರ್ಕಾರದ ವಿರುದ್ಧ ಹೋರಾಡಿದ್ದವು. ಜನರು ಸಹ ಬೇಸತ್ತುಹೋಗಿದ್ದರು. ಮಾಧ್ಯಮಗಳಂತೂ ದಿನಗಟ್ಟಲೆ ಬೆಲೆ ಏರಿಕೆಯ ವಿರುದ್ಧದ ಹೋರಾಟವನ್ನು ಪ್ರಸಾರ ಮಾಡಿದ್ದವು, ಜೊತೆಗೆ ತೈಲಬೆಲೆ ಏರಿಕೆಯನ್ನು ಪ್ರಧಾನ ವಿಚಾರವಾಗಿ ಚರ್ಚಿಸಿದ್ದರು. ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆ ಬ್ಯಾರೆಲ್ಲಿಗೆ 113 ಡಾಲರ್ ಇದ್ದದ್ದನ್ನು ಮುಂದು ಮಾಡಿ ಯುಪಿಎ ಸರ್ಕಾರ ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿತ್ತು. ಜೊತೆಗೆ ರಾಜ್ಯ ಸರ್ಕಾರಗಳಿಗೆ ತಮ್ಮ ಪಾಲಿನ ತೆರಿಗೆಯನ್ನು ಕಡಿಮೆ ಮಾಡಿಕೊಳ್ಳಲು ತಿಳಿಸಿತ್ತು. ಇಂತಹ ಪರಿಸ್ಥಿತಿಯಲ್ಲೂ ಮನಮೋಹನ್ ಸಿಂಗ್ ಅವರ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ ರೂ. 73 ಮತ್ತು ರೂ. 64 ರೂಪಾಯಿಗಳಿತ್ತು. ಪೆಟ್ರೋಲ್ ಗರಿಷ್ಠ ರೂ. 76 ಮುಟ್ಟಿತ್ತು. ಆದರೆ ಅಂದು ಯುಪಿಎ ಸರ್ಕಾರದ ತೈಲ ಬೆಲೆ ಏರಿಕೆ ವಿರುದ್ಧ ಬೀದಿಗಿಳಿದು ಬೊಬ್ಬಿರಿದಿದ್ದ ಬಿಜೆಪಿಯವರು ತಮ್ಮದೇ ಆಡಳಿತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ರೂ. 84 ಮತ್ತು ರೂ. 68 ಆಗಿರುವುದಕ್ಕೆ ತುಟಿ ಬಿಚ್ಚುತ್ತಿಲ್ಲ. ಬದಲಾಗಿ ಈ ಹಿಂದೆ ಯುಪಿಎ ಸರ್ಕಾರ ರಾಜ್ಯಗಳಿಗೆ ತಾಕೀತು ಮಾಡಿದಂತೆ ರಾಜ್ಯ ತೆರಿಗೆ ಕಡಿಮೆ ಮಾಡುವಂತೆ ಒತ್ತಾಯಿಸುತ್ತಿದೆ.

ಈ ರೀತಿಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ. ಸತ್ಯವೆಂದರೆ ತೈಲ ಬೆಲೆ ಏರಿಕೆಯ ಹಿಂದೆ ಕೇಂದ್ರ ಸರ್ಕಾರದ ಹೆಚ್ಚು ಪಾಲಿದೆಯಾದರೂ ರಾಜ್ಯದ ಪಾಲನ್ನು ಕಡೆಗಣಿಸುವಂತಿಲ್ಲ. ಜೊತೆಗೆ ಸರ್ಕಾರಗಳ ನೀತಿಗಳ ಮೇಲೆ ನಿಯಂತ್ರಣ ಹೊಂದಿರುವ ಖಾಸಗಿ ತೈಲ ಕಂಪೆನಿಗಳ ದಂಧೆಯ ಪಾಲನ್ನೂ ಕಡೆಗಣಿಸುವಂತಿಲ್ಲ.

