Homeರಾಜಕೀಯಹೊಳಲ್ಕೆರೆ: ದಲಿತ ಮಂತ್ರಿ ಸೋಲಿಸಲು ಸಂಘ ಪರಿವಾರದ ಹರಸಾಹಸ

ಹೊಳಲ್ಕೆರೆ: ದಲಿತ ಮಂತ್ರಿ ಸೋಲಿಸಲು ಸಂಘ ಪರಿವಾರದ ಹರಸಾಹಸ

- Advertisement -
 
ಸದ್ಯದ ಎಲೆಕ್ಷನ್ ಮೂಡ್‍ನಲ್ಲಿ ಹೊಳಲ್ಕೆರೆ ಮತಕ್ಷೇತ್ರ ರಾಜ್ಯದ ಹಾಟ್‍ಸ್ಪಾಟ್‍ಗಳಲ್ಲಿ ಒಂದು. ಯಾಕೆಂದರೆ ಸಂಘ ಪರಿವಾರ ಈ ಸಲ ಶತಾಯಗತಾಯ ಸೋಲಿಸಲೇಬೇಕು ಅಂತ ರೆಡಿ ಮಾಡಿಕೊಂಡಿರುವ ಟಾರ್ಗೆಟ್‍ಗಳಲ್ಲಿ ಹಾಲಿ ಸಮಾಜ ಕಲ್ಯಾಣ ಮಂತ್ರಿ ಆಂಜನೇಯ ಕೂಡಾ ಇದ್ದಾರೆ. ಸಿಎಂ ಸಿದ್ರಾಮಯ್ಯ ಕಟ್ಟಿಟ್ಟಿರುವ `ಅಹಿಂದ’ ವೋಟ್ ಬ್ಯಾಂಕನ್ನು ಛಿದ್ರಗೊಳಿಸಬೇಕೆಂದರೆ ಮೊದಲು ಅದರ ಮೂಲ ಬೇರುಗಳನ್ನು ಅರ್ಥಾತ್ ಆ ನಾಯಕತ್ವಗಳನ್ನು ಮಟ್ಟ ಹಾಕಬೇಕೆಂಬುದು ಆರೆಸ್ಸೆಸ್‍ನ ವೆರಿಓಲ್ಡ್ ಫಾರ್ಮುಲಾ. ಅಂತೆಯೇ ಸಿದ್ದು, ಖಾದರ್, ಜಾರ್ಜ್, ಆಂಜನೇಯ ಹೀಗೆ ಶೂದ್ರ ಮತ್ತು ಅಲ್ಪಸಂಖ್ಯಾತ ಲೀಡರ್‍ಶಿಪ್‍ಗಳನ್ನು ಧ್ವಂಸ ಮಾಡುವುದು ಸಂಘ ಪರಿವಾರದ ಲೇಟೆಸ್ಟ್ ಅಜೆಂಡಾ. ಸದ್ಯದಮಟ್ಟಿಗೆ ತಮ್ಮ ವಿರೋಧಿ ಪಾಳೆಯದಲ್ಲಿ ಖರ್ಗೆಯವರನ್ನು ಬಿಟ್ಟರೆ ದಲಿತ ರಾಜಕಾರಣವನ್ನು ಧ್ರುವೀಕರಣಗೊಳಿಸಬಲ್ಲಂತಹ ಮುಖವೆಂದರೆ ಅದು ಮಂತ್ರಿ ಆಂಜನೇಯರದು ಎಂಬ ತೀರ್ಮಾನಕ್ಕೆ ಬಂದಿರುವ ಬಿಜೆಪಿಯ ಮಾತೃಸಂಘಟನೆ ಹೊಳಲ್ಕೆರೆ ಕದನ ಕಣವನ್ನು ಸೀರಿಯಸ್ಸಾಗಿ ಪರಿಗಣಿಸಿದೆ. ಇತ್ತ ಖರ್ಗೆ ಸಾಹೇಬರು ಸೀನಿಯಾರಿಟಿಯ ಗಾಂಭೀರ್ಯತೆಯಲ್ಲಿ ಸಿದ್ರಾಮಯ್ಯನವರಿಂದ ಅಂತರ ಕಾಯ್ದುಕೊಂಡು `ಅಹಿಂದ’ ರಾಜಕಾರಣದಿಂದ ದೂರವೇ ಉಳಿದಿದ್ದಾರೆ. ಅತ್ತ ಬುಡಕಟ್ಟು ಹಾಡಿಗಳಲ್ಲಿ, ದಲಿತರ ಕೇರಿಗಳಲ್ಲಿ ವಾಸ್ತವ್ಯ ಮಾಡುತ್ತಾ `ಸಿದ್ದು ಆಪ್ತ’ ವಲಯದಲ್ಲಿ ಮಿಂಚುತ್ತಿರುವ ಆಂಜನೇಯ ಸಹಜವಾಗಿಯೇ ಸಂಘ ಪರಿವಾರದ ಟಾರ್ಗೆಟ್ಟಾಗಿ ಫಿಕ್ಸ್ ಆಗಿದ್ದಾರೆ. ಆ ಕಾರಣಕ್ಕೇ, ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಹೊಳಲ್ಕೆರೆಯ ಟಿಕೆಟ್ಟನ್ನು ಯಾರಿಗೂ ಘೋಷಿಸದೆ ವೆಯ್ಟಿಂಗ್ ಲಿಸ್ಟ್‍ನಲ್ಲಿ ಇರಿಸಿಕೊಂಡಿದೆ. ಇಲ್ಲದೇ ಹೋಗಿದ್ದಲ್ಲಿ, ಕೆಜೆಪಿ ಕೋಟಾದಲ್ಲಿ ಯಡಿಯೂರಪ್ಪನವರ ಪಟ್ಟಾ ಶಿಷ್ಯ ಚಂದ್ರಪ್ಪನಿಗೆ ಇಷ್ಟೊತ್ತಿಗಾಗಲೇ ಟಿಕೆಟು ಘೋಷಿಸಬೇಕಾಗಿತ್ತು!
`ಮಠ’ ವರ್ಸಸ್ `ಧರ್ಮ’
ಹೇಗಾದರೂ ಮಾಡಿ ಚಿತ್ರದುರ್ಗ ಜಿಲ್ಲಾ ರಾಜಕಾರಣವನ್ನು ವಶಮಾಡಿಕೊಳ್ಳಬೇಕೆನ್ನುವುದು ಸಂಘ ಪರಿವಾರದ ಗುರಿ. ಕರ್ನಾಟಕದಲ್ಲಿ ತನ್ನ ಕೋಮುವಾದಿ ರಾಜಕಾರಣವನ್ನು ಪಸರಿಸಲು ಅದು ಏನೆಲ್ಲಾ ಪ್ರಯತ್ನ ಪಟ್ಟರೂ ಕರಾವಳಿ ಸೆರಗಿನಿಂದಾಚೆಗೆ ಅದರ ಪ್ರಭಾವ ವಿಸ್ತರಿಸುತ್ತಿಲ್ಲ. ಹಾಗಂತ ಅವರು ಕೈಕಟ್ಟಿ ಕೂತಿಲ್ಲ. ಒಂದಿಲ್ಲೊಂದು ಪ್ರಯತ್ನ ಮಾಡುತ್ತಲೇ ಇದ್ದಾರೆ. ಅದರ ಭಾಗವಾಗಿ ದಾವಣಗೆರೆ, ಚಿತ್ರದುರ್ಗ, ಹಾವೇರಿಯಂತಹ ಮಧ್ಯ ಕರ್ನಾಟಕದ ನೆಲಗಳನ್ನು ಹೊಕ್ಕು ಕೋಮುವರ್ಣ ಸುರಿದುಬಿಟ್ಟರೆ ಉತ್ತರಕ್ಕೂ, ದಕ್ಷಿಣಕ್ಕೂ ವ್ಯಾಪಿಸಿಬಿಡೋದು ಕಷ್ಟವಲ್ಲ ಅನ್ನೋದು ಸಂಘ ಪರಿವಾರದ ಲೆಕ್ಕಾಚಾರ. ಹಾಗಾಗಿಯೇ ಈ ಜಿಲ್ಲೆಗಳ ರಾಜಕಾರಣದ ಮೂಲಕ ತನ್ನ ಅಜೆಂಡಾವನ್ನು ಈಡೇರಿಸಿಕೊಳ್ಳಲು ಕರಾವಳಿಯ ಕೇಸರಿ ಕೂಟ ಹಾತೊರೆಯುತ್ತಿದೆ.
ಆದರೆ ಸಂಘ ಪರಿವಾರಕ್ಕೆ ಇಷ್ಟುದಿನ ಇಲ್ಲೂ ಒಂದು `ಧರ್ಮ’ ಸಂಕಟವಿತ್ತು. ಅದು ಸಿರಿಗೆರೆ ಸದ್ಧರ್ಮ ಪೀಠದ ರಾಜಕೀಯ ಪಾಳೆಗಾರಿಕೆ! ಮೂಲ ಬಸವತತ್ವದಿಂದ ದೂರ ಸರಿದು, ಇತ್ತೀಚಿನವರೆಗೆ ಮನುವಾದಿಗಳ `ಜಾತಿ’ ಪದರಕ್ಕೆ ಕುಸಿದು ಕುಳಿತಿದ್ದ ಮಧ್ಯ ಕರ್ನಾಟಕ ಭಾಗದ ಲಿಂಗಾಯತ ಸಮುದಾಯದ ರಾಜಕೀಯ ಒಮ್ಮತ ನಿರ್ಧಾರವಾಗುತ್ತಿದ್ದುದೇ ಸಿರಿಗೆರೆ ಸ್ವಾಮಿಗಳ ಫರ್ಮಾನನ್ನು ಆಧರಿಸಿ! ಅವರು ಯಾವ ಅಭ್ಯರ್ಥಿಯ ತಲೆಮೇಲೆ ಕೈಯಿಟ್ಟು ಆಶೀರ್ವಾದ ಮಾಡುತ್ತಾರೋ ಅವರೇ ಈ ಭಾಗದಲ್ಲಿ ಗೆಲ್ಲುತ್ತಾ ಬಂದಿದ್ದಾರೆ ಅನ್ನೋದರಲ್ಲಿ ಸಂಶಯವೇ ಇಲ್ಲ. ಕಳೆದ ಎಲೆಕ್ಷನ್‍ನಲ್ಲಿ ಇದೇ ಆಂಜನೇಯರ ಗೆಲುವು ಕೊನೇಕ್ಷಣದವರೆಗೂ ಡೋಲಾಯಮಾನ ಸ್ಥಿತಿಯಲ್ಲಿತ್ತು. ಸಿರಿಗೆರೆ ಸ್ವಾಮಿಗಳ ವಿರುದ್ಧ ಆಂಜನೇಯ ಸಣ್ಣಗೆ ಮುನಿಸಿಕೊಂಡದ್ದು ಅದಕ್ಕೆ ಕಾರಣ. ಆದರೆ ಯಾವಾಗ ಇನ್ನು ತಡಮಾಡಿದರೆ ತಾನು ಸೋಲುತ್ತೇನೆಂಬ ಆತಂಕ ಶುರುವಾಯಿತೋ ಆಗ ಸೀದಾ ಮಠದ ದಾರಿ ಹಿಡಿದ ಆಂಜನೇಯ ಸಿರಿಗೆರೆ ಸ್ವಾಮಿಗಳ ಪಾದಕ್ಕೆರಗಿದ್ದರು. ಹಾಗಾಗಿಯೇ ಅವರು ಗೆಲ್ಲುವಂತಾಯ್ತು ಅನ್ನೋದು ಜನರ ಅಭಿಪ್ರಾಯ.