ತೈಲಬೆಲೆ ಏರಿಕೆಯ ಮೂಲ 90ರ ದಶಕದಲ್ಲಿ ಹಂತಹಂತವಾಗಿ ಭಾರತದಲ್ಲಿ ಜಾರಿಯಾದ ಮುಕ್ತ ಮಾರುಕಟ್ಟೆ ನೀತಿಯಲ್ಲಿದೆ. ಎಲ್.ಪಿ.ಜಿ (ಉದಾರಿಕರಣ, ಖಾಸಗೀಕರಣ, ಜಾಗತೀಕರಣ) ಯಿಂದಾಗಿ ಭಾರತ ‘ಮುಕ್ತ ಮಾರುಕಟ್ಟೆ’ಗೆ ತೆರೆದುಕೊಳ್ಳುತ್ತಾ ಹೋಯಿತು. ಇದರ ಪರಿಣಾಮವಾಗಿ ಖಾಸಗಿ ಕಂಪೆನಿ ಲೂಟಿಕೋರರು ಸರ್ಕಾರದ ನೀತಿಗಳ ಮೇಲೆ ನಿಯಂತ್ರಣ ಸಾಧಿಸುತ್ತಾ ಹೋದರು. ಕ್ರಮೇಣ ಸಾರ್ವಜನಿಕ ವಲಯಕ್ಕೆ ಸರ್ಕಾರಗಳು ನೀಡುತ್ತಿದ್ದ ‘ಸಬ್ಸಿಡಿ’ ಗಳ ಮೇಲೆ ಕಣ್ಣಿಟ್ಟ ಖಾಸಗಿ ಕುಳಗಳು ‘ಸಬ್ಸಿಡಿ’ ಗಳನ್ನು ಕಡಿತಗೊಳಿಸಲು ಸರ್ಕಾರದ ಮೇಲೆ ಒತ್ತಡ ಹೇರಿದವು. ಬಂಡವಾಳಶಾಹಿಗಳ ಮೇಲೆ ಅವಲಂಬಿತವಾದ ಸರ್ಕಾರಗಳು ಅವರಿಗೆ ರತ್ನಗಂಬಳಿ ಹಾಸುತ್ತಾ ಬಂದು ಇಂದು ಭಾರತ ದೇಶವನ್ನು ಈ ಸ್ಥಿತಿಯಲ್ಲಿಟ್ಟಿವೆ. ಈ ಬೆಳವಣಿಗೆ ಮೋದಿ ಸರ್ಕಾರದಲ್ಲಿ ಇನ್ನಿಲ್ಲದಷ್ಟು ಹದ್ದು ಮೀರಿದೆ.

ತೈಲಬೆಲೆ ಏರಿಕೆಯಲ್ಲೂ ಇದೇ ‘ಮುಕ್ತಬೆಲೆ ನೀತಿ’ ಪ್ರಮುಖ ಪಾತ್ರ ವಹಿಸಿದೆ. ಇಂಧನ ಬೆಲೆಯನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಬೆಲೆ ನೀತಿಗೊಳಪಡಿಸಬೇಕೆಂದು ಮೊದಲು ತೀರ್ಮಾನಿಸಿದ್ದು 1997 ರ ಯುನೈಟೆಡ್ ಫ್ರಂಟ್‌ನ ದೇವೇಗೌಡರ ಸರ್ಕಾರ. ಆದರೆ ಆ ಸರ್ಕಾರ ಅಲ್ಪಾಯುಷಿಯಾಗಿದ್ದುದರಿಂದ 2002 ರಲ್ಲಿ ಬಿಜೆಪಿಯ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರ ತೈಲಬೆಲೆಯನ್ನು ಮುಕ್ತಬೆಲೆ ನೀತಿಗಳವಡಿಸುವ ಖಚಿತ ನಿರ್ಧಾರ ತೆಗೆದುಕೊಂಡಿತು. ಆದರೆ ವಿರೋಧ ಪಕ್ಷಗಳ ವಿರೋಧದಿಂದ ಅದು ಜಾರಿಗೊಳ್ಳಲಿಲ್ಲ. ಈ ಬೆಳವಣಿಗೆ ಭಾರತದ ಖಾಸಗಿ ತೈಲ ಸಂಸ್ಕರಣೆ ಮತ್ತು ವಿತರಣೆ ಕಂಪೆನಿಗಳಾದ ಶೆಲ್, ರಿಲಯನ್ಸ್ ಮತ್ತು ಎಸ್ಸಾರ್‌ಗಳಿಗೆ ಹಲವು ತೊಡಕುಂಟುಮಾಡಿತು. ಕೇಂದ್ರ ಸರ್ಕಾರದ ಸಬ್ಸಿಡಿಯಿಂದಾಗಿ ಸಾರ್ವಜನಿಕ ಸಂಸ್ಥೆಗಳ ಬಂಕ್‌ಗಳು ಪೆಟ್ರೋಲ್ ಮತ್ತು ಡೀಸೆಲ್‌ಗಳನ್ನು ರಿಲಯನ್ಸ್ನಂತ ಖಾಸಗಿ ಬಂಕ್‌ಗಳಿಗಿಂತ ಕಡಿಮೆ ಬೆಲೆಯಲ್ಲಿ ಮಾರುತ್ತಿದ್ದವು. ಈ ಕಾರಣಕ್ಕಾಗಿಯೇ 2004 ರಿಂದ ಯುಪಿಎ ಸರ್ಕಾರದ ಮೇಲೆ ಖಾಸಗಿ ತೈಲ ಕಂಪೆನಿಗಳು ತೈಲಗಳ ಮೇಲಿನ ಸಬ್ಸಿಡಿಯನ್ನು ಹಿಂದೆಗೆದುಕೊಳ್ಳುವಂತೆ ಒತ್ತಾಯಿಸಿದವು. ಇದರ ಭಾಗವಾಗಿಯೇ 2012 ರಲ್ಲಿ ರಚನೆಯಾದದ್ದು ಕೇತನ್ ಪಾರೆಖ್ ಸಮಿತಿ. ಚಿಂತಕ ಶಿವಸುಂದರ್ ಗುರುತಿಸುವಂತೆ ಪಾರೆಖ್ ಸಮಿತಿಯು ‘ಇಂಧನ ಸಬ್ಸಿಡಿ ಹೊರೆಯನ್ನು ಸರ್ಕಾರವಾಗಲೀ, ಸಾರ್ವಜನಿಕ ಇಂಧನ ಕಂಪೆನಿಗಳಾಗಲೀ ಹೊರಲು ಸಾಧ್ಯವಿಲ್ಲವೆಂದೂ ಸರ್ಕಾರ ಪೆಟ್ರೋಲ್, ಡೀಸೆಲ್, ಸೀಮೆಎಣ್ಣೆ ಮತ್ತು ಅಡುಗೆ ಅನಿಲಗಳಿಗೆ ಕೊಡುತ್ತಿರುವ ಎಲ್ಲಾ ಸಬ್ಸಿಡಿಯನ್ನೂ ವಾಪಸ್ ತೆಗೆದುಕೊಳ್ಳಬೇಕೆಂದೂ, ಬೆಲೆ ನಿಗದಿಯ ಪರಮಾಧಿಕಾರವನ್ನು ಮಾರುಕಟ್ಟೆಗೆ ಬಿಟ್ಟುಕೊಡಬೇಕೆಂದೂ ಶಿಫಾರಸ್ಸು ಮಾಡಿತು’. ಬಿಜೆಪಿಯ ಆರ್ಥಿಕ ವ್ಯವಹಾರಗಳ ಸೆಲ್ ಸಹ ಪಾರೆಖ್ ವರದಿಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿತ್ತು!

ಈ ರೀತಿ ಇಂಧನಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಸಬ್ಸಿಡಿ ನಿಂತಿತು. ಮಾರುಕಟ್ಟೆ ಮುಕ್ತ ನೀತಿಗೆ ಒಳಪಟ್ಟ ಇಂಧನಗಳ ಬೆಲೆಯನ್ನು ಖಾಸಗಿ ತೈಲ ಕಂಪೆನಿಗಳು ನಿರ್ಧರಿಸುವಂತಾಯಿತು. ರಿಲಯನ್ಸ್ ಬಂಕ್‌ಗಳು ಸಾರ್ವಜನಿಕ ಬಂಕ್‌ಗಳಿಗಿಂತ ಒಂದು ರೂಪಾಯಿ ಕಡಿಮೆ ಬೆಲೆಗೆ ಪೆಟ್ರೋಲ್ ಡೀಸೆಲ್ ಮಾರುವಂತಾಯಿತು. ಶೆಲ್ ಪೆಟ್ರೋಲ್ ಬಂಕ್‌ಗಳು ಹೆಚ್ಚು ಸಂಸ್ಕರಿತ ಮತ್ತು ಕಡಿಮೆ ಸಂಸ್ಕರಿತವೆಂಬ ಹೆಸರಲ್ಲಿ ಹಣ ಸುಲಿಯಲು ಆರಂಭಿಸಿದವು. ಇಂದಿನ ಈ ಸ್ಥಿತಿಗೆ ಹಿಂದಿನ ಎಲ್ಲಾ ಸರ್ಕಾರಗಳು ಕಾರಣವಾದರೂ, ಯುಪಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಅಧಿಕಾರ ಹಿಡಿದ ಬಿಜೆಪಿ ಸರ್ಕಾರದಲ್ಲಿ ಯಾವ ವ್ಯತ್ಯಾಸಗಳೂ ಕಾಣಲಿಲ್ಲ. ಬದಲಾಗಿ ಯುಪಿಎ ಸರ್ಕಾರಕ್ಕಿಂತ ಹೆಚ್ಚು ಮೋದಿ ಸರ್ಕಾರ ಜನರ ಮೇಲೆ ತೆರಿಗೆಯ ಹೊರೆ ಏರಿದೆ.

ಆಶ್ಚರ್ಯವೆಂದರೆ ಭಾರತದಿಂದ ತೈಲವನ್ನು ಖರೀದಿಸುವ ಶ್ರೀಲಂಕ, ನೇಪಾಳ, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಭಾರತಕ್ಕಿಂತಲೂ ಕಡಿಮೆ ಬೆಲೆಯಲ್ಲಿ ತಮ್ಮ ಪ್ರಜೆಗಳಿಗೆ ಇಂಧನವನ್ನು ನೀಡುತ್ತಿವೆ. ಆದರೆ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾದರೂ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿತು. ಇದಕ್ಕೆ ಮೋದಿ ಸರ್ಕಾರದ ತುಘಲಕ್ ತೆರಿಗೆ ನೀತಿಯೇ ಕಾರಣವಾಗಿದೆ.

ನಾನಾಗಲೇ ತಿಳಿಸಿದಂತೆ 2012 ರಲ್ಲೂ ಸಹ ಯುಪಿಎ ಸರ್ಕಾರ ಇನ್ನಿಲ್ಲದಂತೆ ತೈಲ ಬೆಲೆ ಏರಿಸಿತ್ತು. ಅದರ ಹಿಂದೆಯೂ ಖಾಸಗಿ ತೈಲ ಕಂಪೆನಿಗಳ ಕೈವಾಡವಿತ್ತು. ಜೊತೆಗೆ ಅಂತಾರಾಷ್ಟ್ರೀಯ ತೈಲ ಬೆಲೆಯೂ ಹೆಚ್ಚಾಗಿತ್ತು. ಅಂತಾರಾಷ್ಟ್ರೀಯ ಕಚ್ಛಾತೈಲ ಬೆಲೆ ಬ್ಯಾರೆಲ್‌ಗೆ 113 ಡಾಲರ್ ಇದ್ದಾಗಲೂ ಮನಮೋಹನ್ ಸಿಂಗ್ ಅವರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ರೂ.73 ಮತ್ತು ರೂ.64ಕ್ಕೆ ನೀಡುತ್ತಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕರಿಸಿದ ಕೆಲವೇ ತಿಂಗಳಲ್ಲಿ, ಅಂದರೆ ಜನವರಿ, 2015 ರಷ್ಟೊತ್ತಿಗೆ ಪ್ರತಿ ಬ್ಯಾರೆಲ್ ಕಚ್ಚಾ ತೈಲದ ಬೆಲೆ 50 ಡಾಲರ್‌ಗೆ ಕುಸಿಯಿತು. ಸ್ವತಃ ಮೋದಿಯವರೇ ಇದನ್ನು ಅದೃಷ್ಟವೆಂದು ಹೇಳಿಕೊಂಡಿದ್ದರು. ಈ ಅದೃಷ್ಟ ಮುಂದುವರಿದು ಜನವರಿ, 2016 ರಷ್ಟೊತ್ತಿಗೆ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ 29 ಡಾಲರ್‌ಗೆ ಕುಸಿಯಿತು. ಆದರೆ ಮೋದಿಯವರ ಸರ್ಕಾರ ಜನತೆಯ ಮೇಲೆ ಹೊರೆ ಇಳಿಸಲೇ ಇಲ್ಲ. ಪೆಟ್ರೋಲ್ ಬೆಲೆ ಆಗಲೂ ಪ್ರತಿ ಲೀಟರ್‌ಗೆ ರೂ.60 ಇತ್ತು. ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕಚ್ಚಾ ತೈಲ 113 ಡಾಲರ್ ಇದ್ದಾಗ ರೂ.73 ಕ್ಕೆ ಪೆಟ್ರೋಲ್ ದೊರಕುತ್ತಿತ್ತು. ಆದರೆ ಮೋದಿಯವರ ಸರ್ಕಾರದಲ್ಲಿ ಕಚ್ಚಾ ತೈಲ ರೂ.29 ಇದ್ದಾಗಲೂ ಪೆಟ್ರೊಲ್ ರೂ.60 ರಲ್ಲೆ ಏಕೆ ಉಳಿಯಿತು. ಈಗ 72 ಡಾಲರ್ ಇದ್ದಾಗಲೂ ಪ್ರತಿ ಲೀಟರ್‌ಗೆ ರೂ.84 ರಷ್ಟು ಹೆಚ್ಚಾಗಿದ್ದು ಹೇಗೆ? ಉತ್ತರ ಒಂದೇ ಸುಲಿಗೆ. ತೆರಿಗೆ ಎಂಬ ಹೆಸರಿನಲ್ಲಿ ಜನತೆಯ ಸುಲಿಗೆ.