ಹೀಗೆ ರಾಜಕಾರಣದ ಪಾಳೇಗಾರಿಕೆಯ ರುಚಿ ಕಂಡಿರುವ ಜಗದ್ಗುರುಗಳಿಗೆ ಸಂಘ ಪರಿವಾರ ಆ ಸಾಮ್ರಾಜ್ಯವನ್ನು ಆಕ್ರಮಿಸಿಕೊಳ್ಳೋದು ಸುತರಾಂ ಇಷ್ಟವಿರಲಿಲ್ಲ. ಯಾಕೆಂದರೆ ಸಂಘದ ರಾಜಕಾರಣ ಶುರುವಾಗಿಬಿಟ್ಟರೆ ತಮ್ಮ ಮಠ ರಾಜಕಾರಣವನ್ನು ಮೂಲೆಗುಂಪು ಮಾಡುತ್ತಾರೆ ಎಂಬ ಆತಂಕ ಅವರಿಗಿತ್ತು. ಹಾಗಾಗಿ ಕರಾವಳಿ ಭಾಗದಿಂದ ಧರ್ಮ ರಾಜಕಾರಣದ ದಾಳಿ ಶುರುವಾಗುತ್ತಿದ್ದಂತೆಯೇ ಮಠ ರಾಜಕಾರಣ ಅದಕ್ಕೆ ಅಡ್ಡಗಾಲು ಹಾಕುತ್ತಿತ್ತು. ಕಾವಿಧಾರಿಗಳ ವಿರುದ್ಧ ಅಷ್ಟು ಸುಲಭಕ್ಕೆ ಪಿತೂರಿ ನಡೆಸಲಾಗದ ಸಂಘ ಪರಿವಾರವೂ ಕೈಕೈ ಹಿಸುಕಿಕೊಳ್ಳುತ್ತಾ ತನ್ನ ಪ್ರಯತ್ನದಿಂದ ಹಿಂದೆ ಸರಿಯುತ್ತಿತ್ತು.
ಮಾದಾರ ಚೆನ್ನಯ್ಯ ಎಂಟ್ರಿ
ಆದರೆ ಈ ಸಲ ಸಂಘ ಪರಿವಾರ ಮಾದಾರ ಚೆನ್ನಯ್ಯ ಎಂಬ ರಾಜಕೀಯ ಹಪಾಹಪಿತನದ ಕಾವಿಧಾರಿಯನ್ನು ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮದ ಇಶ್ಯೂವನ್ನು ಮುಂದಿಟ್ಟುಕೊಂಡು ಸಿರಿಗೆರೆ ಸ್ವಾಮಿಗಳ ಮನವೊಲಿಸಿ ಅಖಾಡಕ್ಕಿಳಿಯುವ ಪ್ರಯತ್ನ ಮಾಡುತ್ತಿದೆ. ಸದ್ಧರ್ಮ ಪೀಠಕ್ಕೂ, ಆಂಜನೇಯಗೂ ಕೊಂಚ ವ್ಯತ್ಯಾಸ ಮೂಡಿಬಂದಿದೆ. ಅಲ್ಲದೇ, ಸಿದ್ದು ಸರ್ಕಾರ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಕೊಡಲು ಮುಂದಾಗಿರೋದು ಮಠ ರಾಜಕಾರಣದ ತಮಗೆ ಅನುಕೂಲವಾಗುತ್ತೋ, ಅನಾನುಕೂಲವಾಗುತ್ತೋ ಎಂಬ ಗೊಂದಲ ಸಿರಿಗೆರೆ ಸ್ವಾಮಿಗಳನ್ನು ಕಾಡುತ್ತಿದೆ. ಪರವಾಗಿ ನಿಲ್ಲಬೇಕೊ, ವಿರೋಧ ವ್ಯಕ್ತಪಡಿಸಬೇಕು ಎನ್ನುವ ಡೋಲಾಯಮಾನ ಸ್ಥಿತಿಯಲ್ಲಿದ್ದಾರೆ. ಬಹುಶಃ ಯಡಿಯೂರಪ್ಪ ನೇತೃತ್ವದಲ್ಲಿ ಇಂತಹ ಪ್ರಯತ್ನ ನಡೆದಿದ್ದರೆ ಅದಕ್ಕೆ ಬೆಂಬಲ ನೀಡುತ್ತಿದ್ದರೇನೊ ಆದರೆ ಸಿದ್ದು ಮುಂದಾಳತ್ವದಲ್ಲಿ ಪ್ರತ್ಯೇಕ ಧರ್ಮದ ಪ್ರಯತ್ನ ನಡೆಯುತ್ತಿರೋದು ಅವರಿಗೆ ಕೊಂಚ ಕಸಿವಿಸಿ ಉಂಟುಮಾಡಿದೆ ಅಂತ ಮಠದ ಆವರಣದೊಳಗೇ ಮಾತುಗಳು ಕೇಳಿಬರುತ್ತಿವೆ. ಇದನ್ನೇ ಸಂಘ ಪರಿವಾರ ಎನ್‍ಕ್ಯಾಶ್ ಮಾಡಿಕೊಂಡು ಕೋಟೆ ನಾಡಿನಲ್ಲಿ ತನ್ನ ಪ್ರಭಾವಳಿ ವಿಸ್ತರಿಸಲು ಹವಣಿಸುತ್ತಿದೆ. ಜೊತೆಗೆ ಮಾದಾರ ಚೆನ್ನಯ್ಯ ಸ್ವಾಮಿಗೂ, ಮಾದಾರ ಪೀಠದ ಕಾರ್ಯದರ್ಶಿಯಾದ ಮಂತ್ರಿ ಆಂಜನೇಯಗೂ ವೈಮನಸ್ಸು ಶುರುವಾಗಿರೋದ್ರಿಂದ ದಲಿತ ಮಂತ್ರಿಯನ್ನು ಸೋಲಿಸಲು ದಲಿತ ಸ್ವಾಮಿಯನ್ನೇ ಅದು ದಾಳವಾಗಿ ಬಳಸಿಕೊಳ್ಳಲು ಮುಂದಾಗಿದೆ.
ಮಾದಾರ ಚನ್ನಯ್ಯ, ಮಾದಿಗ ಸಮುದಾಯದ ಪೀಠಾಧಿಪತಿಯಾದರೂ ಮನುವಾದಿಗಳ ಕೈಗೊಂಬೆಯಂತೆ ವರ್ತಿಸುತ್ತಾ ಬಂದವರು. ಪೂರ್ವಾಶ್ರಮದಲ್ಲಿ ಪತ್ರಕರ್ತನ ಗೆಟಪ್ಪಿನಲ್ಲಿ ಮಿಂಚಿದ್ದ ಈ ಸ್ವಾಮೀಜಿ ರಾಜಕೀಯ ಮಹತ್ವಾಕಾಂಕ್ಷಿ. ಕೈಪಾಳೆಯದಲ್ಲಿ ತನ್ನ ರಾಜಕೀಯ ಕನವರಿಕೆ ಈಡೇರದು ಎಂದರಿತು ಬಿಜೆಪಿಯ ಬೆನ್ನುಹತ್ತಿ ಹೊರಟಿದ್ದಾರೆ. ಎಲೆಕ್ಷನ್ ಬಿಸಿ ಶುರುವಾದ ಆರಂಭದಲ್ಲಿ ಮಾದಾರ ಚೆನ್ನಯ್ಯರು ಬಿಜೆಪಿ ಅಭ್ಯರ್ಥಿಯಾಗಿ ನೇರ ಚುನಾವಣಾ ಅಖಾಡಕ್ಕೇ ಇಳಿಯುತ್ತಾರೆ ಎಂಬ ಮಾತು ಕೇಳಿಬಂದಿದ್ದವು. ಬಹುಶಃ ಉತ್ತರ ಪ್ರದೇಶದಲ್ಲಿ ಕಾವಿಧಾರಿ ಯೋಗಿ ಆದಿತ್ಯನಾಥನನ್ನು ಸಿಎಂ ಮಾಡಿದ್ದರಿಂದ ಪುಳಕಗೊಂಡು ಈ ಹೈವೇ ಸ್ವಾಮಿ ಅಂತಹ ಸಾಹಸ ಮಾಡಿದ್ದರೂ ಮಾಡಿರಬಹುದು. ಆದರೆ ಈಗ ಆ ಮಾತು ತಣ್ಣಗಾಗಿದೆ. ಆದರೂ 2019ರ ಎಂಪಿ ಎಲೆಕ್ಷನ್‍ನಲ್ಲಿ ಚಿತ್ರದುರ್ಗದಿಂದ ಬಿಜೆಪಿ ಹುರಿಯಾಳಾಗುತ್ತಾರೆ ಎಂಬ ಗಾಳಿಸುದ್ದಿ ಇದೆ. ಬಹುಶಃ ಈ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಆಂಜನೇಯರನ್ನು ಮಣಿಸಲು ಸಂಘ ಪರಿವಾರ ಮಾದಾರ ಚೆನ್ನಯ್ಯರ ಮೂಗಿಗೆ ಅಂತಹ ತುಪ್ಪ ಸವರಿದ್ದರೂ ಸವರಿರಬಹುದು. ವಾಸ್ತವವೇನೆಂದರೆ, ಮಾದಿಗ ಸಮುದಾಯ ಈ ಸ್ವಾಮಿಗೆ ಕೈಮುಗಿಯಬಹುದೇ ವಿನಾಃ ಅವರ ಮಾತು ಕೇಳಿ ಮತ ಹಾಕುವಂತಹ ಪರಿಸ್ಥಿತಿ ಹೊಳಲ್ಕೆರೆ ಮಟ್ಟಿಗಂತೂ ಇಲ್ಲ.