20, ಮೇ 2018 ರಂದು ಅಂತಾರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಬ್ಯಾರೆಲ್ಲಿಗೆ 72.5 ಡಾಲರ್ ಅಂದರೆ 4930 ರೂಪಾಯಿಗಳು. ಒಂದು ಬ್ಯಾರೆಲ್‌ನಲ್ಲಿ ಸುಮಾರು 159 ಲೀಟರ್ ಇರುತ್ತದೆ. ಅಲ್ಲಿಗೆ ಒಂದು ಲೀಟರ್ ಕಚ್ಚಾ ತೈಲದ ಬೆಲೆ 31 ರೂಪಾಯಿಗಳಾಗುತ್ತದೆ. ಈ ಕಚ್ಚಾ ತೈಲದಿಂದ ಪೆಟ್ರೋಲನ್ನು ಸಂಸ್ಕರಿಸಲು ಪ್ರತಿ ಲೀಟರಿಗೆ 2.62 ರೂಪಾಯಿ ಮತ್ತು ಡೀಸಲ್‌ಗೆ 5.91 ರೂಪಾಯಿ ತಗಲುತ್ತದೆ. ಸರಬರಾಜು ಮತ್ತು ವಿತರಣೆಗೆ ಪೆಟ್ರೋಲ್ ಗೆ 3.31 ರೂಪಾಯಿ ಮತ್ತು ಡೀಸೆಲ್‌ಗೆ 2.87 ರೂಪಾಯಿ ಖರ್ಚಾಗುತ್ತದೆ. ಇವೆರಡನ್ನೂ ಸೇರಿಸಿದ ನಂತರ ಒಂದು ಲೀಟರ್ ಪೆಟ್ರೋಲ್ ಬೆಲೆ ರೂ.36.93 ಮತ್ತು ಡೀಸೆಲ್ ರೂ.39.78 ಆಗುತ್ತದೆ. ಇದು ಪೆಟ್ರೋಲ್ ಮತ್ತು ಡೀಸೆಲ್ ಅಸಲಿ ಬೆಲೆ. ಈ ಬೆಲೆಗೆ ಕೇಂದ್ರ ಸರ್ಕಾರ ಎಕ್ಸೈಜ್ ತೆರಿಗೆ ಮತ್ತು ರೋಡ್ ಟ್ಯಾಕ್ಸ್ ಎಂದು ಪ್ರತಿ ಲೀಟರ್ ಪೆಟ್ರೋಲಿಗೆ ರೂ.19.48 ಮತ್ತು ಡೀಸೆಲ್‌ಗೆ ರೂ.15.33 ಸೇರಿಸುತ್ತದೆ. ರಾಜ್ಯ ಸರ್ಕಾರಗಳು ಇದಕ್ಕೆ ಕ್ರಮವಾಗಿ ವ್ಯಾಟ್ ತೆರಿಗೆ ರೂ.16.21 ಮತ್ತು ರೂ.9.91 ಜೊತೆಗೆ 25 ಪೈಸೆ ಪರಿಸರ ಸೆಸ್ ಸೇರಿಸುತ್ತದೆ. ನಂತರ ಬಂಕ್‌ಗಳು ಕ್ರಮವಾಗಿ ರೂ.3.62 ಮತ್ತು ರೂ.2.52 ಕಮಿಷನ್ ಸೇರಿಸಿ 76.24 ಮತ್ತು 67.54 ಆಗಿದೆ. ಈ ಪರಿಣಾಮದಿಂದಾಗಿಯೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಐತಿಹಾಸಿಕ ರೂ.84 ಮತ್ತು ರೂ.70 ಮುಟ್ಟಿದೆ.

ಇದು ಇಂಧನ ಬೆಲೆ ಏರಿಕೆಯ ಅಸಲಿಯತ್ತು. ಮೋದಿ ಸರ್ಕಾರ ಬಂದನಂತರ ಇಂಧನ ತೈಲಗಳ ಮೇಲೆ 12 ಬಾರಿ ಎಕ್ಸೈಸ್ ತೆರಿಗೆಯನ್ನು ಏರಿಸಲಾಗಿದೆ. ಅಂದರೆ ಪೆಟ್ರೋಲ್ ಮೇಲೆ ಶೇ.54 ರಷ್ಟು, ಡೀಸೆಲ್ ಮೇಲೆ ಶೇ.154 ರಷ್ಟು ಪೆಟ್ರೋಲ್ ತೆರಿಗೆಯನ್ನೂ, ಶೇ.46 ರಷ್ಟು ವ್ಯಾಟ್ ತೆರಿಗೆಯನ್ನೂ, ಶೇ.73 ರಷ್ಟು ಡೀಲರ್‌ಗಳ ಕಮಿಷನ್ ಏರಿಸಲಾಗಿದೆ. ಒಂದು ಕಡೆ ಕಚ್ಚಾತೈಲ ಬೆಲೆ ಕುಸಿಯುತ್ತಿದ್ದರೆ ಮತ್ತೊಂದು ಕಡೆ ಮೋದಿಯವರು ಜನತೆಯ ಮೇಲೆ ತೈಲ ಬೆಲೆ ಹೆಚ್ಚು ಮಾಡುತ್ತಾ ಹೋದರು. ಇದರಿಂದಾಗಿ ಮೋದಿ ಸರ್ಕಾರ ತನ್ನ ಖಜಾನೆಯನ್ನು ಜನಸಾಮಾನ್ಯರು ಬೆವರು ಸುರಿಸಿ ಸಂಪಾದಿಸಿದ ಹಣದಿಂದ ತುಂಬಿಸಿಕೊಂಡಿದೆ. 2014-15 ನೇ ಸಾಲಿನಲ್ಲಿ ತೈಲ ತೆರಿಗೆಗಳಿಂದ 99 ಸಾವಿರ ಕೋಟಿ ಖಜಾನೆ ಸೇರಿತ್ತು. ಆದರೆ 2016-17ನೇ ಸಾಲಿನಲ್ಲಿ ಬರೋಬ್ಬರಿ 2.42 ಲಕ್ಷ ಕೋಟಿ ಖಜಾನೆ ಸೇರಿದೆ! ಇದು ಜನರಿಂದ ಮೋದಿಯವರು ಸುಲಿದಿರುವ ಹಣವಲ್ಲದೆ ಬೇರೇನಲ್ಲ.

ಕೊನೆಯದಾಗಿ, ಮತ್ತೊಂದು ಕಡೆ ಮೋದಿಯವರ ಆಡಳಿತದಲ್ಲಿ ಸಾರ್ವಜನಿಕ ಬ್ಯಾಂಕ್‌ಗಳು ಶ್ರೀಮಂತ ಉದ್ಯಮಿಗಳ 2.42 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿವೆ. ಇದರ ಅರ್ಥ ಇಷ್ಟೆ. ಜನರಿಂದ ಸುಲಿಗೆ ಮಾಡಿದ ಹಣವನ್ನು ಸರ್ಕಾರಗಳು ಜನಕಲ್ಯಾಣ ಕಾರ್ಯಗಳಿಗೆ ಬಳಸಲಾರವು. ಬದಲಾಗಿ ಉದ್ಯಮಿಗಳ ಸಾಲಮನ್ನಾ ಮಾಡಲು ಬಳಸಿಕೊಳ್ಳುತ್ತದೆ. ಈ ಶ್ರೀಮಂತರಿಂದ ಸರ್ಕಾರ ನ್ಯಾಯಬದ್ಧವಾಗಿ ಸಾಲ ಮರುಪಾವತಿ ಮಾಡಿಸಿಕೊಂಡಿದ್ದರೆ ಇಂದು ಪೆಟ್ರೋಲ್ ಮತ್ತು ಡೀಸಲ್ ಪ್ರತಿ ಲೀಟರ್‌ಗೆ ಕೇವಲ ರೂ. 30 ಕ್ಕೆ ದೊರಕುತ್ತಿತ್ತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...