ಬಿಜೆಪಿಯ ಬಂಡಾಯ
ಸಂಘ ಪರಿವಾರದ ಇಷ್ಟೆಲ್ಲ ಕಸರತ್ತುಗಳ ಹೊರತಾಗಿಯೂ ಹೊಳಲ್ಕೆರೆಯಲ್ಲಿ ಆಂಜನೇಯ ಪರವಾದ ವಾತಾವರಣವೇ ಇದೆ. ಅದಕ್ಕೆ ಮುಖ್ಯ ಕಾರಣ ಸ್ಥಳೀಯ ಬಿಜೆಪಿಯೊಳಗಿನ ಬಿರುಕು. 2008ರಲ್ಲಿ ಬಿಜೆಪಿಯಿಂದ ಗೆದ್ದು 2013ರಲ್ಲಿ ಯಡಿಯೂರಪ್ಪನವರ ಕೆಜೆಪಿಗೆ ಕೆನೆದು ಮಾಜಿ ಶಾಸಕನಾಗಿರುವ ಚಂದ್ರಪ್ಪನಿಗೆ ಈಗ ಆತನ ದುರಹಂಕಾರಿ ನಡವಳಿಕೆಯೇ ಮುಳುವಾಗುತ್ತಿದೆ. ಚಂದ್ರಪ್ಪನ ವಿರೋಧಿಗಳು ಈತನಿಗೆ ಟಿಕೆಟ್ ತಪ್ಪಿಸಲು, ಪರ್ಯಾಯ ಅಭ್ಯರ್ಥಿಯನ್ನು ರೂಪಿಸಲು, ಅಕಸ್ಮಾತ್ ಆತನಿಗೆ ಟಿಕೆಟ್ ಸಿಕ್ಕರೂ ಸೋಲಿಸಲು ಸಜ್ಜಾಗಿದ್ದಾರೆ. ಆತನಿಗೆ ಪರ್ಯಾಯವಾಗಿ ಹನುಮಕ್ಕ ಎಂಬ ಮಹಿಳೆಯನ್ನು ಬಿಜೆಪಿ ಅಭ್ಯರ್ಥಿಯಾಗಿಸುವ ಕಸರತ್ತುಗಳು ನಡೆದಿದ್ದವು. ಆದರೆ ಯಡಿಯೂರಪ್ಪ ಮಾತ್ರವಲ್ಲದೇ ದಾವಣಗೆರೆ ಸಂಸದ ಸಿದ್ದೇಶ್ವರರ ಕೃಪಾಕಟಾಕ್ಷವೂ ಇರೋದ್ರಿಂದ ಟಿಕೆಟ್ ರೇಸ್‍ನಲ್ಲಿ ಚಂದ್ರಪ್ಪ, ಹನುಮಕ್ಕನಿಗಿಂತ ಬಹಳಷ್ಟು ಮುಂದಿದ್ದಾನೆ. ಆದಾಗ್ಯೂ ಚಂದ್ರಪ್ಪನ ವಿರೋಧಿಗಳು ಆತನನ್ನು ಮಣಿಸುವ ಹಿಡನ್ ಕಾರ್ಯತಂತ್ರವನ್ನು ಜೀವಂತವಾಗಿಟ್ಟಿದ್ದಾರೆ. ಚಂದ್ರಪ್ಪನೇ ಬಿಜೆಪಿ ಅಭ್ಯರ್ಥಿ ಎಂದಾದರೆ ಹನುಮಕ್ಕ ಸೇರಿದಂತೆ ಶಶಿಕುಮಾರನಾಯ್ಕ, ಶಶಿನಾಯ್ಕ, ದೇವೇಂದ್ರ ನಾಯ್ಕ ಹೀಗೆ ನಾಲ್ವರನ್ನು ಅಥವಾ ಕನಿಷ್ಠಪಕ್ಷ ಒಬ್ಬರನ್ನು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿಸಲು ಕಸರತ್ತು ನಡೆಸಿದ್ದಾರೆ.
ಹಾಗಂತ ಆಂಜನೇಯ ಮೈಮರೆತು ಕೂತರೆ, ಸಂಘ ಪರಿವಾರ ಮೇಲುಗೈ ಸಾಧಿಸುವ ಸಾಧ್ಯತೆಯುಂಟು. ಜೊತೆಗೆ ಆಂಜನೇಯ, ತನ್ನದೇ ಪಟಾಲಮ್ಮು ಪಡೆಯನ್ನು ಹೊರತುಪಡಿಸಿ ಜನಸಾಮಾನ್ಯರ ಕೈಗೆ ಸರಾಗವಾಗಿ ಲಭಿಸುವುದೇ ದುಸ್ತರ ಎನ್ನುವಂತೆ ಮಾಡಿಕೊಂಡು ಬಂದಿದ್ದಾರೆ. ಅದೂಅಲ್ಲದೇ, `ವಿಜಯಾ ಬ್ಯಾಂಕ್’ ನಾಣ್ಣುಡಿಯೂ ಅವರ ಮೈಲೇಜಿಗೆ ಬ್ರೇಕು ಹಾಕುತ್ತಿದೆ. ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಮತ್ತು ಎಪಿಎಂಸಿ ಎಲೆಕ್ಷನ್‍ನಲ್ಲಿ ಹೊಳಲ್ಕೆರೆಯಲ್ಲಿ ಕಾಂಗ್ರೆಸ್ ಪಾರ್ಟಿ ಮುಗ್ಗರಿಸಿದ್ದು ಆಂಜನೇಯರ ಬಗ್ಗೆ ಜನರಿಗೆ ಇರುವ ಇಂಥಾ ಅಸಮಾಧಾನಗಳಿಂದಾಗಿಯೇ. ಅಲ್ಲದೇ ಎಲ್ಲಾ ಕಡೆ ಇರುವಂತೆ ಶೂದ್ರ ಸಮುದಾಯದೊಳಗೇ ಇರುವ, ಮುಖ್ಯವಾಗಿ ದಲಿತ ಸಮುದಾಯಗಳ ಎಡಗೈ ಬಲಗೈ ನಡುವಿನ ಆಂತರಿಕ ತಿಕ್ಕಾಟಗಳನ್ನು ಆಂಜನೇಯ ನಾಜೂಕಾಗಿ ನಿಭಾಯಿಸದೇ ಹೋದಲ್ಲಿ ಕುರುಬ, ನಾಯಕ, ಮಡಿವಾಳರಂತಹ ಅಹಿಂದ ಮತಗಳೂ ಕಾಂಗ್ರೆಸ್‍ನಿಂದ ವಿಮುಖಗೊಳ್ಳುವ ಸಂಭಾವ್ಯತೆ ಹೊಳಲ್ಕೆರೆಯಲ್ಲಿ ಕಾಣಬರುತ್ತಿದೆ. ಈ ಕೆಮಿಸ್ಟ್ರಿಯನ್ನು ಆಂಜನೇಯ ಅರ್ಥ ಮಾಡಿಕೊಳ್ಳದೇ ಹೋದಲ್ಲಿ ಮೇ 15ರಂದು ಹೊಳಲ್ಕೆರೆಯಲ್ಲಿ ಕೇಸರಿ ಪಡೆ ಕೇಕೆ ಹಾಕುವ ಸಾಧ್ಯತೆಯನ್ನು ತಳ್ಳಿ ಹಾಕಲಾಗುವುದಿಲ್ಲ.
– ಟಿ.ಎನ್. ಷಣ್ಮುಖ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...